

ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಹೊರಭಾಗದಲ್ಲಿ ಇಂದು ಭಾನುವಾರ ಹೈಡ್ರಾಮಾ ನಡೆಯಿತು. ಧರ್ಮಸ್ಥಳ ಭಕ್ತರ ಸಂಘಟನೆ, ವಿವಿಧ ಹಿಂದೂ ಸಂಘಟನೆಗಳ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ನಟ ಪ್ರಕಾಶ್ ರಾಜ್ ಅವರನ್ನು ಮುತ್ತಿಗೆ ಹಾಕಲು ಯತ್ನಿಸಿದರು.
ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳಕ್ಕೆ ಪ್ರವೇಶಿಸಲು ಯತ್ನಿಸಿದ ಹಲವು ಯುವಕರನ್ನು ಪೊಲೀಸರು ವಶಕ್ಕೆ ಪಡೆದರು. ಪೊಲೀಸ್ ವಾಹನ ಹತ್ತಲು ಅವರು ಪ್ರತಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.
ಘಟನೆಯ ಹಿನ್ನೆಲೆಯಲ್ಲಿ ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳದ ಸುತ್ತಮುತ್ತ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಪ್ರಕಾಶ್ ರಾಜ್ ಅವರು ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಹಮ್ಮಿಕೊಳ್ಳಲಾಗಿದ್ದ 'ಸಮುದಾಯ ಜಗತ್ತು/ಜಾಥಾ' ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಭಾಗವಹಿಸಿದ್ದರು. ಕಾರ್ಯಕ್ರಮದ ಬ್ಯಾನರ್ನಲ್ಲಿದ್ದ ಪ್ರಕಾಶ್ ರಾಜ್ ಅವರ ಭಾವಚಿತ್ರಕ್ಕೆ ಮಸಿ ಬಳಿಯಲು ಯತ್ನಿಸಿದ ಯುವಕರ ಗುಂಪೊಂದು, ಸಭಾಂಗಣದೊಳಗೆ ನುಗ್ಗಿ ನಟನಿಗೆ ಮುತ್ತಿಗೆ ಹಾಕಲು ಯತ್ನಿಸಿತು.
ಪ್ರಕಾಶ್ ರಾಜ್ ಅವರು ಹಿಂದೂ ಧರ್ಮದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಬಹುದು ಎಂದು ಆರೋಪಿಸಿ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು, ಧರ್ಮಸ್ಥಳದ ಭಕ್ತರ ಬಳಗ ಹಾಗೂ ಬಿಜೆಪಿ ಕಾರ್ಯಕರ್ತರು ಸ್ಥಳದಲ್ಲಿ ಜಮಾಯಿಸಿ ತೀವ್ರ ಪ್ರತಿಭಟನೆ ನಡೆಸಿದರು