

ಹುಬ್ಬಳ್ಳಿ: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ಹುಲಿ ಕಾಣಿಸಿಕೊಂಡಿರುವುದು ಕ್ಯಾಮೆರಾದಲ್ಲಿ ದಾಖಲಾಗಿರುವ ಬೆನ್ನಲ್ಲೇ, ಅದನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿದ್ಧತೆ ಆರಂಭಿಸಿದೆ.
ಕಾರ್ಯಾಚರಣೆಗೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ತಜ್ಞರ ತಂಡವನ್ನು ಕರೆಸಿಕೊಳ್ಳುವ ಸಾಧ್ಯತೆ ಇದೆ. ಹುಲಿಗೆ ಅರವಳಿಕೆ ನೀಡಲು ಅಗತ್ಯವಿರುವ ಉಪಕರಣಗಳೊಂದಿಗೆ ಸಿದ್ಧವಾಗಿರುವಂತೆ ಹಂಪಿ ಮೃಗಾಲಯದ ಸಿಬ್ಬಂದಿಗೂ ಸೂಚಿಸಲಾಗಿದೆ.
ಕಳೆದ ಮೂರು ತಿಂಗಳಿಂದ ಸಾಣಾಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹುಲಿ ಕಾಣಿಸಿಕೊಂಡಿದೆ ಎಂಬ ಮಾಹಿತಿ ಸ್ಥಳೀಯರಿಂದ ಬಂದಿದ್ದರೂ, ಈವರೆಗೆ ಅದರ ದೃಶ್ಯ ದಾಖಲೆ ಲಭ್ಯವಾಗಿರಲಿಲ್ಲ.
ಭಾನುವಾರ ರಾತ್ರಿ ಅರಣ್ಯ ಇಲಾಖೆ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳ ಪೈಕಿ ಒಂದರಲ್ಲಿ ಹುಲಿಯ ಚಲನವಲನ ಸೆರೆಯಾಗಿದೆ.
ಇದಾದ ಬಳಿಕ ಅಲೆದಾಡುತ್ತಿರುವ ಹುಲಿಯಿಂದ ಯಾವುದೇ ಮಾನವ-ವನ್ಯಜೀವಿ ಸಂಘರ್ಷ ಸಂಭವಿಸದಂತೆ ಹೆಚ್ಚುವರಿ ಅರಣ್ಯ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿಯನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ.
ಹುಲಿಯನ್ನು ಸೆರೆ ಹಿಡಿಯುವ ಕಾರ್ಯಾಚರಣೆ ಕುರಿತು ಹಿರಿಯ ಅರಣ್ಯ ಅಧಿಕಾರಿಗಳು ಸೋಮವಾರ ಗಂಗಾವತಿ ತಾಲೂಕಿನ ವಿರೂಪಾಪುರ ಗಡ್ಡೆ ಬಳಿ ಸಭೆ ನಡೆಸಿ ಚರ್ಚೆ ನಡೆಸಿದ್ದಾರೆ. ಆನೆಗುಂದಿ ಸಮೀಪದ ಸರ್ವೆ ನಂಬರ್ 1ರ ಬಳಿ ಹುಲಿ ಕಾಣಿಸಿಕೊಂಡಿರುವುದು ದೃಢಪಟ್ಟಿದೆ.
ಸ್ಥಳೀಯರು ಈ ಹಿಂದೆಯೇ ಹುಲಿ ಕಾಣಿಸಿಕೊಂಡಿರುವ ಬಗ್ಗೆ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಆದರೆ ಅಧಿಕಾರಿಗಳು ಆ ಮಾಹಿತಿಯನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ ಎಂಬ ಆರೋಪವೂ ಕೇಳಿಬಂದಿದೆ.
ಇದೀಗ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ಅರಣ್ಯ ಇಲಾಖೆ, ಹುಲಿಯನ್ನು ಸೆರೆ ಹಿಡಿಯಲು ಕಾರ್ಯಾಚರಣೆ ರೂಪಿಸುತ್ತಿದೆ. ಈ ಹಿನ್ನೆಲೆಯಲ್ಲಿ ವಿರೂಪಾಪುರ ಗಡ್ಡೆಯಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಲಾಗಿದೆ.
ಗಂಗಾವತಿ ತಾಲೂಕಿನ ಸಾಣಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಗ್ರಾಮ ಪಂಚಾಯಿತಿ ಸಿಬ್ಬಂದಿ ಧ್ವನಿವರ್ಧಕಗಳ ಮೂಲಕ ಜನರಿಗೆ ಎಚ್ಚರಿಕೆ ನೀಡುತ್ತಿದ್ದಾರೆ. ಒಬ್ಬರೇ ಓಡಾಡದಂತೆ ಹಾಗೂ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಗ್ರಾಮಸ್ಥರಿಗೆ ಸೂಚಿಸಲಾಗಿದೆ.
ಹುಲಿ ಕಾಣಿಸಿಕೊಂಡಿರುವುದರಿಂದ ಆತಂಕಗೊಂಡಿರುವ ಗ್ರಾಮಸ್ಥರು, ಹುಲಿಯನ್ನು ಶೀಘ್ರವೇ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಸೆರೆ ಹಿಡಿಯುವ ಬದಲು ನಿಗಾ ವಹಿಸಿ: ತಜ್ಞರ ಸಲಹೆ
ಈ ನಡುವೆ ಹುಲಿಯನ್ನು ತಕ್ಷಣ ಸೆರೆ ಹಿಡಿದು ಬೇರೆಡೆಗೆ ಸ್ಥಳಾಂತರಿಸುವ ಬದಲು ಅದರ ಚಲನವಲನದ ಮೇಲೆ ನಿರಂತರ ನಿಗಾ ಇಡುವಂತೆ ವನ್ಯಜೀವಿ ತಜ್ಞರು ಸಲಹೆ ನೀಡಿದ್ದಾರೆ.
ಸ್ಥಳೀಯ ರೈತರು ಹುಲಿ ಕಾಣಿಸಿಕೊಂಡಿರುವ ಬಗ್ಗೆ ಹಲವು ಬಾರಿ ಮಾಹಿತಿ ನೀಡಿದ್ದರು. ಈ ಮಾಹಿತಿಯನ್ನು ಅರಣ್ಯ ಅಧಿಕಾರಿಗಳ ಗಮನಕ್ಕೂ ತರಲಾಗಿತ್ತು. ಆದರೆ, ಯಾರೂ ಅದನ್ನು ಗಂಭೀರವಾಗಿ ಪರಿಗಣಿಸಲಿಲ್ಲ.
ಕಳೆದ ಮೂರು ತಿಂಗಳಿನಿಂದ ಹುಲಿ ಈ ಪ್ರದೇಶದಲ್ಲೇ ವಾಸಿಸುತ್ತಿದ್ದು, ಯಾವುದೇ ಮನುಷ್ಯನಿಗೆ ಹಾನಿ ಮಾಡಿಲ್ಲ. ಅದನ್ನು ಸೆರೆ ಹಿಡಿಯುವ ಮುನ್ನ ಅರಣ್ಯ ಇಲಾಖೆ ತಜ್ಞರ ಅಭಿಪ್ರಾಯ ಪಡೆಯಬೇಕು” ಎಂದು ವನ್ಯಜೀವಿ ತಜ್ಞರೊಬ್ಬರು ಹೇಳಿದ್ದಾರೆ.