

ಬೆಂಗಳೂರು: ನಗರದ ವಿವಿಧ ಭಾಗಗಳಲ್ಲಿ ಈ ಹಿಂದೆ ವಶಕ್ಕೆ ಪಡೆಯಲಾಗಿದ್ದ 31 ಬಾಂಗ್ಲಾದೇಶಿ ಪ್ರಜೆಗಳನ್ನು ಸೋಮವಾರ ಗಡಿಪಾರು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಕ್ರಮ ವಲಸಿಗರ ವಿರುದ್ಧ ನಗರಾದ್ಯಂತ ನಡೆಸಿದ ಕಾರ್ಯಾಚರಣೆಯ ಭಾಗವಾಗಿ ನಗರದ 10 ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಬಾಂಗ್ಲಾದೇಶಿ ಪ್ರಜೆಗಳನ್ನು ವಶಕ್ಕೆ ಪಡೆಯಲಾಗಿತ್ತು ಎಂದು ಅವರು ಹೇಳಿದರು.
'ಇಂದು, 10 ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ವಶಕ್ಕೆ ಪಡೆಯಲಾಗಿದ್ದ 31 ಬಾಂಗ್ಲಾದೇಶಿ ಪ್ರಜೆಗಳನ್ನು ಗಡೀಪಾರು ಮಾಡುವ ಉದ್ದೇಶದಿಂದ SMVT ಬೆಂಗಳೂರು ಟರ್ಮಿನಲ್ನಿಂದ ಪಶ್ಚಿಮ ಬಂಗಾಳದ ಮಾಲ್ಡಾ ರೈಲು ನಿಲ್ದಾಣಕ್ಕೆ ಕಳುಹಿಸಲಾಯಿತು' ಎಂದು ಪೊಲೀಸ್ ಉಪ ಆಯುಕ್ತ (ಎಲೆಕ್ಟ್ರಾನಿಕ್ ಸಿಟಿ) ಎಂ. ನಾರಾಯಣ ತಿಳಿಸಿದರು.
ಅವರನ್ನು 20 ಪೊಲೀಸ್ ಸಿಬ್ಬಂದಿ ಕರೆದೊಯ್ದರು ಎಂದು ಅವರು ಹೇಳಿದರು.
'ಅವರು ಮಂಗಳವಾರ ಸಂಜೆ 5 ಗಂಟೆ ಸುಮಾರಿಗೆ ಮಾಲ್ಡಾ ತಲುಪುವ ನಿರೀಕ್ಷೆಯಿದೆ ಮತ್ತು ಅಲ್ಲಿ ಮುಂದಿನ ಪ್ರಕ್ರಿಯೆಗಳನ್ನು ಕೈಗೊಳ್ಳಲಾಗುವುದು' ಎಂದು ಪೊಲೀಸರು ತಿಳಿಸಿದ್ದಾರೆ.
ಅಕ್ರಮ ವಲಸಿಗರ ಕುರಿತಾದ ಮಾಹಿತಿಯನ್ನು ಹಂಚಿಕೊಳ್ಳುವಂತೆ ನಾಗರಿಕರನ್ನು ಕೋರಿರುವ ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳದಂತೆ ಎಚ್ಚರಿಕೆ ನೀಡಿದ್ದಾರೆ.
ಸಾರ್ವಜನಿಕರ ಸಹಕಾರ ಅತ್ಯಗತ್ಯವಾದರೂ, ಅದು ಕಾನೂನಿನ ಚೌಕಟ್ಟಿನೊಳಗೇ ಇರಬೇಕು. ನಗರದ ವಿವಿಧ ಭಾಗಗಳಲ್ಲಿ ವಾಸಿಸುತ್ತಿರುವ ಶಂಕಿತ ಅಕ್ರಮ ವಲಸಿಗರನ್ನು ಗುರುತಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳಲು ಬೆಂಗಳೂರಿನಲ್ಲಿ ನಡೆಯುತ್ತಿರುವ 'ಆಪರೇಷನ್ ಮುಕ್ತ' ಮುಂದುವರಿಯಲಿದೆ ಎಂದೂ ಅವರು ತಿಳಿಸಿದರು.