

ಬೆಂಗಳೂರು: ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮಾಕಳಿ ಪ್ರದೇಶದಲ್ಲಿರುವ ಪರಫ್ಯೂಮ್ ಗೋದಾಮಿನಲ್ಲಿ ಭಾನುವಾರ ಬೆಳಗ್ಗೆ ಭಾರೀ ಬೆಂಕಿ ಕಾಣಿಸಿಕೊಂಡು, ಸಮೀಪದ ಹಲವು ಗೋದಾಮುಗಳಿಗೆ ವ್ಯಾಪಿಸಿದ ಘಟನೆ ನಡೆದಿದೆ. ಈ ದುರ್ಘಟನೆಯಲ್ಲಿ ಐದು ಮಂದಿ ಗಾಯಗೊಂಡಿದ್ದು, ಭಾರೀ ಪ್ರಮಾಣ ಆಸ್ತಿಪಾಸ್ತಿ ನಷ್ಟವಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಬೆಳಿಗ್ಗೆ ಸುಮಾರು 11.30ರ ವೇಳೆಗೆ ಪರಫ್ಯೂಮ್ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಪಕ್ಕದ ಏರ್ ಕಂಡೀಷನರ್, ಪ್ರೊಸೆಸ್ಡ್ ಡಾಗ್ ಫುಡ್ ಮತ್ತು ಗ್ಯಾಸ್ಸಿಲಿಂಡರ್ಗಳನ್ನು ಸಂಗ್ರಹಿಸಿದ್ದ ಗೋದಾಮುಗಳಿಗೆ ಬೆಂಕಿ ವ್ಯಾಪಿಸಿದೆ.
ಗ್ಯಾಸ್ಸಿಲಿಂಡರ್ಗಳನ್ನು ತಕ್ಷಣ ಸ್ಥಳಾಂತರಿಸಿದ ಕಾರಣ ಸಂಭವಿಸಬೇಕಿದ್ದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ ಎಂದು ತಿಳಿಸಿದ್ದಾರೆ.
ಬೆಂಕಿ ಅವಘಡದ ಮಾಹಿತಿ ದೊರಕುತ್ತಿದ್ದಂತೆ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಐದಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳನ್ನು ಬಳಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಹಲವು ಗಂಟೆಗಳ ಕಠಿಣ ಪ್ರಯತ್ನದ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು.
ಭಾನುವಾರವಾದ್ದರಿಂದ ಗೋದಾಮುಗಳಲ್ಲಿ ಕಡಿಮೆ ಸಿಬ್ಬಂದಿ ಇದ್ದು, ಹೆಚ್ಚಿನವರು ಸುರಕ್ಷಿತವಾಗಿ ಹೊರಬಂದಿದ್ದಾರೆ. ಆದರೆ, ಐದು ಮಂದಿ ಕಾರ್ಮಿಕರು ಸುಟ್ಟ ಗಾಯಗಳಿಗೆ ಒಳಗಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಾಥಮಿಕ ತನಿಖೆ ಪ್ರಕಾರ, ಪರಫ್ಯೂಮ್ ಗೋದಾಮಿನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಉಂಟಾಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಬೆಂಕಿಯಿಂದ ಗೋದಾಮುಗಳಲ್ಲಿ ಸಂಗ್ರಹಿಸಿದ್ದ ವಸ್ತುಗಳು ಸಂಪೂರ್ಣವಾಗಿ ಸುಟ್ಟುಹೋಗಿದ್ದು, ಕೋಟ್ಯಂತರ ರೂಪಾಯಿಗಳ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ನಷ್ಟದ ನಿಖರ ಪ್ರಮಾಣವನ್ನು ಅಧಿಕಾರಿಗಳು ಅಂದಾಜಿಸುತ್ತಿದ್ದಾರೆ.
Advertisement