

ಬೆಂಗಳೂರು: ಇಂದು ಮಧ್ಯಾಹ್ನ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ.
ಇಂದು ಬೆಳಗ್ಗೆ 11.30ಕ್ಕೆ ವಿಧಾನ ಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದ್ದ 2025ನೇ ಸಾಲಿನ 27ನೇ ಸಚಿವ ಸಂಪುಟ ಸಭೆಯನ್ನು ಮುಂದೂಡಿ ಇಂದೇ ಮಧ್ಯಾಹ್ನ 12 ಗಂಟೆಗೆ ಕರೆಯಲಾಗಿದೆ ಎಂದು ಸರ್ಕಾರದ ಅಪರ ಕಾರ್ಯದರ್ಶಿ ಪ್ರಕಟಣೆ ಹೊರಡಿಸಿದ್ದಾರೆ.
ರಾಜ್ಯ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ, ಅಧಿಕಾರ ಹಂಚಿಕೆ, ನಿನ್ನೆ ರಾಹುಲ್ ಗಾಂಧಿಯವರು ಮೈಸೂರಿಗೆ ಬಂದು ಹೋದ ಬೆನ್ನಲ್ಲೇ ಸಚಿವ ಸಂಪುಟ ಸಭೆ ನಡೆಯುತ್ತಿರುವುದು ವಿಶೇಷವಾಗಿದೆ.
ವಿಬಿ ಜಿ ರಾಮ್ ಜಿ ಕಾಯ್ದೆ ಚರ್ಚೆ
ಮನರೇಗಾ ಯೋಜನೆ ಬದಲಿಸಿ ವಿಬಿ ಜಿ ರಾಮ್ ಜಿ ಕಾಯ್ದೆ ಜಾರಿಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸುವ ಸಂಬಂಧ ವಿಶೇಷ ಅಧಿವೇಶನ ಕರೆಯಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಬುಧವಾರ ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳುವ ಸಾಧ್ಯತೆಯಿದೆ.
ಕಾಯ್ದೆ ವಿರೋಧಿಸಲು ಚರ್ಚೆ
ಈಗಾಗಲೇ ಮನರೇಗಾ ಯೋಜನೆ ರದ್ದತಿ ವಿರುದ್ಧ ಕಾಂಗ್ರೆಸ್ ಗ್ರಾಮ ಮಟ್ಟದಿಂದ ಹೋರಾಟ ಮಾಡಲು ಸಜ್ಜಾಗಿದೆ. ಜತೆಗೆ ರಾಜ್ಯ ಸರ್ಕಾರದಿಂದಲೂ ಕೇಂದ್ರ ಸರ್ಕಾರದ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಲು ಸಿದ್ಧತೆ ನಡೆಯುತ್ತಿದೆ. ಅದರ ವಿರುದ್ಧ ಖಂಡನೆ ಮಾಡಿ ಅಧಿವೇಶನದಲ್ಲಿ ನಿರ್ಣಯ ತೆಗೆದುಕೊಳ್ಳಬೇಕೇ ಅಥವಾ ಪರಿಷ್ಕರಣೆಗೆ ಒತ್ತಾಯಿಸಬೇಕೇ ಎಂಬ ಕುರಿತು ಸಂಪುಟ ಸಭೆಯಲ್ಲಿ ಚರ್ಚೆಯಾಗಲಿದೆ.
ಕಳೆದ ಜ.2ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಬಿ ಜಿ ರಾಮ್ ಜಿ ಯೋಜನೆ ವಿರುದ್ಧ ನಿರ್ಣಯಗೊಂಡು ಈ ಕುರಿತು ವಿಧಾನಮಂಡಲ ಅಧಿವೇಶನ ನಡೆಸಿ ಅಲ್ಲೂ ಅಧಿಕೃತ ನಿರ್ಣಯ ಕೈಗೊಳ್ಳಲು ಚರ್ಚಿಸಲಾಗಿತ್ತು.
ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ಜಂಟಿ ಅಧಿವೇಶನ
ಸಂಪುಟ ಸಭೆಯಲ್ಲಿ ಇಂದು ಮೊದಲಿಗೆ ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ಜಂಟಿ ಅಧಿವೇಶನ ಕರೆಯಲು ದಿನಾಂಕ ನಿಗದಿಯಾಗಲಿದ್ದು, ಅದೇ ಅಧಿವೇಶನದಲ್ಲಿ ‘ಜಿ ರಾಮ್ ಜಿ’ ವಿರುದ್ಧ ಚರ್ಚೆ ನಡೆಸಲಿರುವ ಸರ್ಕಾರ, ಕೇಂದ್ರದ ವಿರುದ್ಧ ನಿರ್ಣಯ ಮಂಡಿಸಲಿದೆ ಎಂದು ತಿಳಿದುಬಂದಿದೆ.
ಸಂಪ್ರದಾಯದಂತೆ ವರ್ಷದ ಮೊದಲ ಅಧಿವೇಶನದಲ್ಲಿ ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕು. ಹೀಗಾಗಿ ಸರ್ಕಾರ ಜ.20 ಹಾಗೂ 21 ರಂದು ಜಂಟಿ ಅಧಿವೇಶನ ಕರೆಯುವ ನಿರೀಕ್ಷೆ ಇದೆ.
Advertisement