

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಐಮಂಗಲ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಶುಕ್ರವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದು ಪಲ್ಟಿಯಾಗಿದೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, 15 ಕ್ಕೂ ಅಧಿಕ ಮಂದಿ ಕಾಲೇಜು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಮೃತರನ್ನು ಬಸ್ ಚಾಲಕ ಮತ್ತು ನಿರ್ವಾಹಕ ಎಂದು ಗುರುತಿಸಲಾಗಿದೆ. ಮೃತರ ನಿಖರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.
ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಅರೆಕೆರೆಯಲ್ಲಿರುವ ಖಾಸಗಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಆಗಸ್ಟ್ 16ರಂದು ಪ್ರವಾಸಕ್ಕಾಗಿ ಗೋವಾಕ್ಕೆ ತೆರಳಿದ್ದರು. ಪ್ರವಾಸ ಮುಗಿಸಿಕೊಂಡು ಗೋವಾದಿಂದ ಬೆಂಗಳೂರಿಗೆ ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಚಾಲಕ ವಾಹನ ಚಲಾಯಿಸುತ್ತಿದ್ದಾಗ ನಿದ್ರೆಗೆ ಜಾರಿದ್ದೇ ಅಪಘಾತಕ್ಕೆ ಪ್ರಮುಖ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಅಪಘಾತದ ತೀವ್ರತೆಗೆ ಬಸ್ ಸಂಪೂರ್ಣವಾಗಿ ಜಖಂಗೊಂಡಿದೆ. ಗಾಯಾಳುಗಳನ್ನು ತಕ್ಷಣ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ರಂಜಿತ್ ಕುಮಾರ್ ಬಂಡಾರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಐಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.