

ಬೆಂಗಳೂರು: ಯುಪಿಎ ಸರ್ಕಾರ ಜಾರಿಗೆ ತಂದಿದ್ದ ಮನ್ರೇಗಾ ಯೋಜನೆಯನ್ನು ರದ್ದುಗೊಳಿಸಿ ವಿಬಿ-ಜಿ-ರಾಮ್-ಜಿ ಕಾಯ್ದೆಯನ್ನು ಜಾರಿಗೆ ತರುವ ಕೇಂದ್ರ ಸರ್ಕಾರದ ಕ್ರಮವನ್ನು ರೈತರು ಒಗ್ಗಟ್ಟಾಗಿ ವಿರೋಧಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ರೈತರಿಗೆ ಕರೆ ನೀಡಿದ್ದಾರೆ.
ಅರಮನೆ ಮೈದಾನದಲ್ಲಿ ನಡೆದ ಅಂತರರಾಷ್ಟ್ರೀಯ ವಾಣಿಜ್ಯ ಮೇಳ -2026 ಮತ್ತು ಉತ್ಪದಾನೋತ್ತರ ಕೃಷಿ - ರೈತರ ಸಬಲೀಕರಣ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಮಾತನಾಡಿದರು.
ನಮ್ಮ ಸರ್ಕಾರ ಕೃಷಿ ಕ್ಷೇತ್ರಕ್ಕೆ ಸದಾಕಾಲವೂ ಬೆಂಬಲವಾಗಿ ನಿಂತಿದೆ. ಕೃಷಿ ಲಾಭದಾಯಕವಾಗಿಸಲು ಹಾಗೂ ಕೃಷಿಕರ ಸಬಲೀಕರಣವನ್ನು ಸಾಧಿಸಲು ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದೆ. ಕೃಷಿ ಹಾಗೂ ಉತ್ಪಾದನೋತ್ತರ ಚಟುವಟಿಕೆಗಳಲ್ಲಿ ರೈತರು ತೊಡಗಿಕೊಳ್ಳುವ ಮೂಲಕ ಕೃಷಿಯನ್ನು ಲಾಭದಾಯಕಗೊಳಿಸಬಹುದಾಗಿದೆ. ರೈತರು ಉದ್ಯಮಿಗಳಾಗಬೇಕು. ಉತ್ಪನ್ನಗಳನ್ನು ಬೆಳೆಯುವ ಜೊತೆಗೆ, ಸಂಗ್ರಹಣೆ, ಸಂಸ್ಕರಣೆ, ಪ್ಯಾಕೇಜಿಂಗ್, ಮಾರುಕಟ್ಟೆ, ಉಪಉತ್ಪನ್ನಗಳ ಅಭಿವೃದ್ಧಿಯಲ್ಲಿ ರೈತರು ನಿರತರಾಗಬೇಕಿದೆ. ಕೃಷಿಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ತೊಡಗಿಕೊಳ್ಳುವುದು ಅಗತ್ಯ. ಇಂದಿನ ಪ್ರಶಸ್ತಿಗೆ ಭಾಜನರಾದ ಮಹಿಳಾ ಕೃಷಿಕರ ಸಾಧನೆ ಸ್ಪೂರ್ತಿದಾಯಕವಾಗಿದೆ ಎಂದು ಹೇಳಿದರು.
ರೈತರಿಗೆ ಉತ್ತಮವಾದ ಬಿತ್ತನೆ ಬೀಜ, ಗೊಬ್ಬರ, ಔಷಧಿಯನ್ನು ಸರ್ಕಾರ ಒದಗಿಸುತ್ತಿದ್ದು, ಯಂತ್ರೋಪಕರಣಗಳ ಖರೀದಿಗೆ ರೂ.1,500 ಕೋಟಿ ಸಹಾಯಧನವನ್ನು ನೀಡಲಾಗುತ್ತಿದೆ. ಬೆಳೆವಿಮೆ ಯೋಜನೆ ಜಾರಿಯಲ್ಲಿ ಕರ್ನಾಟಕವು ದೇಶದಲ್ಲಿ ನಂ.1 ರಾಜ್ಯವಾಗಿದ್ದು, ಈವರೆಗೆ 6,000 ಕೋಟಿ ರೂ.ಗಳ ವಿಮೆಪರಿಹಾರವನ್ನು ರೈತರಿಗೆ ವಿತರಿಸಲಾಗಿದೆ.
ಕಬ್ಬು, ರಾಗಿ ಸೇರಿದಂತೆ ಕೆಲವು ಬೆಳೆಗಳನ್ನು ಬೆಳೆಯುವುದಕ್ಕೆ ಮಾತ್ರವೇ ರೈತರು ಸೀಮಿತವಾಗುತ್ತಿದ್ದಾರೆ. ಕಬ್ಬು ಬೆಳೆಯುವ ರೈತರೊಂದಿಗೆ ಚರ್ಚಿಸಿ ಸಂಧಾನ ನಡೆಸಿ ಕಬ್ಬು ಬೆಳೆಗೆ ಬೆಲೆ ನಿಗಧಿ ಪಡಿಸಲಾಯಿತು. ಅಂತೆಯೇ ತೊಗರಿ ಬೆಳೆಗೆ ಖರೀದಿ ಕೇಂದ್ರವನ್ನು ಒಂದು ತಿಂಗಳ ಮುಂಚೆಯೇ ತೆರೆದು ರೈತರಿಗೆ ಅನುಕೂಲ ಕಲ್ಪಿಸಲಾಯಿತು. ಮೆಕ್ಕೆ ಜೋಳ ಬೆಳೆಯ ಹೆಚ್ಚುವರಿ ಇಳುವರಿ ಬಂದಿದ್ದು, 54 ಲಕ್ಷ ಮೆ.ಟನ್ ಉತ್ಪಾದನೆಯಾಗಿದೆ. ಆದ್ದರಿಂದ ಮೆಕ್ಕೆಜೋಳ ಬಳಸುವ ಕಾರ್ಖಾನೆಗಳು, ಎಥನಾಲ್ ತಯಾರಕರೊಂದಿಗೆ ಚರ್ಚೆ ನಡೆಸಿ, 40 ಲಕ್ಷ ಮೆ.ಟನ್ ಮೆಕ್ಕೆಜೋಳ ಖರೀದಿಗೆ ಅನುವು ಮಾಡಿಕೊಡಲಾಯಿತು.
ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಕೃಷಿಯಲ್ಲಿ ತೊಡಗಿಕೊಳ್ಳಬೇಕು. ಸ್ವಾತಂತ್ರ್ಯಪೂರ್ವದಲ್ಲಿ ಶೇ.80 ರಷ್ಟು ಜನ ಕೃಷಿಯನ್ನು ಅವಲಂಬಿಸಿದ್ದರು. ಈಗ ಈ ಪ್ರತಿಶತ ಶೇ. 62 ಕ್ಕೆ ಇಳಿದಿದೆ. ಕೃಷಿಯಲ್ಲಿ ಉತ್ಪಾದನೋತ್ತರ ಕಾರ್ಯಗಳನ್ನು ಕೈಗೊಂಡಾಗ ಮಾತ್ರ ಕೃಷಿ ಲಾಭದಾಯಕವಾಗುತ್ತದೆ ಎಂದು ತಿಳಿಸಿದರು.
ಭಾರತ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿದೆ. ನಮ್ಮ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳಲ್ಲಿ ಬಹಳಷ್ಟು ಈಡೇರಿಸಲಾಗಿದ್ದು, ಅವುಗಳಲ್ಲಿ ಜಾರಿಯಾಗಿರುವ ಕೃಷಿ ಭಾಗ್ಯ ಯೋಜನೆ ಪ್ರಮುಖವಾಗಿದೆ. ಬಿಜೆಪಿ ತನ್ನ ಅಧಿಕಾರಾವಧಿಯಲ್ಲಿ ಈ ಯೋಜನೆಯನ್ನು ಸ್ಥಗಿತಗೊಳಿಸಿತ್ತು. ನಮ್ಮ ಸರ್ಕಾರ ಮತ್ತೊಮ್ಮೆ ಕೃಷಿ ಭಾಗ್ಯ ಯೋಜನೆಯನ್ನು ಮರುಸ್ಥಾಪಿಸಿದೆ. ಸುಮಾರು 200 ಕೋಟಿ ಅನುದಾನವನ್ನು ಇದಕ್ಕಾಗಿ ನೀಡಲಾಗಿದೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸರ್ಕಾರ ಈ ಹಿಂದೆ ಮನರೇಗಾ ಯೋಜನೆಯನ್ನು ಜಾರಿಗೊಳಿಸಿತ್ತು. ಇದು ಮಹಿಳೆಯರು, ಅದಿವಾಸಿಗಳು, ಕಾರ್ಮಿಕರಿಗೆ ಉದ್ಯೋಗ ನೀಡುವ ಉತ್ತಮ ಯೋಜನೆಯಾಗಿದ್ದು, ಗ್ರಾಮಸಭೆಗಳಲ್ಲಿ ಕಾಮಗಾರಿಗಳು ನಿರ್ಧಾರವಾಗುತ್ತಿತ್ತು. ಆದರೆ ಈ ಅಧಿಕಾರವು ಈಗ ಕೇಂದ್ರ ಸರ್ಕಾರದ ಕೈಯಲ್ಲಿದ್ದು, ಅವರು ನಿರ್ಧರಿಸಿದಂತೆ ಕಾಮಗಾರಿ, ಅನುದಾನ ನೀಡಲಾಗುತ್ತದೆ. ರಾಜ್ಯದ ರೈತರೆಲ್ಲರೂ ಮನ್ರೇಗಾ ಯೋಜನೆಯನ್ನು ಮರುಸ್ಥಾಪಿಸಿ, ವಿಬಿ ಜಿ ರಾಮ್ ಜಿ ಯೋಜನೆಯನ್ನು ತಿರಸ್ಕರಿಸಲು ಹೋರಾಟ ನಡೆಸಬೇಕು.
ಮನರೇಗಾ ಅಡಿಯಲ್ಲಿ ಕಾರ್ಮಿಕರ ವೇತನ ಪೂರ್ತಿಯಾಗಿ ಕೇಂದ್ರವೇ ನೀಡುತ್ತಿತ್ತು. ಆದರೆ ಈಗ ಕೇಂದ್ರ ಕೇವಲ 60% ಅನುದಾನ ನೀಡುತ್ತಿದ್ದು, ಶೇ.40 ರಷ್ಟನ್ನು ರಾಜ್ಯ ಭರಿಸಬೇಕಾಗಿದೆ. ರಾಜ್ಯ ಸರ್ಕಾರಗಳ ಅಂಗೀಕಾರವಿಲ್ಲದೇ, ಮನರೇಗಾವನ್ನು ರದ್ದುಪಡಿಸಿ ವಿಬಿ ಜಿ ರಾಮ್ ಜಿ ಯೋಜನೆಯನ್ನು ಜಾರಿಗೊಳಿಸಿದ್ದು, ಅದರಲ್ಲಿನ ಮಹಾತ್ಮಾಗಾಂಧಿ ಹೆಸರನ್ನು ಕೂಡ ತೆಗೆಯಲಾಗಿದೆ ಎಂದು ಕಿಡಿಕಾರಿದರು.
Advertisement