

ಬೆಂಗಳೂರು: ಕೇಂದ್ರ ಸರ್ಕಾರ ಮಂಡಿಸಿದ ಪ್ರಸಕ್ತ ಸಾಲಿನ ಬಜೆಟ್ ದೂರದೃಷ್ಟಿಯುಳ್ಳ, ಸಮತೋಲಿತ, ಬೆಳವಣಿಗೆ ಆಧಾರಿತವಾಗಿದೆಎಂದು ರಾಜ್ಯ ಬಿಜೆಪಿ ಶ್ಲಾಘನೆ ವ್ಯಕ್ತಪಡಿಸಿದೆ.
ಕೇಂದ್ರ ಸರ್ಕಾರದ ಬಜೆಟ್ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಸಮಗ್ರ ಅಭಿವೃದ್ಧಿಯ ಮೇಲೆ ಕೇಂದ್ರೀಕರಿಸುತ್ತದೆ, ಪ್ರಯೋಜನಗಳು ಸಮಾಜದ ಎಲ್ಲಾ ವರ್ಗಗಳನ್ನು ತಲುಪುವುದನ್ನು ಖಚಿತಪಡಿಸುತ್ತದೆ ಎಂದು ಹೇಳಿದ್ದಾರೆ.
ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮಾತನಾಡಿ, ಈ ಬಜೆಟ್ ಭಾರತದ ಆರ್ಥಿಕ ಭರವಸೆ ಹಾಗೂ ಸಾಮಾಜಿಕ ಆದ್ಯತೆಗಳ ಆಳವಾದ ಅರಿವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ.
ಬಜೆಟ್ನಲ್ಲಿ ಕೃಷಿಗೆ ವಿಶೇಷ ಮಹತ್ವ ನೀಡಲಾಗಿದ್ದು, ರೈತರ ಆದಾಯ ವೃದ್ಧಿ ಮತ್ತು ಗ್ರಾಮೀಣ ಸಮೃದ್ಧಿಗೆ ಉದ್ದೇಶಿತ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜೊತೆಗೆ ಕೈಗಾರಿಕಾ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಸಣ್ಣ ಹಾಗೂ ಮಧ್ಯಮ ಉದ್ಯಮಗಳಿಗೆ (ಎಂಎಸ್ಎಂಇ) ಬಲವಾದ ಬೆಂಬಲ ನೀಡಲಾಗಿದೆ ಎಂದು ತಿಳಿಸಿದ್ದಾರೆ.
“ಒಟ್ಟಾರೆಯಾಗಿ ಈ ಬಜೆಟ್ ಆರ್ಥಿಕ ಸ್ಥೈರ್ಯ, ಸಾಮಾಜಿಕ ನ್ಯಾಯ ಮತ್ತು ಸುಸ್ಥಿರ ಅಭಿವೃದ್ಧಿಗೆ ಸಮಗ್ರ ನೀಲನಕ್ಷೆಯಾಗಿದೆ. ಇದು ವಿಶ್ವದ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕ ರಾಷ್ಟ್ರಗಳ ಪೈಕಿ ಭಾರತದ ಸ್ಥಾನವನ್ನು ಮತ್ತಷ್ಟು ಬಲಪಡಿಸುತ್ತದೆ ಹಾಗೂ ದೀರ್ಘಾವಧಿಯ ರಾಷ್ಟ್ರೀಯ ಪ್ರಗತಿಗೆ ಭದ್ರ ಅಡಿಪಾಯ ಹಾಕುತ್ತದೆ ಎಂದಿದ್ದಾರೆ.
ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಹಿಂದೆ ಬಡತನ ನಿವಾರಣೆ ಕೇವಲ ಘೋಷಣೆಯಾಗಿತ್ತು. ಆದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶದ ಆರ್ಥಿಕತೆಯನ್ನು ಬಲಪಡಿಸುವ ಮೂಲಕ ಬಡತನ ನಿರ್ಮೂಲನೆ ಸಾಧ್ಯವಾಗಿದೆ. ಕೇಂದ್ರ ಸರ್ಕಾರ 25 ಕೋಟಿ ಜನರನ್ನು ಬಡತನ ರೇಖೆಗಿಂತ ಮೇಲಕ್ಕೆ ತಂದಿದೆ. ಈ ಬಜೆಟ್ ಯುವ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ಹೆಚ್ಚಿನ ಒತ್ತು ನೀಡಿದೆ ಎಂದು ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ಇದೊಂದು ಪ್ರಗತಿಪರ ಹಾಗೂ ಮಾದರಿ ಬಜೆಟ್ ಎಂದು ಅಭಿಪ್ರಾಯಪಟ್ಟಿದ್ದಾರೆ.
ವಿಕಸಿತ ಭಾರತ ನಿರ್ಮಾಣ ಮತ್ತು ದೇಶವನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯನ್ನಾಗಿ ರೂಪಿಸುವ ಉದ್ದೇಶ ಈ ಬಜೆಟ್ನಲ್ಲಿದೆ ಎಂದು ಹೇಳಿದ್ದಾರೆ.
ಜಗತ್ತಿನ ಹಲವಾರು ದೇಶಗಳು ಆರ್ಥಿಕ ಕುಸಿತವನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಭಾರತ ತನ್ನ ಬೆಳವಣಿಗೆಯ ವೇಗವನ್ನು ಮುಂದುವರೆಸಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ಪ್ರಗತಿಯನ್ನು ಉಳಿಸಿಕೊಳ್ಳುವ ಅಭಿವೃದ್ಧಿ ಕೇಂದ್ರಿತ ಬಜೆಟ್ ಮಂಡಿಸಿದ್ದಾರೆ ಎಂದು ತಿಳಿಸಿದ್ದಾರೆ.
ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿ ಕುಮಾರ್ ಮಾತನಾಡಿ, ಈ ಬಜೆಟ್ ಅಭಿವೃದ್ಧಿ ಕ್ರಾಂತಿಗೆ ದಾರಿ ಮಾಡಿಕೊಡುವ ಶಕ್ತಿಯನ್ನು ಹೊಂದಿದೆ ಎಂದು ಹೇಳಿದ್ದಾರೆ.
ವ್ಯಾಪಕ ತೆರಿಗೆ ಸುಧಾರಣೆಗಳ ಮೂಲಕ ಮಧ್ಯಮ ವರ್ಗ ಮತ್ತು ವೇತನ ವರ್ಗದವರಿಗೆ ಮಹತ್ತರ ಲಾಭ ದೊರೆಯಲಿದ್ದು, ಈ ಬಜೆಟ್ ಐತಿಹಾಸಿಕ ಹಾಗೂ ಕ್ರಾಂತಿಕಾರಿಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
Advertisement