

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ (Bangalore Rural) ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ ಸತ್ಯವರ ಗ್ರಾಮದ ಬಳಿ ಇಂದು ಶುಕ್ರವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಏಳು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಹೊಸಕೋಟೆ–ದಾಬಸ್ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ವಾಹನ, ಬೈಕ್ ಹಾಗೂ ಎಕ್ಸ್ ಯುವಿ ಕಾರಿನ (XUV Car) ನಡುವೆ ಸರಣಿ ಡಿಕ್ಕಿ ಸಂಭವಿಸಿ ಈ ದುರ್ಘಟನೆ ನಡೆದಿದೆ. ಘಟನೆ ಸ್ಥಳದಲ್ಲೇ ಕಾರಿನಲ್ಲಿದ್ದ ಆರು ಮಂದಿ ಮತ್ತು ಬೈಕ್ ಸವಾರ ಮೃತಪಟ್ಟಿದ್ದಾರೆ.
ಅಪಘಾತ ಹೇಗಾಯಿತು?
ಅತಿವೇಗವೇ ಅಪಘಾತಕ್ಕೆ ಕಾರಣ ಎಂಬುದಾಗಿ ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆದ್ದಾರಿಯಲ್ಲಿ ಸಾಗುತ್ತಿದ್ದ ಎಕ್ಸ್ ಯುವಿ ಕಾರು ಮೊದಲು ಮುಂದೆ ಹೋಗುತ್ತಿದ್ದ ಬೈಕ್ಗೆ ಡಿಕ್ಕಿ ಹೊಡೆದಿದ್ದು, ಬಳಿಕ ನಿಯಂತ್ರಣ ತಪ್ಪಿ ಕ್ಯಾಂಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಮೃತಪಟ್ಟವರಲ್ಲಿ ಆರು ಮಂದಿ ಬೆಂಗಳೂರಿನ ಕೊತ್ತನೂರು ಮೂಲದವರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಪಘಾತಕ್ಕೀಡಾದ XUV 700 ಕಾರು ( ಸಂಖ್ಯೆ KA-03 NW-0138) ಹೊಸಕೋಟೆಯಿಂದ ದೇವನಹಳ್ಳಿ ಮಾರ್ಗವಾಗಿ ಬರುತ್ತಿತ್ತು. ಸದ್ಯ ಕಾರಿನಲ್ಲಿದ್ದ 6 ಜನ ಸಾವನ್ನಪ್ಪಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಸದ್ಯ ಮೃತದೇಹಗಳನ್ನ ಹೊಸಕೋಟೆಯ ಸರ್ಕಾರಿ ಆಸ್ವತ್ರೆಗೆ ರವಾನಿಲಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
Advertisement