ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

ಕಾಂಗ್ರೆಸ್ ಸರ್ಕಾರ ಆಡಳಿತ ಭಾಷೆ ಕನ್ನಡವನ್ನೇ ನಿರ್ಲಕ್ಷಿಸಿ, ಓಲೈಕೆ ರಾಜಕಾರಣ ಮಾಡಲಾಗುತ್ತಿದೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪ ಮಾಡುತ್ತಿದ್ದು, ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದೆ.
CM Siddaramaiah Casual Images
ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಹಿಮೋಫಿಲಿಯಾ ರೋಗಿಗಳಿಗೆ ಚಿಕಿತ್ಸೆ ಹಾಗೂ 108 ಆಂಬುಲೆನ್ಸ್ ಸೇವೆಗಳ ಲೋಕಾರ್ಪಣೆ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಉರ್ದುವಿನಲ್ಲಿ ಪ್ರಕಟಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

ಕಾಂಗ್ರೆಸ್ ಸರ್ಕಾರ ಆಡಳಿತ ಭಾಷೆ ಕನ್ನಡವನ್ನೇ ನಿರ್ಲಕ್ಷಿಸಿ, ಓಲೈಕೆ ರಾಜಕಾರಣ ಮಾಡಲಾಗುತ್ತಿದೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪ ಮಾಡುತ್ತಿದ್ದು, ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದೆ. ಆದರೆ, ಸಿಎಂ ಸಿದ್ದರಾಮಯ್ಯ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ, ಉರ್ದು ಪತ್ರಿಕೆಯಲ್ಲಿ ಸರ್ಕಾರದ ಜಾಹೀರಾತೊಂದು ಉರ್ದು ಭಾಷೆಯಲ್ಲಿ ಪ್ರಕಟಗೊಂಡಿದ್ದನ್ನು ವಿರೋಧಿಸಿ ವಿಪಕ್ಷಗಳ ನಾಯಕರು ಆಡಿರುವ ವೀರಾವೇಶದ ಮಾತುಗಳನ್ನು ಆಲಿಸಿದೆ. ಹಿಂದೆ ತಾವೇ ಅಧಿಕಾರದಲ್ಲಿ ಇದ್ದಾಗ ಉರ್ದು ಭಾಷೆಯ ಜಾಹೀರಾತು ನೀಡಿ, ಈಗ ನಮ್ಮ ವಿರುದ್ಧ ಮುಗಿಬೀಳುವುದು ಆತ್ಮವಂಚನೆ ಮತ್ತು ಅಸಹ್ಯದ ಪರಮಾವಧಿ. ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರು ಅಧಿಕಾರದಲ್ಲಿದ್ದಾಗ ಯಾರ ಓಲೈಕೆ ಮಾಡಲು ಉರ್ದು ಜಾಹೀರಾತು ನೀಡಿದ್ದರು? ಎಂದು ಹೇಳಿ ಪುಣ್ಯಕಟ್ಟಿಕೊಳ್ಳಿ ಎಂದಿದ್ದಾರೆ.

ಸರ್ಕಾರದ ಕಾರ್ಯಕ್ರಮಗಳು, ಯೋಜನೆಗಳ ಮಾಹಿತಿಯನ್ನು ಜನರಿಗೆ ತಲುಪಿಸುವ ಉದ್ದೇಶದಿಂದಲೇ ಸರ್ಕಾರ ಜಾಹೀರಾತು ನೀಡುತ್ತದೆ. ಹೆಚ್ಚೆಚ್ಚು ಜನರನ್ನು ತಲುಪುತ್ತದೆ ಎನ್ನುವ ಕಾರಣಕ್ಕಾಗಿ ಆಯಾ ಭಾಷೆಯ ಪತ್ರಿಕೆಗಳಲ್ಲಿ ಅದೇ ಭಾಷೆಯ ಜಾಹೀರಾತು ನೀಡುವುದು ಹಿಂದಿನಿಂದ ನಡೆದುಕೊಂಡು ಬಂದ ಪದ್ಧತಿ. ಇದರಿಂದ ಪತ್ರಿಕೆಯ ಓದುಗರಿಗೆ ಜಾಹೀರಾತಿನ ವಿಚಾರ ಅರ್ಥವಾಗಿ, ಜಾಹೀರಾತು ನೀಡಿದ ಉದ್ದೇಶವೂ ಈಡೇರುತ್ತದೆ ಎಂದು ಹೇಳಿದ್ದಾರೆ.

ಬಿಜೆಪಿ ನಾಯಕರು ಒಂದಲ್ಲ, ಎರಡಲ್ಲ ಹತ್ತಾರು ಬಾರಿ ಉರ್ದು ಜಾಹೀರಾತುಗಳನ್ನು ನೀಡಿದ್ದಾರೆ, ಆಗ ಅವರಿಗೆ ಅದು ತುಷ್ಟೀಕರಣ ಅನ್ನಿಸಲಿಲ್ಲ. ಈಗ ನಮ್ಮ ಸರ್ಕಾರ ನೀಡಿರುವ ಉರ್ದು ಜಾಹೀರಾತು ಕಂಡೊಡನೆ ಅವರೊಳಗಿನ ಕನ್ನಡಪ್ರೇಮ ಇದ್ದಕ್ಕಿದ್ದಂತೆ ಎದ್ದುನಿಂತಿದೆ. ನಿಮ್ಮ ಈ 'ಹಿಪೋಕ್ರಸಿ' ಗೋಸುಂಬೆಯನ್ನೇ ನಾಚಿಸುವಂತಿದೆ ಎಂದು ಟೀಕಿಸಿದ್ದಾರೆ.

ನೆಲ - ಜಲ - ಭಾಷೆಯ ಕಾಳಜಿಯ ಬಗ್ಗೆ ಬಿಜೆಪಿ ನಾಯಕರಿಂದ ಪಾಠ ಹೇಳಿಸಿಕೊಳ್ಳಬೇಕಾದ ದರಿದ್ರ ಸ್ಥಿತಿ ನಮಗೆ ಬಂದಿಲ್ಲ. ಕನ್ನಡ ಮತ್ತು ಕನ್ನಡಿಗರ ಹಿತ ಕಾಯುವ ವಿಚಾರ ಬಂದಾಗ ರಾಜಕೀಯ ಬದಿಗಿಟ್ಟು, ಹೋರಾಟದ ಮೊದಲ ಸಾಲಿನಲ್ಲಿ ನಿಂತವನು ನಾನು. ಇದಕ್ಕೆ ಇತಿಹಾಸ ಸಾಕ್ಷಿ. ಕನ್ನಡ ಕಾವಲು ಸಮಿತಿಯ ಅಧ್ಯಕ್ಷನಾಗಿಯೇ ರಾಜಕೀಯ ಜೀವನಕ್ಕೆ ಕಾಲಿರಿಸಿದ ನನಗೆ ಕನ್ನಡ ಬರಿ ಭಾಷೆಯಲ್ಲ, ಬದುಕು ಹೌದು ಎಂದು ತಿರುಗೇಟು ನೀಡಿದ್ದಾರೆ.

CM Siddaramaiah Casual Images
ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com