

ಬೆಂಗಳೂರು: ಸಿಲಿಕಾನ್ ಸಿಟಿಯ ಸಂಚಾರ ದಟ್ಟಣೆಗೆ ಬ್ರೇಕ್ ಹಾಕಲು ಮತ್ತು ಫ್ಲೈಓವರ್ಗಳ ಮೇಲೆ ಸಂಭವಿಸುವ ಭೀಕರ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಬೆಂಗಳೂರು ಸಂಚಾರಿ ಪೊಲೀಸ್ (BTP) ಇಲಾಖೆಯು ಅತ್ಯಂತ ಮಹತ್ವದ ಆದೇಶವೊಂದನ್ನು ಹೊರಡಿಸಿದೆ.
ನಗರದ ಪ್ರಮುಖ 6 ಫ್ಲೈಓವರ್ ಮತ್ತು ಎಲಿವೇಟೆಡ್ ಕಾರಿಡಾರ್ಗಳಲ್ಲಿ ಆಟೋರಿಕ್ಷಾ, 2-ವೀಲರ್ ಹಾಗೂ ಸರಕು ಸಾಗಣೆ (ಗೂಡ್ಸ್) ವಾಹನಗಳ ಸಂಚಾರವನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಲಾಗಿದೆ.
ಬಿಜಿಎಸ್ ಮೇಲ್ಸೇತುವೆ, ಪೀಣ್ಯ ಎಲಿವೇಟೆಡ್ ಕಾರಿಡಾರ್, ಸಿಲ್ಕ್ ಬೋರ್ಡ್ನಿಂದ ರಾಗಿಗುಡ್ಡದವರೆಗೆ ಇರುವ ಡಬಲ್ ಡೆಕ್ಕರ್ ಮೇಲ್ಸೇತುವೆ ಹಾಗೂ ಸಂಜೀವನಗರ ಕ್ರಾಸ್ನಿಂದ ವಿದ್ಯಾಶಿಲ್ಪ ಜಂಕ್ಷನ್ವರೆಗಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆ ಎಲಿವೇಟೆಡ್ ಕಾರಿಡಾರ್ನಲ್ಲಿ ಸೆಪ್ಟೆಂಬರ್ 4ರಿಂದ ನಿರ್ಬಂಧ ಜಾರಿಗೆ ಬರಲಿದೆ. ಎಲೆಕ್ಟ್ರಾನಿಕ್ ಸಿಟಿ ಎಲಿವೇಟೆಡ್ ಕಾರಿಡಾರ್ನಲ್ಲಿ ಸೆಪ್ಟೆಂಬರ್ 11ರಿಂದ ನಿರ್ಬಂಧ ಜಾರಿಗೆ ಬರಲಿದೆ.
ಮೇಲ್ಸೇತುವೆಗಳಲ್ಲಿ ಸಂಭವಿಸಿದ ಅಪಘಾತಗಳನ್ನು ಪರಿಶೀಲಿಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವುದು, ಅಪಘಾತಗಳ ತೀವ್ರತೆಯನ್ನು ಕಡಿಮೆ ಮಾಡುವುದು ಮತ್ತು ರಸ್ತೆ ಸುರಕ್ಷತೆ ಹೆಚ್ಚಿಸುವುದು ನಿರ್ಬಂಧದ ಉದ್ದೇಶವಾಗಿದೆ ಎಂದು ಹೇಳಿದ್ದಾರೆ.
ಮೇಲ್ಸೇತುವೆಗಳ ವಿನ್ಯಾಸ ಮತ್ತು ಅಗಲ, ಅಪಘಾತಗಳಿಂದ ಉಂಟಾಗುವ ಪರಿಣಾಮ, ವಾಹನಗಳು ಕೆಟ್ಟು ನಿಂತಾಗ ಉಂಟಾಗುವ ಸಂಚಾರ ದಟ್ಟಣೆ, ಪ್ರವೇಶ ಮತ್ತು ನಿರ್ಗಮನ ಸ್ಥಳಗಳಲ್ಲಿನ ದಟ್ಟಣೆ, ತುರ್ತು ಸಂಚಾರ ನಿರ್ವಹಣೆ ಹಾಗೂ ಪಾದಚಾರಿಗಳು ಮತ್ತು ದ್ವಿಚಕ್ರ ವಾಹನ ಸವಾರರ ಸುರಕ್ಷತೆ ಸೇರಿದಂತೆ ಹಲವು ಅಂಶಗಳನ್ನು ಪರಿಗಣಿಸಿ ಈ ನಿರ್ಬಂಧ ವಿಧಿಸಲಾಗಿದೆ.
ಸಾರ್ವಜನಿಕರ ಸುರಕ್ಷತೆ ಹಾಗೂ ಸಂಚಾರ ನಿರ್ವಹಣೆಯನ್ನು ಸುಧಾರಿಸುವ ಸಮಗ್ರ ರಸ್ತೆ ಸುರಕ್ಷತಾ ಕ್ರಮಗಳ ಭಾಗವಾಗಿ ಈ ನಿರ್ಬಂಧಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.