

ಬೀದರ್/ ಕೋಲಾರ: ಕೋಲಾರ, ಬೀದರ್ ನಲ್ಲಿ ನಿನ್ನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತ ಪ್ರಕರಣಗಳಲ್ಲಿ ಆರು ಮಂದಿ ದುರ್ಮರಣ ಹೊಂದಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ಹಳ್ಳಿಖೇಡ ಸಮೀಪದ ನಾಗಣ್ಣ ಕ್ರಾಸ್ ಬಳಿ ಭಾನುವಾರ ಸೇತುವೆಗೆ ಬೈಕ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ರಾಜೇಶ್ವರ ಗ್ರಾಮದ ನಿವಾಸಿಗಳಾದ ವೆಂಕಟ್ ಕರತ್ಮಲ್ (40), ಅವರ ಪತ್ನಿ ಶಿಲ್ಪಾ (35) ಮತ್ತು ಅವರ ಪುತ್ರಿ ರಕ್ಷಿತಾ (12) ಎಂದು ಗುರುತಿಸಲಾಗಿದೆ. ಅವರ ಪುತ್ರ ದಿಗಂಬರ್ (15) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸಲಾಗಿದೆ.
ನಾಲ್ವರು ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿದೆ ಮತ್ತು ಸವಾರನ ನಿಯಂತ್ರಣ ತಪ್ಪಿ ಬೈಕ್ ಸೇತುವೆಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮತ್ತೊಂದು ಅಪಘಾತದಲ್ಲಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಕಾರು ಪಲ್ಟಿಯಾಗಿ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರಲ್ಲಿ ಆಂಧ್ರಪ್ರದೇಶ ಮೂಲದ ಮುನಿಯಮ್ಮ ಮತ್ತು ವೆಂಕಟಪ್ಪ ಸೇರಿದ್ದಾರೆ.
ಈ ದುರ್ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಆಂಧ್ರಪ್ರದೇಶದ ಮದನಪಲ್ಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂಲಿ ಕಾರ್ಮಿಕರು ದಿನಗೂಲಿ ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement