

ಬೆಂಗಳೂರು: ಬಹುನಿರೀಕ್ಷಿತ ಬೆಂಗಳೂರು ಬಿಸಿನೆಸ್ ಕಾರಿಡಾರ್ (BBC) ಯೋಜನೆಯ ಮೊದಲ ಹಂತವನ್ನು ಮುಂದಿನ ಒಂದುೂವರೆ ವರ್ಷಗಳೊಳಗೆ (18 ತಿಂಗಳು) ಪೂರ್ಣಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಅವರು ಗುರುವಾರ ತಿಳಿಸಿದ್ದಾರೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಅಧಿಕಾರಿಗಳೊಂದಿಗೆ ನಡೆಸಿದ ಪರಿಶೀಲನಾ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಉತ್ತರ ಮತ್ತು ದಕ್ಷಿಣ ಕಾರಿಡಾರ್ಗಳಿಗೆ ಭೂಸ್ವಾಧೀನಗೊಂಡ ಭೂಮಿಯ ಮಾಲೀಕರಿಗೆ ಪರಿಹಾರ ಮೊತ್ತದ ಚೆಕ್, ಪ್ರಮಾಣಪತ್ರಗಳು ಹಾಗೂ ಟಿಡಿಎಸ್ ವಿತರಿಸಲಾಗಿದೆ ಎಂದು ಹೇಳಿದರು.
ಯೋಜನೆಗಾಗಿ ಭೂಮಿ ನೀಡಿದ ಭೂಮಾಲೀಕರಿಗೆ ಸರ್ಕಾರ ವಿವಿಧ ರೀತಿಯ ಪರಿಹಾರ ವ್ಯವಸ್ಥೆಗಳನ್ನು ಕಲ್ಪಿಸಿದೆ. ಕೆಲವು ಭೂಮಾಲೀಕರು ಶೇ.35ರಷ್ಟು ವಾಣಿಜ್ಯ ಬಳಕೆಯ ಭೂಮಿಯನ್ನು ಪರಿಹಾರವಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಇನ್ನೂ ಕೆಲವರು ನಗದು ಪರಿಹಾರವನ್ನು ಸ್ವೀಕರಿಸಿದ್ದಾರೆ.
ಭೂ ಮಾಲೀಕರಿಗೆ ಮಾರುಕಟ್ಟೆ ಮೌಲ್ಯದ ಮೂರು ಪಟ್ಟು ಹೆಚ್ಚು ಪರಿಹಾರ ನೀಡಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯೊಳಗಿನ ಆಸ್ತಿಗೆ ಮಾರುಕಟ್ಟೆ ಮೌಲ್ಯದ ಎರಡು ಪಟ್ಟು ಪರಿಹಾರ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.
ಈವರೆಗೆ 650ಕ್ಕೂ ಹೆಚ್ಚು ಭೂಮಾಲೀಕರು ಸ್ವಯಂಪ್ರೇರಿತವಾಗಿ ತಮ್ಮ ಭೂಮಿಯನ್ನು ಯೋಜನೆಗಾಗಿ ನೀಡಲು ಒಪ್ಪಿಕೊಂಡಿದ್ದಾರೆ. ಅವರಲ್ಲಿ 400ಕ್ಕೂ ಹೆಚ್ಚು ಭೂಮಾಲೀಕರಿಗೆ ಈಗಾಗಲೇ ಪರಿಹಾರ ವಿತರಿಸಲಾಗಿದೆ ಎಂದು ಅವರು ಹೇಳಿದರು.
ಟಿಡಿಆರ್ ಸಂಬಂಧಿತ ಸಮಸ್ಯೆಗಳ ಬಗ್ಗೆ ಮಾತನಾಡಿ, ಬಿಡಿಎ ಹಾಗೂ ಜಿಬಿಎ ವ್ಯಾಪ್ತಿಯೊಳಗಿನ ಭೂಮಿಗೆ ಸಂಬಂಧಿಸಿದಂತೆ 10 ದಿನಗಳೊಳಗೆ ಟಿಡಿಆರ್ ಗಳನ್ನು ವಿತರಿಸಲು ಸೂಚನೆ ನೀಡಲಾಗಿದೆ” ಎಂದು ತಿಳಿಸಿದರು.
ಬೆಂಗಳೂರು ನಗರದಲ್ಲಿ ದಿನೇದಿನೇ ಹೆಚ್ಚುತ್ತಿರುವ ಸಂಚಾರ ದಟ್ಟಣೆ ನಿವಾರಣೆ, ವಾಣಿಜ್ಯ ಚಟುವಟಿಕೆಗಳಿಗೆ ವೇಗ ನೀಡುವುದು ಮತ್ತು ನಗರದ ಆರ್ಥಿಕ ಬೆಳವಣಿಗೆಗೆ ಉತ್ತೇಜನ ನೀಡುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದ್ದು, ಯೋಜನೆಯ ಮೊದಲ ಹಂತ ಪೂರ್ಣಗೊಂಡ ಬಳಿಕ ನಗರದ ಉತ್ತರ–ದಕ್ಷಿಣ ಸಂಪರ್ಕ ವ್ಯವಸ್ಥೆ ಮತ್ತಷ್ಟು ಸುಗಮವಾಗಲಿದೆ ಎಂಬ ನಿರೀಕ್ಷೆಗಳಿವೆ.
Advertisement