ಕಸ್ತೂರಿರಂಗನ್ ವರದಿ ವಿರುದ್ಧ ರಾಜ್ಯ ಸರ್ಕಾರ ಸಮರ: ಕೇಂದ್ರದ ಕರಡು ಅಧಿಸೂಚನೆ ವಿರುದ್ಧ ವಿಶೇಷ ಅಧಿವೇಶನಕ್ಕೆ ಮುಂದು..!

ಈ ವಿಚಾರವನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು. ಅಗತ್ಯವಿದ್ದರೆ ವಿಧಾನಮಂಡಲದ ವಿಶೇಷ ಅಧಿವೇಶನ ಕರೆದು ನಿರ್ಣಯ ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುವುದು.
File photo
ಸಂಗ್ರಹ ಚಿತ್ರ
Updated on

ಬೆಂಗಳೂರು: ಕೇಂದ್ರ ಸರ್ಕಾರ ಹೊರಡಿಸಿರುವ ಕಸ್ತೂರಿರಂಗನ್ ವರದಿಯ 7ನೇ ಕರಡು ಅಧಿಸೂಚನೆಯನ್ನು ಸಂಪೂರ್ಣವಾಗಿ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಈ ಸಂಬಂಧ ಕೇಂದ್ರಕ್ಕೆ ಬಲವಾದ ಆಕ್ಷೇಪಣೆ ಸಲ್ಲಿಸಲು ಮತ್ತು ವರದಿ ವಿರುದ್ಧ ಸರ್ವಾನುಮತದ ನಿರ್ಣಯ ಅಂಗೀಕರಿಸಲು ಒಂದು ದಿನದ ವಿಶೇಷ ಜಂಟಿ ಸದನ ಅಧಿವೇಶನ ನಡೆಸಲು ಮುಂದಾಗಿದೆ.

ತಮ್ಮ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಪಶ್ಚಿಮ ಘಟ್ಟಗಳಿಗೆ ಸಂಬಂಧಿಸಿದ ಡಾ. ಕೆ. ಕಸ್ತೂರಿರಂಗನ್ ವರದಿಯ ಆಧಾರದ ಮೇಲೆ ಕೇಂದ್ರ ಸರ್ಕಾರ ಹೊರಡಿಸಿರುವ 7ನೇ ಕರಡು ಅಧಿಸೂಚನೆಯನ್ನು ತಿರಸ್ಕರಿಸಿ ನಿರ್ಣಯ ಅಂಗೀಕರಿಸಲು ವಿಧಾನಮಂಡಲದ ಒಂದು ದಿನದ ವಿಶೇಷ ಅಧಿವೇಶನ ಕರೆಯಲಾಗುವುದು ಎಂದು ಹೇಳಿದರು.

ಈ ವಿಚಾರವನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು. ಅಗತ್ಯವಿದ್ದರೆ ವಿಧಾನಮಂಡಲದ ವಿಶೇಷ ಅಧಿವೇಶನ ಕರೆದು ನಿರ್ಣಯ ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುವುದು ಎಂದು ತಿಳಿಸಿದರು.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ 2024ರ ಸೆಪ್ಟೆಂಬರ್‌ನಲ್ಲೇ ಸಚಿವ ಸಂಪುಟ ಸಭೆಯಲ್ಲಿ ಕಸ್ತೂರಿರಂಗನ್ ವರದಿಯ ಪ್ರಸ್ತಾವನೆಯನ್ನು ಕರ್ನಾಟಕ ವಿರೋಧಿಸಿತ್ತು. ಆದರೆ, ರಾಜ್ಯದ ವಿರೋಧವನ್ನು ಕೇಂದ್ರ ಸರ್ಕಾರ ಪರಿಗಣಿಸದೆ 7ನೇ ಕರಡು ಅಧಿಸೂಚನೆ ಹೊರಡಿಸಿದೆ ಎಂದು ಆರೋಪಿಸಿದರು.

ಕಸ್ತೂರಿರಂಗನ್ ವರದಿ ಜಾರಿಯಾದರೆ ಕರ್ನಾಟಕದ 10 ಜಿಲ್ಲೆಗಳು, 33 ತಾಲೂಕುಗಳು ಹಾಗೂ 1,449 ಗ್ರಾಮಗಳ ಜನರ ಜೀವನೋಪಾಯ ಮತ್ತು ಅಭಿವೃದ್ಧಿ ಚಟುವಟಿಕೆಗಳ ಮೇಲೆ ಪರಿಣಾಮ ಬೀರಲಿದೆ. ಒಟ್ಟು 20,668 ಚದರ ಕಿಲೋಮೀಟರ್ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸುವುದರಿಂದ ಕೃಷಿ, ಮೂಲಸೌಕರ್ಯ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಹಲವು ನಿರ್ಬಂಧಗಳು ಎದುರಾಗಬಹುದು ಎಂದರು.

ಇದೇ ವೇಳೆ “ಕಸ್ತೂರಿರಂಗನ್ ವರದಿಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ” ಎಂದು ಸ್ಪಷ್ಟವಾಗಿ ಹೇಳಿದ ಅವರು, ಈ ವಿಚಾರದಲ್ಲಿ ಕರ್ನಾಟಕದ ಆಕ್ಷೇಪವನ್ನು ಮತ್ತೊಮ್ಮೆ ಕೇಂದ್ರ ಸರ್ಕಾರಕ್ಕೆ ಬಲವಾಗಿ ತಿಳಿಸಲಾಗುವುದು ಎಂದರು.

File photo
ಉದ್ಯಾನವನದ ಜಾಗ ಖಾಸಗಿ ಸಂಸ್ಥೆಗಳಿಗೆ ನೀಡಲ್ಲ: ಪ್ರತಿಪಕ್ಷಗಳ ಆರೋಪಕ್ಕೆ ಡಿಕೆ ಶಿವಕುಮಾರ್ ತಿರುಗೇಟು

ರಾಜ್ಯದಲ್ಲಿ ಬರ ಪರಿಸ್ಥಿತಿಗೆ ಸಂಬಂಧಿಸಿದ ವೈಜ್ಞಾನಿಕ ಮೌಲ್ಯಮಾಪನ ವರದಿ ಸರ್ಕಾರಕ್ಕೆ ಲಭ್ಯವಾಗಿದೆ. ಬರಪೀಡಿತ ತಾಲೂಕುಗಳ ಪಟ್ಟಿಯನ್ನು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಬುಧವಾರ ಅಥವಾ ಗುರುವಾರ ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆ ಇದೆಯ

ಮೊದಲ ಹಂತದ ಮೌಲ್ಯಮಾಪನದಲ್ಲಿ 100ಕ್ಕೂ ಹೆಚ್ಚು ತಾಲೂಕುಗಳು ಬರಪೀಡಿತ ಎಂದು ಘೋಷಣೆಯಾಗುವ ನಿರೀಕ್ಷೆಯಿದೆ. ಮಳೆ ಪ್ರಮಾಣ ಹಾಗೂ ನೆಲದ ಪರಿಸ್ಥಿತಿಯನ್ನು ಆಧರಿಸಿ ನಂತರ ಮತ್ತೊಂದು ಹಂತದ ಮೌಲ್ಯಮಾಪನ ನಡೆಸಲಾಗುವುದು ಎಂದು ಹೇಳಿದರು.

ಬರಪೀಡಿತ ತಾಲೂಕುಗಳ ಘೋಷಣೆಯ ಬಳಿಕ ರಾಜ್ಯ ಸರ್ಕಾರ ನಿಯೋಗವನ್ನು ದೆಹಲಿಗೆ ಕಳುಹಿಸಿ ಕೇಂದ್ರದಿಂದ ಆರ್ಥಿಕ ನೆರವು ಕೋರಲಿದೆ. ಪರಿಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ತಂಡವನ್ನು ರಾಜ್ಯಕ್ಕೆ ಕಳುಹಿಸುವಂತೆಯೂ ಮನವಿ ಮಾಡಲಾಗುವುದು.

ವಿಧಾನಸಭೆ ಅಧಿವೇಶನದ ವೇಳೆ ಪ್ರತಿಪಕ್ಷಗಳು ಬರ, ನೀರಾವರಿ ಹಾಗೂ ರೈತರ ಸಮಸ್ಯೆಗಳ ಕುರಿತು ಧ್ವನಿ ಎತ್ತುವ ಬದಲು ರಾಜಕೀಯಕ್ಕೆ ಹೆಚ್ಚು ಆದ್ಯತೆ ನೀಡಿವೆ ಎಂದು ಆರೋಪಿಸಿದರು.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಮಾತನಾಡಿ, ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ರಾಜ್ಯ ಸರ್ಕಾರ ಅಗತ್ಯ ನೆರವು ನೀಡಲಿದೆ ಎಂದು ಹೇಳಿದರು.

ಪ್ರಸ್ತುತ ಮತದಾರರ ಪಟ್ಟಿಯಲ್ಲಿ ಒಂದು ಕೋಟಿಗೂ ಹೆಚ್ಚು ಹೆಸರುಗಳು ದಾಖಲಾಗಿಲ್ಲ ಎಂದು ಹೇಳಿದ ಅವರು, 45 ಲಕ್ಷಕ್ಕೂ ಹೆಚ್ಚು ಜನರಿಗೆ ನೋಟಿಸ್ ನೀಡಲಾಗುತ್ತಿದೆ ಎಂದರು. ಅಗತ್ಯವಿರುವವರಿಗೆ ಶಾಶ್ವತ ನಿವಾಸ ಹಾಗೂ ಜಾತಿ ಪ್ರಮಾಣಪತ್ರ ಸೇರಿದಂತೆ ದಾಖಲೆಗಳನ್ನು ಪಡೆಯಲು ಸರ್ಕಾರ ನೆರವು ನೀಡಲಿದೆ ಎಂದು ತಿಳಿಸಿದರು.

ರಾಜಕೀಯ ಪಕ್ಷಗಳ ಭೇದವಿಲ್ಲದೆ ಶಾಸಕರು ಹಾಗೂ ಬೂತ್ ಮಟ್ಟದ ಏಜೆಂಟರು ಮತದಾರರಿಗೆ ಅಗತ್ಯ ದಾಖಲೆಗಳನ್ನು ಒದಗಿಸಿಕೊಳ್ಳಲು ಮತ್ತು ನಮೂನೆ 6 ಹಾಗೂ 8 ಸಲ್ಲಿಸಲು ಸಹಾಯ ಮಾಡುವಂತೆ ಸೂಚಿಸಲಾಗಿದೆ ಎಂದು ಹೇಳಿದರು.

ಮತದಾರರ ಪಟ್ಟಿಯನ್ನು ಪರಿಶೀಲಿಸಲು ಚುನಾವಣಾ ಆಯೋಗವು ಬೂತ್ ಮಟ್ಟದಲ್ಲಿ ಸಭೆಗಳನ್ನು ನಡೆಸಬೇಕು ಹಾಗೂ ಮತದಾರರ ಪಟ್ಟಿಯನ್ನು ಸಾರ್ವಜನಿಕವಾಗಿ ಓದಿ ಹೇಳಬೇಕು ಎಂದು ಒತ್ತಾಯಿಸಿದರು.

ಇದೇ ವೇಳೆ, 16ರಿಂದ 35 ವರ್ಷದೊಳಗಿನ ಸುಮಾರು 7 ಲಕ್ಷ ಯುವಕರು ಈಗಾಗಲೇ ಭಾರತ್ ಜೋಡೋ ಯುವ ಸಂಘಗಳಿಗೆ ಆನ್‌ಲೈನ್ ಮೂಲಕ ನೋಂದಾಯಿಸಿಕೊಂಡಿದ್ದಾರೆ ಎಂದ ಅವರು, ಇದೀಗ ಆಫ್‌ಲೈನ್ ಸದಸ್ಯತ್ವಕ್ಕೂ ಅವಕಾಶ ಕಲ್ಪಿಸಲಾಗಿದೆ ಎಂದರು.

ಮಾದಕ ವಸ್ತುಗಳಿಗೆ ಬೇಡ, ಕ್ರೀಡೆಗೆ ಹೌದು” ಹಾಗೂ “ಮಾದಕ ವಸ್ತುಗಳಿಗೆ ಬೇಡ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಹೌದು” ಎಂಬ ಸಂದೇಶಗಳನ್ನು ಸಾರುವ ಮೂಲಕ ವಿವಿಧ ಸಮುದಾಯಗಳ ಯುವಕರನ್ನು ಒಟ್ಟಿಗೆ ಸೇರಿಸುವುದು ಈ ಸಂಘಗಳ ಉದ್ದೇಶವಾಗಿದೆ ಎಂದು ಹೇಳಿದರು.

ಬೆಂಗಳೂರು ಮಹಾನಗರ ವ್ಯಾಪ್ತಿಯ ಐದು ನಗರ ಪಾಲಿಕೆಗಳು ಸೇರಿದಂತೆ ಎಲ್ಲ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನವೆಂಬರ್-ಡಿಸೆಂಬರ್ ವೇಳೆಗೆ ನಡೆಸಬೇಕಾಗುತ್ತದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಎಸ್‌ಐಆರ್ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಿದೆ. ಚುನಾವಣೆ ವಿಳಂಬವಾದರೆ ಕೇಂದ್ರ ಸರ್ಕಾರದಿಂದ ಬರುವ ಅನುದಾನ ಹಾಗೂ ಹಣಕಾಸಿನ ನೆರವಿನ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಹೇಳಿದರು.

ಕಳೆದ ಎರಡು ದಿನಗಳಲ್ಲಿ ಶಾಸಕರೊಂದಿಗೆ ನಡೆದ ಚರ್ಚೆಯಲ್ಲಿ ಬರ, ನೀರಾವರಿ, ಅಭಿವೃದ್ಧಿ, ಕಲ್ಯಾಣ ಯೋಜನೆಗಳು, ಕೆಜಿಎಫ್ ಗಣಿಗಾರಿಕೆ ಜಮೀನು, ಐಟಿಐ ಜಮೀನು, ಪ್ರಸ್ತಾವಿತ ಎಸ್‌ಐಆರ್‌ ಪ್ರಕ್ರಿಯೆ ಹಾಗೂ ಕಸ್ತೂರಿರಂಗನ್ ವರದಿ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಲಾಗಿದೆ. ಸರ್ಕಾರದ ಕಾರ್ಯಕ್ರಮಗಳು ಹಾಗೂ ಆಡಳಿತದ ಹೊಸ ಕಾರ್ಯವಿಧಾನದ ಬಗ್ಗೆ ಶಾಸಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com