'ಜಾಮೀನು ಸಿಕ್ಕ ಮಾತ್ರಕ್ಕೆ ಪ್ರಕರಣ ಇತ್ಯರ್ಥ ಎಂದರ್ಥವಲ್ಲ': ಪ್ರಿಯಾಂಕ್ ಖರ್ಗೆ ಕುರಿತು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ

ಕಾನೂನು ಎಲ್ಲರನ್ನೂ ಸಮಾನವಾಗಿ ಪರಿಗಣಿಸುತ್ತದೆ. ಸಚಿವರ ಹೇಳಿಕೆಗಳಿಗೆ ಅವರನ್ನು ಹೊಣೆಗಾರರನ್ನಾಗಿಸಲು ಪಕ್ಷವು ನ್ಯಾಯಾಲಯದ ಮೊರೆ ಹೋಗಿದೆ ಎಂದು ತಿಳಿಸಿದರು.
BJP MLA Mahesh Tenginkai
ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ
Updated on

ಹುಬ್ಬಳ್ಳಿ: ಆರ್‌ಎಸ್‌ಎಸ್ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜಾಮೀನು ಸಿಕ್ಕಿರುವ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ, ಸಚಿವರಿಗೆ ಸದ್ಯಕ್ಕೆ ಪರಿಹಾರ ಸಿಕ್ಕಿದ್ದರೂ ಕಾನೂನು ಹೋರಾಟ ಮುಂದುವರಿಯಲಿದೆ ಎಂದು ಹೇಳಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ಶಾಸಕ, ಕಾನೂನು ಎಲ್ಲರನ್ನೂ ಸಮಾನವಾಗಿ ಪರಿಗಣಿಸುತ್ತದೆ. ಸಚಿವರ ಹೇಳಿಕೆಗಳಿಗೆ ಅವರನ್ನು ಹೊಣೆಗಾರರನ್ನಾಗಿಸಲು ಪಕ್ಷವು ನ್ಯಾಯಾಲಯದ ಮೊರೆ ಹೋಗಿದೆ ಎಂದು ತಿಳಿಸಿದರು.

'ಆರ್‌ಎಸ್‌ಎಸ್ ವಿರುದ್ಧ ಅವರು ಮಾಡಿದ ಆರೋಪಗಳು ಮತ್ತು ಹೇಳಿಕೆಗಳಿಗೆ ಸಂಬಂಧಿಸಿದಂತೆ ನಾವು ನ್ಯಾಯಾಲಯದ ಮೊರೆ ಹೋಗಿದ್ದೆವು. ಸಂವಿಧಾನದ ಪ್ರಕಾರ, ಕಾನೂನಿನ ಮುಂದೆ ಎಲ್ಲರೂ ಸಮಾನರು. ಅವರು ನ್ಯಾಯಾಲಯಕ್ಕೆ ಹಾಜರಾಗಿದ್ದರು ಮತ್ತು ಇದೀಗ ಅವರಿಗೆ ಜಾಮೀನು ಮಂಜೂರಾಗಿದೆ. ಜಾಮೀನು ಮಂಜೂರಾತಿಯು ಒಂದು ಸಾಮಾನ್ಯ ಕಾನೂನು ಪ್ರಕ್ರಿಯೆಯಾಗಿದ್ದು, ಇದು ಪ್ರಕರಣದ ಇತ್ಯರ್ಥವನ್ನು ಸೂಚಿಸುವುದಿಲ್ಲ. ಇದರಲ್ಲಿ ಅಸಾಮಾನ್ಯವಾದುದೇನೂ ಇಲ್ಲ, ಏಕೆಂದರೆ ಕಾನೂನು ಎಲ್ಲರಿಗೂ ಒಂದೇ. ಅವರಿಗೆ ಜಾಮೀನು ಸಿಕ್ಕಿದೆ. ಆದರೆ, ಕಾನೂನು ಪ್ರಕ್ರಿಯೆಗಳು ಮುಂದುವರಿಯಲಿವೆ' ಎಂದರು.

ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ವಿರುದ್ಧ ಅವಹೇಳನಕಾರಿ ಪೋಸ್ಟ್‌ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಹಾಗೂ ಕಾಂಗ್ರೆಸ್‌ ಮುಖಂಡ ಮೊಹಮ್ಮದ್‌ ಹ್ಯಾರಿಸ್ ನಲಪಾಡ್‌‌ಗೆ ಬೆಂಗಳೂರಿನ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಜಾಮೀನು ಮಂಜೂರು ಮಾಡಿದೆ.

BJP MLA Mahesh Tenginkai
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಸಚಿವ ಪ್ರಿಯಾಂಕ್‌ ಖರ್ಗೆ, ನಲಪಾಡ್‌ಗೆ ಕೋರ್ಟ್‌ನಿಂದ ಬಿಗ್ ರಿಲೀಫ್!

ಸಿದ್ದಾಪುರದ ನಿವಾಸಿ ಹಾಗೂ ಆರ್‌ಎಸ್‌ಎಸ್ ಕಾರ್ಯಕರ್ತ ತೇಜಸ್ ಎ. ಅವರು ದಾಖಲಿಸಿದ್ದ ಖಾಸಗಿ ದೂರಿಗೆ ಸಂಬಂಧಿಸಿದಂತೆ ಹೊರಡಿಸಲಾಗಿದ್ದ ಸಮನ್ಸ್‌ನ ಮೇರೆಗೆ, ಇಬ್ಬರೂ ನಾಯಕರು 42ನೇ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ACJM) ನ್ಯಾಯಾಲಯದ ಮುಂದೆ ಹಾಜರಾದರು.

ಉಭಯ ನಾಯಕರಿಗೂ, ತಲಾ ₹10,000 ವೈಯಕ್ತಿಕ ಬಾಂಡ್ ಸಲ್ಲಿಸುವ ಷರತ್ತಿನ ಮೇಲೆ ನ್ಯಾಯಾಲಯವು ಇಬ್ಬರೂ ನಾಯಕರಿಗೆ ಜಾಮೀನು ಮಂಜೂರು ಮಾಡಿತು.

ದೂರಿನ ಪ್ರಕಾರ, ಖರ್ಗೆ ಅವರು ಅಕ್ಟೋಬರ್ 14, 2025 ರಂದು 'ಎಕ್ಸ್' (X) ನಲ್ಲಿ ಆರ್‌ಎಸ್‌ಎಸ್ ಸದಸ್ಯರ ಕುರಿತು ಅವಹೇಳನಕಾರಿ ಹೇಳಿಕೆಯನ್ನು ಪೋಸ್ಟ್ ಮಾಡಿದ್ದರೆ, ನಲಪಾಡ್ ಅವರು ಯೂಟ್ಯೂಬ್ ಚಾನೆಲ್ ಒಂದರಲ್ಲಿ ಸಂಘಟನೆಯ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹೇಳಿಕೆಗಳು ಮಾನಹಾನಿಕರವಾಗಿದ್ದು, ಆರ್‌ಎಸ್‌ಎಸ್ ಮತ್ತು ಅದರ ಸದಸ್ಯರ ಘನತೆ ಹಾಗೂ ಗೌರವಕ್ಕೆ ಧಕ್ಕೆ ತಂದಿವೆ ಎಂದು ದೂರುದಾರರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com