ರಾಜ್ಯದಲ್ಲಿ ಆಡಳಿತ ಕೋಮಾ ಸ್ಥಿತಿಗೆ ಹೋಗಿದೆ: ಸಿದ್ದು ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ!
ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ರಾಜ್ಯದಲ್ಲಿ ಆಡಳಿತ ಕೋಮಾ ಸ್ಥಿತಿಗೆ ಹೋಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಸೋಮವಾರ ಆರೋಪಿಸಿದರು.
ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯ ವೇಳೆ ಮಾತನಾಡಿದ ಆರ್. ಅಶೋಕ್, ರಾಜ್ಯಪಾಲರ ಭಾಷಣದ ಮೂಲಕ ಸುಳ್ಳನ್ನು ಹಬ್ಬಿಸಲಾಗುತ್ತಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ನಡುವಿನ ಅಧಿಕಾರದ ಜಗಳ ರಾಜ್ಯದ ಆಡಳಿತದ ಮೇಲೆ "ಗಂಭೀರವಾಗಿ ಪರಿಣಾಮ ಬೀರಿದೆ" ಎಂದು ವಾಗ್ದಾಳಿ ನಡೆಸಿದರು.
ರಾಜಕೀಯ ಪ್ರತಿಷ್ಠೆ ಮತ್ತು ಹೈಕಮಾಂಡ್ ಓಲೈಕೆಗಾಗಿ ಹಲವು ವಿಚಾರಗಳಲ್ಲಿ ರಾಜ್ಯದ ಹಿತಾಸಕ್ತಿಯನ್ನು ಸಿದ್ದು ನೇತೃತ್ವದ ಸರ್ಕಾರ ಬಲಿಕೊಟ್ಟಿದೆ ಎಂದು ಆರೋಪಿಸಿದರು.
ಒಂದಿಲ್ಲೊಂದು ಹಗರಣಗಳು ಬಯಲಿಗೆ ಬರುತ್ತಿವೆ. ಅಭಿವೃದ್ಧಿ ಕುಂಠಿತವಾಗಿದೆ. ಹೀಗಾಗಿ ರಾಜ್ಯಪಾಲರು ಹಾಗೂ ಕೇಂದ್ರದ ವಿರುದ್ಧ ಸೆಡ್ಡು ಹೊಡೆದು ‘ಜನರ ಗಮನ ಬೇರೆಡೆ ಸೆಳೆಯಲು ಸರ್ಕಾರ ಕ್ಷುಲ್ಲಕ ರಾಜಕಾರಣ ಮಾಡುತ್ತಿದೆ’ ಎಂದು ಕಿಡಿಕಾರಿದರು.
ರಾಜ್ಯಪಾಲರ ಭಾಷಣದಲ್ಲಿ ಸತ್ಯವನ್ನು ಮರೆಮಾಚುವ ಮೂಲಕ ಸುಳ್ಳನ್ನು ಹರಡಲು ಸರ್ಕಾರ ಪ್ರಯತ್ನಿಸಿದೆ. ನಾನು ರಾಜ್ಯಪಾಲರ ಭಾಷಣಕ್ಕೆ ಧನ್ಯವಾದ ಹೇಳುತ್ತೇನೆ ಆದರೆ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ವಿರೋಧಿಸುತ್ತೇನೆ. ಈ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಟೀಕಾ ಪ್ರಹಾರ ನಡೆಸಿದರು.
ಎಲ್ಲೆಲ್ಲೂ ಲಂಚ ತಾಂಡವವಾಡುತ್ತಿದೆ. ಈ ಸರಕಾರಕ್ಕೆ ನೈತಿಕತೆ ಇಲ್ಲ. ಸಿದ್ದರಾಮಯ್ಯ ಆಡಳಿತದ ಮೇಲಿನ ಹಿಡಿತವನ್ನು ಕಳೆದುಕೊಂಡಿದ್ದಾರೆ. ಅವರು ಈಗ ಹೌದು ಹುಲಿಯಾ ಆಗಿಲ್ಲ, ಹೌದು ಇಲಿಯಾ ಆಗಿದ್ದಾರೆ ಎಂದು ವ್ಯಂಗ್ಯವಾಡಿದರು.
ನಾಯಕತ್ವದ ಗೊಂದಲದ ನಡುವೆ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಇದರಿಂದ ಕಳೆದೊಂದು ವರ್ಷದಿಂದ ಆಡಳಿತ ಕೋಮಾ ಸ್ಥಿತಿಯಲ್ಲಿದೆ ಎಂದು ಆರೋಪಿಸಿದರು.

