ರಾಜ್ಯದ 60ಕ್ಕೂ ಹೆಚ್ಚು ವಸತಿ ಶಾಲೆಗಳಲ್ಲಿ 'ಇನ್ನೋವೇಶನ್ ಲ್ಯಾಬ್' ಸ್ಥಾಪನೆಗೆ ಚಿಂತನೆ
ಬೆಂಗಳೂರು: ಶಾಲಾ ಹಂತದಲ್ಲೇ ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸಲು ಮತ್ತು ಪ್ರಾತ್ಯಕ್ಷಿಕೆ ಹಾಗೂ ಚಟುವಟಿಕೆಗಳ ಮೂಲಕ ವಿಜ್ಞಾನ ಕಲಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ರಾಜ್ಯದ 60ಕ್ಕೂ ಹೆಚ್ಚು ವಸತಿ ಶಾಲೆಗಳಲ್ಲಿ "ಇನ್ನೋವೇಶನ್ ಲ್ಯಾಬ್" ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಬೋಸರಾಜು ತಿಳಿಸಿದರು.
ಜವಾಹರ್ ಲಾಲ್ ನೆಹರು ತಾರಾಲಯ ದಲ್ಲಿ ಇಂದು ಆಯೋಜಿಸಲಾಗಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ತಂತ್ರಜ್ಞಾನದತ್ತ ಸೆಳೆಯಲು ರಾಜ್ಯಾದ್ಯಂತ 'ನೆಹರು ಸ್ಟ್ರೀಮ್ ಲ್ಯಾಬ್' (Nehru Stream Labs) ಹಾಗೂ 'ಇನ್ನೋವೇಶನ್ ಲ್ಯಾಬ್' (Innovation Labs) ಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಹೇಳಿದರು.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ (KKRDB) ಸಹಯೋಗದೊಂದಿಗೆ, ಕಲ್ಯಾಣ ಕರ್ನಾಟಕ ಭಾಗದ 'ಕರ್ನಾಟಕ ಪಬ್ಲಿಕ್ ಶಾಲೆ'ಗಳಲ್ಲಿ (KPS) ನವೀನ ಮಾದರಿಯ 'ನೆಹರು ಸ್ಟ್ರೀಮ್ ಲ್ಯಾಬ್'ಗಳನ್ನು ನಿರ್ಮಿಸಲಾಗುತ್ತಿದೆ. ಜೊತೆಗೆ, 2025-26ನೇ ಸಾಲಿನಲ್ಲಿ SCSP/TSP ಅನುದಾನದಡಿ 6 ಕೋಟಿ ರೂ. ವೆಚ್ಚದಲ್ಲಿ ರಾಜ್ಯದ 60ಕ್ಕೂ ಹೆಚ್ಚು ವಸತಿ ಶಾಲೆಗಳಲ್ಲಿ 'ಇನ್ನೋವೇಶನ್ ಲ್ಯಾಬ್' ಗಳನ್ನು ನಿರ್ಮಿಸಲು ಕ್ರಮ ವಹಿಸಲಾಗಿದೆ ಎಂದರು.
ಚಟುವಟಿಕೆ ಆಧಾರಿತ ಕಲಿಕೆಯನ್ನು ಉತ್ತೇಜಿಸಲು ಕಲ್ಯಾಣ ಕರ್ನಾಟಕದ ಶಾಲೆಗಳಲ್ಲಿ 'ನೆಹರು ಸ್ಟ್ರೀಮ್ ಲ್ಯಾಬ್' ಹಾಗೂ ಹಿಂದುಳಿದ ವರ್ಗಗಳ ವಸತಿ ಶಾಲೆಗಳಲ್ಲಿ 'ಇನ್ನೋವೇಶನ್ ಲ್ಯಾಬ್'ಗಳನ್ನು ನಿರ್ಮಿಸಲಾಗುತ್ತಿದೆ. ಇದು ಗ್ರಾಮೀಣ ವಿದ್ಯಾರ್ಥಿಗಳಲ್ಲಿ ನಾವೀನ್ಯತೆ (Innovation) ಮತ್ತು ಭವಿಷ್ಯದ ತಂತ್ರಜ್ಞಾನಗಳ ಬಗ್ಗೆ ಒಲವು ಮೂಡಿಸಲು ದೊಡ್ಡ ಮಟ್ಟದಲ್ಲಿ ನೆರವಾಗಲಿದೆ ಎಂದು ಸಚಿವರು ಭರವಸೆ ವ್ಯಕ್ತಪಡಿಸಿದರು.
ಸಚಿವ ಮಧು ಬಂಗಾರಪ್ಪ ಮಾತನಾಡಿ, ವೈಜ್ಞಾನಿಕ ಮನೋಭಾವ ಹಾಗೂ ವೈಜ್ಞಾನಿಕ ಚಿಂತನೆಯನ್ನು ಬೆಳೆಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳ ಹೊಸದನ್ನು ಅನ್ವೇಷಿಸುವ ಕುತೂಹಲ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ಮಾತನಾಡಿ, ವಿದ್ಯಾರ್ಥಿಗಳ ಮೊಬೈಲ್ ಬಳಕೆಯನ್ನು ಕಡಿಮೆ ಮಾಡಬೇಕು. ಓದು ಹಾಗೂ ಕ್ರೀಡಾ ಚಟುವಟಿಕೆಗಳ ಬಗ್ಗೆ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು. ತಮಗೆ ದೊರೆತಿರುವಂತಹ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳುವ ಮೂಲಕ ಹೊಸ ಅನ್ವೇಷಣೆಗಳ ಮಾಡಲು ಮುಂದಾಗಬೇಕು ಎಂದರು.
ಇಸ್ರೋ ಮಾಜಿ ಅಧ್ಯಕ್ಷರಾದ ಡಾ ಕಿರಣ್ ಕುಮಾರ್ ಮಕ್ಕಳಿಗೆ ಪ್ರತಿಜ್ಞಾವಿಧಿಯನ್ನು ಭೋಧಿಸಿದರು. ಇದೇ ವೇಳೆ ವಿಜ್ಞಾನ ಕ್ಷೇತ್ರದಲ್ಲಿ ಸಂಶೋಧನೆಯ ಮೂಲಕ ಅಂತರಾಷ್ಟ್ರೀಯ ಮನ್ನಣೆಯನ್ನು ಪಡೆದಂತಹ ವಿದ್ಯಾರ್ಥಿಗಳಾದ ಕಿರಟ್ ಕೌರ್, ಎಸ್ ಯಾಮಿನಿ, ರೆಷ್ಮಾ ಜೆವಿ ಹಾಗೂ ಲಕ್ಷ್ಮಿ ಜಿ ಅವರನ್ನು ಸನ್ಮಾನಿಸಲಾಯಿತು. ಸಚಿವ ಪ್ರಿಯಾಂಕಾ ಖರ್ಗೆ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

