

ಚಿಕ್ಕಬಳ್ಳಾಪುರ: ಮೃತ ಯುವಕನೋರ್ವನ ಹೊಟ್ಟೆಯಲ್ಲಿ ಬ್ಯಾಟರಿ ಸೆಲ್, ಬೀಗದ ಕೀ ಸೇರಿದಂತೆ ಹಲವು ಅಪಾಯಕಾರಿ ಲೋಹದ ವಸ್ತುಗಳು ಪತ್ತೆಯಾಗಿದೆ. ಚಿಕ್ಕಬಳ್ಳಾಪುರದ ಗುಡಿಬಂಡೆ ಪಟ್ಟಣದಲ್ಲಿ ಈ ಘಟನೆ ವರದಿಯಾಗಿದ್ದು, ಯುವಕನ ಸಾವಿನ ಸುತ್ತ ಹತ್ತಾರು ಅನುಮಾನಗಳು ಹುಟ್ಟಿಕೊಂಡಿವೆ.
ಬಾಪೂಜಿನಗರದಲ್ಲಿ 28 ವರ್ಷದ ಮಹೇಶ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಮೂಲತಃ ಚಿಕ್ಕಬಳ್ಳಾಪುರ ತಾಲೂಕಿನ ನಲ್ಲಕದಿರೇನಹಳ್ಳಿ ಗ್ರಾಮದ ನಿವಾಸಿಯಾಗಿರುವ ಮಹೇಶ್, ಕಳೆದ ಕೆಲವು ದಿನಗಳಿಂದ ಅಕ್ಕನ ಮನೆಯಲ್ಲಿ ವಾಸವಾಗಿದ್ದ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಂದರೆ ನಿನ್ನೆ ಮಹೇಶ್ ನೇಣು ಬಿಗಿದುಕೊಂಡಿದ್ದಾನೆ ಎನ್ನಲಾಗಿದೆ. ಆದರೆ ಮೃತದೇಹ ನೆಲದ ಮೇಲೆ ಪತ್ತೆಯಾಗಿರುವುದು ಪೊಲೀಸರ ಅನುಮಾನಕ್ಕೆ ಕಾರಣವಾಗಿದೆ. ಹೀಗಾಗಿ ಯುವಕನ ಸಾವು ಆತ್ಮಹತ್ಯೆಯೋ ಅಥವಾ ಬೇರೆ ಕಾರಣ ಇದೆಯೋ ಎನ್ನುವ ಕುರಿತು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ವೈದ್ಯರು ಮರಣೋತ್ತರ ಪರೀಕ್ಷೆ ವೇಳೆ ಮೃತನ ಹೊಟ್ಟೆಯಲ್ಲಿ ಲೈಟರ್, ಬ್ಯಾಟರಿ ಸೆಲ್, ಬೀಗದ ಕೀಗಳು, ಹೇರ್ ಪಿನ್, ಔಷಧಿ ಟ್ಯೂಬ್ಗಳು, ಕಬ್ಬಿಣದ ಚೂರುಗಳು ಪತ್ತೆಯಾಗಿದೆ. ವೈದ್ಯರೇ ಶಾಕ್ ಆಗಿದ್ದಾರೆ. ಯುವಕನ ಹೊಟ್ಟೆಯಲ್ಲಿದ್ದ ವಸ್ತುಗಳನ್ನು ಆಚೆ ತೆಗೆಯಲಾಗಿದೆ. ಇಷ್ಟೊಂದು ವಸ್ತುಗಳು ಒಬ್ಬ ವ್ಯಕ್ತಿಯ ಹೊಟ್ಟೆಯೊಳೆಗೆ ಹೇಗೆ ಸೇರಿದವು? ಇದು ಆತ್ಮಹತ್ಯೆನಾ ಅಥವಾ ಬೇರೆ ಯಾವುದಾದರೂ ಕಾರಣವಿದೆಯಾ ಎಂದು ಪೊಲೀಸರು ತನಿಖೆ ನಡೆಸಿದ್ದಾರೆ. ಮತ್ತೊಂದೆಡೆ ಮೃತ ಮಹೇಶ್ಗೆ ಸಾಲದ ಸಮಸ್ಯೆ ಇತ್ತು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಈ ಹಿಂದೆಯೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಎಂಬ ಮಾಹಿತಿ ಲಭ್ಯವಾಗಿದೆ.