

ಬೆಂಗಳೂರು: ರಾಜ್ಯದಲ್ಲಿ ತಾಯಿ ಮರಣ ಪ್ರಮಾಣವನ್ನು ಶೂನ್ಯಕ್ಕೆ ತರುವ ಉದ್ದೇಶದಿಂದ ರಾಜ್ಯ ಸರ್ಕಾರ ಉನ್ನತ ಮಟ್ಟದ ಅಧಿಕಾರ ಸಮಿತಿಯನ್ನು ರಚಿಸಿದೆ.
2025–26ರ ಕೆಟಿಪಿಪಿ ಯೋಜನೆಯಡಿ ರೂ.139.53 ಕೋಟಿ ವೆಚ್ಚದಲ್ಲಿ ಅನುಮೋದಿಸಲಾದ ಯೋಜನೆಯನ್ನು ಜಾರಿಗೊಳಿಸಲು ಈ ಸಮಿತಿಗೆ ಅಧಿಕಾರ ನೀಡಲಾಗಿದೆ.
ಖಾಲಿ ಹುದ್ದೆಗಳನ್ನು ಗುತ್ತಿಗೆ ಮೂಲಕ ಭರ್ತಿ ಮಾಡಲು ಸಮಿತಿಗೆ ಅನುಮತಿ ನೀಡಲಾಗಿದೆ. ಜೊತೆಗೆ ಶಿಸ್ತು ಕ್ರಮಗಳಿಗೆ ಸಂಬಂಧಿಸಿದ ಆಡಳಿತಾತ್ಮಕ ಅಧಿಕಾರ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ನಿರ್ದಿಷ್ಟ ಕಾರ್ಯಗಳಿಗೆ ನಿಯೋಜಿಸುವ ಅಧಿಕಾರವನ್ನೂ ಸಮಿತಿಗೆ ನೀಡಲಾಗಿದೆ.
ರಾಜ್ಯದಲ್ಲಿ ಬಾಣಂತಿಯರ ಸಾವಿಗೆ ಕಾರಣವಾಗುವ ಅಂಶಗಳನ್ನು ಪರಿಶೀಲಿಸಿ ತಡೆಗಟ್ಟುವ ಕ್ರಮಗಳನ್ನು ಕೈಗೊಳ್ಳುವುದು ಸಮಿತಿಯ ಪ್ರಮುಖ ಕಾರ್ಯವಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ನಗರಾಭಿವೃದ್ಧಿ, ಆದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ ಈ ಅಭಿಯಾನವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಸಮಿತಿ ಮಾರ್ಗದರ್ಶನ ನೀಡಲಿದೆ.
ಗರ್ಭಿಣಿ ಮಹಿಳೆಯರಿಗೆ ಸಮಗ್ರ ತಾಯಿ ಆರೋಗ್ಯ ಸೇವೆಗಳನ್ನು ಸಾರ್ವತ್ರಿಕವಾಗಿ ಒದಗಿಸುವುದು, ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ ಸೇವೆಗಳ ಗುಣಮಟ್ಟ ಸುಧಾರಿಸುವುದು ಮತ್ತು ಆರೋಗ್ಯ ಸೇವೆಗಳಲ್ಲಿ ಅಸಮಾನತೆಗಳನ್ನು ಕಡಿಮೆ ಮಾಡುವುದು ಸಮಿತಿಯ ಗುರಿಯಾಗಿದೆ.
ಇದೇ ವೇಳೆ ಪ್ರಾಥಮಿಕ, ದ್ವಿತೀಯ ಮತ್ತು ತೃತೀಯ ಆರೋಗ್ಯ ಸೇವೆಗಳನ್ನು ಬಲಪಡಿಸಿ, ಸುರಕ್ಷಿತ ಪ್ರಸವಕ್ಕೆ ಅಗತ್ಯವಾದ ಮಾನವ ಸಂಪನ್ಮೂಲ, ಉಪಕರಣಗಳು, ಔಷಧಗಳು ಮತ್ತು ಸೇವೆಗಳ ಲಭ್ಯತೆ ಖಚಿತಪಡಿಸುವುದು, ಸೇವೆಗಳ ಗುಣಮಟ್ಟ ಸುಧಾರಿಸಲು ಜವಾಬ್ದಾರಿ ವ್ಯವಸ್ಥೆ ರೂಪಿಸುವುದು ಹಾಗೂ ಖಾಸಗಿ ವಲಯದೊಂದಿಗೆ ಸಹಕಾರ ಸಾಧಿಸಲು ಸರ್ಕಾರ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.
Advertisement