KPSC ಕರ್ಮಕಾಂಡ: ಅತ್ತ ED ದಾಳಿ, ಇತ್ತ IAS ಅಧಿಕಾರಿ ನಿಗೂಢ ಕಣ್ಮರೆ! ವಿಚಾರಣೆಗೆ ಹೆದರಿ ನಾಪತ್ತೆಯಾದ್ರಾ ಜ್ಞಾನೇಂದ್ರ?

ಕೆಪಿಎಸ್ ಸಿ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿ ತೀವ್ರ ಶೋಧ ನಡೆಸಿದ್ದರು. ಈ ದಾಳಿ ಬೆನ್ನಲ್ಲೇ ಪಶುವೈದ್ಯಾಧಿಕಾರಿ ಹುದ್ದೆಗಳಿಗೆ ಪರೀಕ್ಷೆ ನಡೆಸಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ ನಾಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.
IAS officer Gyanendra Kumar goes missing, police trace his travel to Delhi
ಜ್ಞಾನೇಂದ್ರ ಕುಮಾರ್
Updated on

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ ಸಿ) ನಡೆಸಿದ್ದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಅಕ್ರಮ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ED) ಕರ್ನಾಟಕದ 21ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲಕ್ಕೆ ಬೃಹತ್ ಶೋಧ ಕಾರ್ಯಾಚರಣೆ ನಡೆಸಿತ್ತು.

ಕೆಪಿಎಸ್ ಸಿ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿ ತೀವ್ರ ಶೋಧ ನಡೆಸಿದ್ದರು. ಈ ದಾಳಿ ಬೆನ್ನಲ್ಲೇ ಪಶುವೈದ್ಯಾಧಿಕಾರಿ ಹುದ್ದೆಗಳಿಗೆ ಪರೀಕ್ಷೆ ನಡೆಸಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ ನಾಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

ಜ್ಞಾನೇಂದ್ರ ಕುಮಾರ್ ಅವರು KPSCಯಲ್ಲಿ ಪರೀಕ್ಷಾ ನಿಯಂತ್ರಕರಾಗಿ ಕೆಲಸ ಮಾಡಿದ್ದರು. ಪಶುವೈದ್ಯಾಧಿಕಾರಿ ಪರೀಕ್ಷೆ, KAS ಪರೀಕ್ಷೆಯನ್ನು ಕೂಡ ಅವರು ನಡೆಸಿದ್ದರು. KAS ಪರೀಕ್ಷೆ ಅಕ್ರಮ ಆರೋಪದ ಮೇಲೆ ಶಾಂತ ಹೊಸಮನಿ ವಿರುದ್ಧ ಎಫ್‌ಐಆರ್ ಆಗಿತ್ತು. ಇಡಿ ಕೂಡ ಶಾಂತ ಹೊಸಮನಿ ಅವರ ಮನೆ ಮೇಲೆ ದಾಳಿ ನಡೆಸಿತ್ತು. ಆದರೆ, ಈಗ ಜ್ಞಾನೇಂದ್ರ ಕುಮಾರ್ ನಾಪತ್ತೆ ಹಿಂದೆ ಸಾಕಷ್ಟು ಅನುಮಾನ ವ್ಯಕ್ತವಾಗಿವೆ.

IAS officer Gyanendra Kumar goes missing, police trace his travel to Delhi
ರಾಜ್ಯಪಾಲರು ಹೊರಡಿಸಿದ್ದ ಅಮಾನತು ಆದೇಶ ರದ್ದು: KPSC ಅಧ್ಯಕ್ಷರನ್ನಾಗಿ ಶಿವಶಂಕರಪ್ಪ ಮರುನೇಮಕಕ್ಕೆ ಹೈಕೋರ್ಟ್ ಸೂಚನೆ

ಜ್ಞಾನೇಂದ್ರ ಕುಮಾರ್ ಅವರು ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಏಕಾಏಕಿ ಕಣ್ಮರೆಯಾಗಿದ್ದಾರೆ. ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ ಇತ್ತೀಚಿನ ದಾಳಿಯ ಬೆನ್ನಲ್ಲೇ ಈ ಬೆಳವಣಿಗೆ ನಡೆದಿರುವುದು ರಾಜ್ಯದ ಆಡಳಿತ ವಲಯದಲ್ಲಿ ತೀವ್ರ ಆತಂಕ ಸೃಷ್ಟಿಸಿದೆ.

ಕಳೆದ ಗುರುವಾರ ತಾರತುರಿಯಲ್ಲಿ ಏರ್ ಟಿಕೆಟ್ ಬುಕ್ ಮಾಡಿದ್ದ ಐಎಎಸ್ ಅಧಿಕಾರಿ, ಆಗಸ್ಟ್ 20 ರಂದು ದೆಹಲಿಗೆ ತೆರಳಿದ್ದಾರೆ ಎನ್ನಲಾಗಿದೆ. ಅಂದು ಮಧ್ಯಾಹ್ನ 3 ಗಂಟೆಯ ‌ ಫ್ಲೈಟ್‌ಗೆ 1 ಗಂಟೆ 31 ನಿಮಿಷಕ್ಕೆ ಟಿಕೆಟ್ ಬುಕ್ ಆಗಿದೆ. ಒಂದೂವರೆ ಗಂಟೆ ಮುಂಚಿತವಾಗಿ ಜ್ಞಾನೇಂದ್ರ ಕುಮಾರ್ 30,253 ರೂಪಾಯಿ ಹಣ ನೀಡಿ ತರಾತುರಿಯಲ್ಲಿ ಟಿಕೆಟ್ ಬುಕ್ಕಿಂಗ್ ಮಾಡಿದ್ದಾರೆ. HDFC ಕ್ರೆಡಿಟ್ ಕಾರ್ಡ್‌ನಲ್ಲಿ ಇಂಡಿಗೋ ಫ್ಲೈಟ್‌ಗೆ ಟಿಕೆಟ್ ಬುಕ್ ಮಾಡಿದ್ದಾರೆ.

ಆದರೆ, ಏರ್‌ಪೋರ್ಟ್‌ ಆವರಣಕ್ಕೆ ಬಂದ ಕೆಲವೇ ಹೊತ್ತಿನಲ್ಲಿ ಅವರ ಮೊಬೈಲ್ ಸ್ವಿಚ್ಡ್ ಆಫ್ ಆಗಿದೆ. ಅವರು ನಿಜಕ್ಕೂ ವಿಮಾನ ಹತ್ತಿ ದೆಹಲಿಗೆ ಪ್ರಯಾಣಿಸಿದ್ದಾರೆಯೇ ಅಥವಾ ಬೇರೆಡೆ ತೆರಳಿದ್ದಾರೆಯೇ ಎಂಬುದು ನಿಗೂಢವಾಗಿಯೇ ಉಳಿದಿದೆ. ಕುಟುಂಬಸ್ಥರು ಮತ್ತು ಆಪ್ತರು ಅವರನ್ನು ಸಂಪರ್ಕಿಸಲು ನಡೆಸಿದ ಸತತ ಪ್ರಯತ್ನಗಳು ವಿಫಲವಾಗಿವೆ.

ನಗರ ಪೊಲೀಸ್ ಆಯುಕ್ತರಿಗೆ ಮಾಹಿತಿ, ಸಿಸಿಟಿವಿ ಪರಿಶೀಲನೆ

ಸಹೋದ್ಯೋಗಿ ಅಧಿಕಾರಿಯೊಬ್ಬರು ನೀಡಿದ ಮಹತ್ವದ ಮಾಹಿತಿಯ ಆಧಾರದ ಮೇಲೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ತನಿಖೆಗೆ ಸೂಚಿಸಿದ್ದಾರೆ.

ಪೊಲೀಸರ ವಿಶೇಷ ತಂಡವು ವಿಮಾನ ನಿಲ್ದಾಣ ಹಾಗೂ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಜಾಲಾಡುತ್ತಿದ್ದು, ಅಧಿಕಾರಿಯ ಕೊನೆಯ ಚಲನವಲನಗಳನ್ನು ಪತ್ತೆಹಚ್ಚಲು ಮುಂದಾಗಿದೆ.

ಸದ್ಯ ಎಂಎಸ್‌ಎಂಇ ವ್ಯವಸ್ಥಾಪಕ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಜ್ಞಾನೇಂದ್ರ ಕುಮಾರ್ ಅವರಿಗೆ ಈ ಹಿಂದೆ ಕೆಲವು ಅನಾರೋಗ್ಯ ಸಮಸ್ಯೆಗಳಿದ್ದವು ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com