

ಬೆಂಗಳೂರು: ರಂಜಾನ್ ಮತ್ತು ಹೋಳಿ ಹಬ್ಬಗಳ ಆಚರಣೆಯ ವೇಳೆ ಕಾನೂನು ಕೈಗೆತ್ತಿಕೊಂಡು ಶಾಂತಿ ಕದಡಲು ಯತ್ನಿಸಿದರೆ, ಕಠಿಣ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ಹಬ್ಬ ಇರುವುದು ಸಂತೋಷದಿಂದ ಆಚರಣೆ ಮಾಡಲು. ಅಂತಹ ಸಂದರ್ಭಗಳಲ್ಲಿ ಶಾಂತಿ ಭಂಗಕ್ಕೆ ಪ್ರಯತ್ನಿಸಿದರೆ. ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
ಹಬ್ಬಗಳನ್ನು ಸಂತೋಷದಿಂದ ಆಚರಿಸಬೇಕು. ಯಾರಿಗೂ ಕಾನೂನು ಕೈಗೆ ತೆಗೆದುಕೊಳ್ಳಲು ಅವಕಾಶ ನೀಡುವುದಿಲ್ಲ. ಈ ಕುರಿತು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಅಕ್ರಮ ಬಾಂಗ್ಲಾದೇಶ ವಲಸಿಗರ ಬಂಧನ ಕುರಿತು ಮಾತನಾಡಿ, ಪ್ರತಿ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿಂದ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ. ಅಕ್ರಮ ವಲಸಿಗರು ಕಾಫಿ ತೋಟ, ಕಟ್ಟಡಗಳಲ್ಲಿ ಕೆಲಸ ಮಾಡುತ್ತಾರೆಂಬ ಮಾಹಿತಿಯನ್ನು ಗಂಭೀರವಾಗಿ ಪರಿಗಣಿಸಿ, ಎಲ್ಲ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ’ ಎಂದರು.
ಮೊಬೈಲ್ ಬ್ಯಾನ್ ವಿಚಾರದ ಕುರಿತು ಮಾತನಾಡಿ, ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್ ಮಾಡುವ ಬಗ್ಗೆ ಚಿಂತನೆ ನಡೆದಿದೆ. 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಕೊಟ್ಟರೆ ವಿದ್ಯಾಭ್ಯಾಸದ ಮೇಲೆ ಬೇರೆ ರೀತಿಯ ಪರಿಣಾಮ ಬೀರುತ್ತಿದೆ. ಬಹಳಷ್ಟು ದೇಶಗಳಲ್ಲಿ ಅಧ್ಯಯನ ನಡೆಸಿ ಮೊಬೈಲ್ ಬ್ಯಾನ್ ಮಾಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳು ಕೂಡ ಚಿಂತನೆ ಹರಿಸಿದ್ದಾರೆ. ಇದರ ಸಾಧಕ ಬಾಧಕಗಳನ್ನು ಅಧ್ಯಯನ ನಡೆಸಿ ತೀರ್ಮಾನ ಮಾಡುತ್ತಾರೆ ಎಂದರು.
ದಲಿತ ಸಿಎಂ ಕೂಗು ವಿಚಾರದ ಕುರಿತು ಪ್ರತಿಕ್ರಿಯಿಸಿ, ಇದೆಲ್ಲ ವಿರೋಧ ಪಕ್ಷದವರು ಮಾಡುತ್ತಿರುವ ಕೆಲಸ. ವಿರೋಧ ಪಕ್ಷದವರು ತಮ್ಮ ವಿಚಾರಗಳನ್ನು ಮುಚ್ಚಿಟ್ಟುಕೊಳ್ಳಲು ಸುಮ್ಮನೆ ಆರೋಪಗಳನ್ನು ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ಆಡಳಿತ ಮಾಡುತ್ತಿಲ್ಲವೇ?
ಕಳೆದ ಹನ್ನೆರಡು ದಿನಗಳಿಂದ ಬಜೆಟ್ ಕುರಿತು ವಿವಿಧ ಇಲಾಖೆಯ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಚರ್ಚೆ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಕೂಗು ವಿಚಾರವನ್ನು ವಿರೋಧ ಪಕ್ಷದವರು ಸುಮ್ಮನೆ ಹೊರಗೆ ತರುತ್ತಿದ್ದಾರೆ ಎಂದ ಅವರು, ದಲಿತ ಸಿಎಂ ಕಾಂಗ್ರೆಸ್ ಪಕ್ಷದವರೆ ಮಾಡಬೇಕಲ್ಲ.? ಇನ್ಯಾರು ಮಾಡುತ್ತಾರೆ. ಸಂದರ್ಭ ಬಂದಾಗ ಹೈಕಮಾಂಡ್ ಅವರು ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.
ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳಲ್ಲಿ ವಿದ್ಯಾರ್ಥಿ ಚುನಾವಣೆ ನಡೆಸುವ ವಿಚಾರದ ಕುರಿತು ಮಾತನಾಡಿ, ಕೆ.ಹೆಚ್.ರಂಗನಾಥ್ ಅವರು ಉನ್ನತ ಶಿಕ್ಷಣ ಸಚಿವರಾಗಿದ್ದ ಅವಧಿಯಲ್ಲಿ ಯೂನಿವರ್ಸಿಟಿ, ಕಾಲೇಜುಗಳಲ್ಲಿ ನಡೆಯುತ್ತಿದ್ದ ಚುನಾವಣೆ ವೇಳೆ ಘರ್ಷಣೆಗಳು ನಡೆದವು. ಆ ಕಾರಣಕ್ಕಾಗಿ ವಿದ್ಯಾರ್ಥಿ ಚುನಾವಣೆಗಳನ್ನು ನಿಷೇಧಿಸಿದರು.
ಚುನಾವಣೆ ತಂದರೆ ವಿದ್ಯಾರ್ಥಿಗಳ ನಡುವೆ ಗುಂಪುಗಳಾಗಿ ಹೊಡೆದಾಡಿಕೊಳ್ಳುತ್ತಾರೆ ಎಂಬ ಕಾರಣದಿಂದ. ನಾನು ಉನ್ನತ ಶಿಕ್ಷಣ ಸಚಿವನಾಗಿದ್ದ ಸಂದರ್ಭದಲ್ಲಿ ಸಿಂಡಿಕೇಟ್ ಚುನಾವಣೆಯನ್ನು ಬ್ಯಾನ್ ಮಾಡಲಾಯಿತು. ಈಗ ವಿದ್ಯಾರ್ಥಿ ಚುನಾವಣೆ ನಡೆಸುವ ಬಗ್ಗೆ ಪುನರ್ ಪರಿಶೀಲನೆ ಮಾಡಬೇಕೆಂಬ ಒತ್ತಡ ಬರುತ್ತಿದೆ. ಈ ಬಗ್ಗೆ ಸಚಿವ ಸಂಪುಟ ಏನು ನಿರ್ಧಾರ ಮಾಡುತ್ತದೆ ನೋಡಬೇಕು ಎಂದು ಹೇಳಿದರು.
Advertisement