175 ತಾಲ್ಲೂಕುಗಳನ್ನು ಬರ ಎಂದು ಘೋಷಿಸಿ: ಆರ್. ಅಶೋಕ್‌; Video

ಬೆಂಗಳೂರಿನಲ್ಲಿ ನಿನ್ನೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈಗಾಗಲೇ ಬರಗಾಲ ಎಂದು ಗುರುತಿಸಿರುವ 101 ತಾಲೂಕುಗಳ ಬದಲಿಗೆ ರಾಜ್ಯದ 175 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
R Ashok
ಆರ್ ಅಶೋಕ್
Updated on

ಬೆಂಗಳೂರು: ಬರ ಪರಿಸ್ಥಿತಿಗೆ ರಾಜ್ಯ ಸರ್ಕಾರ ವಿಳಂಬವಾಗಿ ಸ್ಪಂದಿಸುತ್ತಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಹಾಗೂ ಬಿಜೆಪಿ ನಾಯಕ ಆರ್. ಅಶೋಕ್‌ ತೀವ್ರ ವಾಗ್ದಾಳಿ ನಡೆಸಿದರು. ಇದೇ ವೇಳೆ ಸಚಿವ ಬಿ. ನಾಗೇಂದ್ರ ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂಬ ಪ್ರತಿಪಕ್ಷದ ಬೇಡಿಕೆಯನ್ನು ಅವರು ಪುನರುಚ್ಚರಿಸಿದರು.

ಬೆಂಗಳೂರಿನಲ್ಲಿ ನಿನ್ನೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈಗಾಗಲೇ ಬರಗಾಲ ಎಂದು ಗುರುತಿಸಿರುವ 101 ತಾಲೂಕುಗಳ ಬದಲಿಗೆ ರಾಜ್ಯದ 175 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಬರದಿಂದ ಸಂಕಷ್ಟಕ್ಕೊಳಗಾಗಿರುವ ರೈತರಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ 1 ಲಕ್ಷ ರೂವರೆಗಿನ ಕೃಷಿ ಸಾಲವನ್ನು ಮನ್ನಾ ಮಾಡಬೇಕು ಎಂದು ಅಶೋಕ್‌ ಆಗ್ರಹಿಸಿದ್ದಾರೆ.

ಕುಡಿಯುವ ನೀರು ಪೂರೈಕೆ ಹಾಗೂ ಜಾನುವಾರುಗಳಿಗೆ ಅಗತ್ಯ ಪ್ರಮಾಣದ ನೀರು ಒದಗಿಸಲು ಪ್ರತಿ ತಾಲೂಕಿಗೆ 50 ಕೋಟಿ ರೂ ಅನುದಾನ ಮೀಸಲಿಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಬರದಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಪ್ರತಿ ಎಕರೆಗೆ 50 ಸಾವಿರ ಪರಿಹಾರ ನೀಡಬೇಕು ಎಂದು ಅವರು ಆಗ್ರಹಿಸಿದರು.

R Ashok
ಕರ್ನಾಟಕದ 101 ತಾಲೂಕುಗಳು ಬರಪೀಡಿತ: ಅವು ಯಾವುವು? ಇಲ್ಲಿದೆ ಪಟ್ಟಿ...

ಬರಪೀಡಿತ ಪ್ರದೇಶಗಳಲ್ಲಿನ ರೈತರ ನೆರವಿಗೆ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು. ಜತೆಗೆ ಕುಡಿಯುವ ನೀರು ಹಾಗೂ ಜಾನುವಾರುಗಳ ನೀರಿನ ಅಗತ್ಯಗಳನ್ನು ಸಮರ್ಪಕವಾಗಿ ಪೂರೈಸಬೇಕು ಎಂದು ಅಶೋಕ್‌ ಒತ್ತಾಯಿಸಿದರು.

ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ನಾವು ಪ್ರತಿದಿನವೂ ಪ್ರತಿಭಟನೆ ನಡೆಸಿದ್ದೇವೆ. ನಾಗೇಂದ್ರ ಅವರ ರಾಜೀನಾಮೆಯನ್ನು ಅಂಗೀಕರಿಸುವಂತೆ ಮುಖ್ಯಮಂತ್ರಿಗಳಿಗೆ ಎಚ್ಚರಿಕೆ ನೀಡುತ್ತೇನೆ. ಇಲ್ಲದಿದ್ದರೆ ವಿಧಾನಸಭೆಯ ಒಳಗಾಗಲಿ ಅಥವಾ ಹೊರಗೆ ಬೀದಿಗಳಲ್ಲಾಗಲಿ ನಮ್ಮ ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದು ಅಶೋಕ್‌ ಹೇಳಿದರು.

ಇದರ ನಡುವೆ, ರಾಜ್ಯದಲ್ಲಿ ಉಂಟಾಗಿರುವ ಮಳೆ ಕೊರತೆಯನ್ನು ನೀಗಿಸುವ ಹಾಗೂ ತೀವ್ರ ಕುಡಿಯುವ ನೀರಿನ ಅಭಾವವನ್ನು ತಪ್ಪಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಮೋಡ ಬಿತ್ತನೆ ಕಾರ್ಯಾಚರಣೆಯನ್ನು ತ್ವರಿತಗೊಳಿಸಿದೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ, ಪ್ರಸ್ತುತ ಎದುರಾಗಿರುವ ಮಳೆ ಕೊರತೆಯನ್ನು ಪರಿಣಾಮಕಾರಿಯಾಗಿ ಎದುರಿಸಲು ಹಾಗೂ ತೀವ್ರ ನೀರಿನ ಕೊರತೆಯನ್ನು ಮುಂಚಿತವಾಗಿ ತಡೆಯಲು ಮೋಡ ಬಿತ್ತನೆ ಕಾರ್ಯವನ್ನು ಆದ್ಯತೆಯ ಮೇರೆಗೆ ಕೈಗೊಳ್ಳಲು ನಿರ್ಧರಿಸಿದ್ದೇವೆ ಎಂದು ಹೇಳಿದರು.

ಯೋಜನೆಗೆ ಸಂಬಂಧಿಸಿದ ಮೂರು ವಿಶೇಷ ಸಮಿತಿಗಳನ್ನು ಗುರುವಾರ ಅಧಿಕೃತವಾಗಿ ರಚಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು. ಮುಂದಿನ ಎರಡು-ಮೂರು ದಿನಗಳಲ್ಲಿ ಸಮಿತಿಗಳು ಆರಂಭಿಕ ತಾಂತ್ರಿಕ ಪರಿಶೀಲನೆ ನಡೆಸಲಿದ್ದು, ಬಳಿಕ ಮೋಡ ಬಿತ್ತನೆ ಕಾರ್ಯಾಚರಣೆ ಹಾಗೂ ಕ್ಷೇತ್ರ ಮಟ್ಟದ ಮೌಲ್ಯಮಾಪನ ಅಧಿಕೃತವಾಗಿ ಆರಂಭವಾಗಲಿದೆ ಎಂದರು.

ರಾಜ್ಯದ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಮಳೆಯಾಗಿದ್ದರೂ, ಹವಾಮಾನ ಮುನ್ಸೂಚನೆಗಳ ಪ್ರಕಾರ ನಿರಂತರವಾಗಿ ಉತ್ತಮ ಮುಂಗಾರು ಮಳೆಯಾಗುವ ಸಾಧ್ಯತೆ ಕಡಿಮೆಯಿದೆ. ಹೀಗಾಗಿ ನೀರಿನ ಬಿಕ್ಕಟ್ಟು ತಪ್ಪಿಸಲು ಕೃತಕ ಮಳೆ ಸುರಿಸುವ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದು ಹೇಳಿದರು.

ಈ ಯೋಜನೆಗೆ ಒಟ್ಟು 27 ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ರಾಜ್ಯದ ಬೊಕ್ಕಸಕ್ಕೆ ಎಷ್ಟೇ ಆರ್ಥಿಕ ಹೊರೆಯಾಗಿದ್ದರೂ, ನಾಗರಿಕರು ಹಾಗೂ ಜಾನುವಾರುಗಳಿಗೆ ನಿರಂತರ ಕುಡಿಯುವ ನೀರಿನ ಪೂರೈಕೆಯನ್ನು ಖಚಿತಪಡಿಸುವುದಕ್ಕೆ ಸರ್ಕಾರ ಆದ್ಯತೆ ನೀಡಲಿದೆ ಎಂದು ಸಚಿವರು ಹೇಳಿದರು.

ಈ ಯೋಜನೆಯಿಂದ ಸ್ಥಳೀಯ ಕೆರೆಗಳು, ಕೊಳಗಳು ಹಾಗೂ ಸಣ್ಣ ಜಲಮೂಲಗಳಿಗೆ ನೀರು ಮರುಪೂರಣವಾಗುವುದರ ಜತೆಗೆ, ಮುಂಬರುವ ಬೇಸಿಗೆಗೆ ಮುನ್ನ ಮಳೆಯಾಶ್ರಿತ ಕೃಷಿಗೂ ನೆರವಾಗಲಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com