ಶಿವಮೊಗ್ಗ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಇಲ್ಲಿನ ರೈಲ್ವೆ ಸೇತುವೆಯಿಂದ ತಮ್ಮ ಮೂವರು ಮಕ್ಕಳೊಂದಿಗೆ ತುಂಗಾ ನದಿಗೆ ಹಾರಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಈ ಘಟನೆಯಲ್ಲಿ ನಾಪತ್ತೆಯಾಗಿರುವ ಅವರ ಇಬ್ಬರು ಪುತ್ರಿಯರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಈ ಘಟನೆಯು ಸೋಮವಾರ ಸಂಜೆ ಸುಮಾರು 7.30ರ ಸುಮಾರಿಗೆ ನಡೆದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಸ್ಥಳೀಯ ಯುವಕರು ಮಹಿಳೆ ಮತ್ತು ಆಕೆಯ 11 ತಿಂಗಳ ಮಗನನ್ನು ರಕ್ಷಿಸಿದ್ದಾರೆ. ಆದರೆ, ಆಕೆಯ ಮತ್ತಿಬ್ಬರು ಅಪ್ರಾಪ್ತ ಹೆಣ್ಣುಮಕ್ಕಳು ಇನ್ನೂ ನಾಪತ್ತೆಯಾಗಿದ್ದಾರೆ. ನಾಪತ್ತೆಯಾಗಿರುವ ಮಕ್ಕಳ ವಯಸ್ಸು 6 ಮತ್ತು 4 ವರ್ಷ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಚಿತ್ರದುರ್ಗ ಜಿಲ್ಲೆಯ ಹೊಸೂರು ಗ್ರಾಮದ ನಿವಾಸಿಯಾದ ಭವಾನಿ, ಮೊದಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ನದಿಗೆ ತಳ್ಳಿದ ನಂತರ, ತನ್ನ ಮಗನೊಂದಿಗೆ ತಾನೂ ನದಿಗೆ ಹಾರಿದ್ದಾರೆ. ಮಹಿಳೆ ಮತ್ತು ಆಕೆಯ ಮಗನನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತುಂಗಾ ನದಿಯಲ್ಲಿ ಮಂಗಳವಾರವೂ ಶೋಧ ಕಾರ್ಯ ಮುಂದುವರಿದಿದ್ದು, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಸಿಬ್ಬಂದಿ ಆ ಇಬ್ಬರು ಬಾಲಕಿಯರಿಗಾಗಿ ಶೋಧ ನಡೆಸಿದ್ದಾರೆ. ಈ ಸಂಬಂಧ ಮುಂದಿನ ತನಿಖೆ ನಡೆಯುತ್ತಿದೆ.