

ಬೆಂಗಳೂರು: ಇಂಧನ ಸಚಿವ ಕೆ.ಜೆ ಜಾರ್ಜ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರೇ, ಈ ವಿಚಾರ ಮಾಧ್ಯಮಗಳಲ್ಲಿ ವರದಿಯಾಗಿ ನಂತರ ಇಂದು ವಿಧಾನಸಭೆಯಲ್ಲಿ ಕೂಡ ಪ್ರತಿಧ್ವನಿಸಿದ ಪ್ರಸಂಗ ನಡೆಯಿತು.
ಇಂಧನ ಇಲಾಖೆಯ ಅಧಿಕಾರಿಗಳ ವರ್ಗಾವಣೆ ವಿಚಾರವಾಗಿ ವಿಶ್ವಾಸಕ್ಕೆ ಪಡೆಯದೆ ಕ್ರಮ ಕೈಗೊಳ್ಳಲಾಗಿದೆ ಎಂಬ ಕಾರಣಕ್ಕಾಗಿ ಅಸಮಾಧಾನಗೊಂಡು ಕೆ ಜೆ ಜಾರ್ಜ್ ರಾಜೀನಾಮೆ ನೀಡಲು ಮುಂದಾಗಿದ್ದರು, ಸಿಎಂಗೆ ರಾಜೀನಾಮೆ ಪತ್ರ ನೀಡಲು ಮುಂದಾಗಿದ್ದರು, ಆಗ ಸಿಎಂ ಅವರ ಕಾನೂನು ಸಲಹೆಗಾರ ಪೊನ್ನಣ್ಣ ಅವರು ಮಧ್ಯೆ ಪ್ರವೇಶಿಸಿ ಜಾರ್ಜ್ ಅವರ ಮನವೊಲಿಸಿದರು ಎಂಬ ವಿಚಾರ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಬಗ್ಗೆ ವಿಧಾನಸಭೆಯಲ್ಲಿ ಸ್ವತಃ ಕೆಜೆ ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ.
ಇಂಧನ ಇಲಾಖೆಯ ಕೆಲವು ಅಧಿಕಾರಿಗಳನ್ನು ವರ್ಗಾವಣೆ ಮಾಡಲು ಸಿಎಂ ಕಚೇರಿ ಮುಂದಾಗಿತ್ತು. ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಇಂಧನ ಇಲಾಖೆ ಆಡಳಿತದಲ್ಲಿ ತೀವ್ರ ಹಸ್ತಕ್ಷೇಪ ಮಾಡುತ್ತಿದ್ದರು. ಇದರಿಂದ ಅಸಮಾಧಾನಗೊಂಡ ಕೆಜೆ ಜಾರ್ಜ್ ಸಿಎಂ ನಿವಾಸಕ್ಕೆ ತೆರಳಿ ಪ್ರಶ್ನಿಸಿದ್ದರು. ಅಲ್ಲದೆ ಸಚಿವ ಸಂಪುಟ ಸಭೆಗೂ ಗೈರಾಗಿದ್ದರು ಎಂದು ಹೇಳಲಾಗಿತ್ತು.
ಮಂತ್ರಿಯಾಗಿ ನನ್ನ ಮಾತಿಗೆ ಬೆಲೆ ಇಲ್ಲ. ಹೀಗಿರುವಾಗ ನಾನೇಕೆ ಇಲ್ಲಿ ಇರಲಿ ಎಂದು ಸಚಿವರು ಬೇಸರ ಹೊರ ಹಾಕಿದ್ದರು ಎಂಬ ಮಾಹಿತಿ ಇದೆ. ಬಳಿಕ ಸಿಎಂ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರ ಎಎಸ್ ಪೊನ್ನಣ್ಣ ಅವರು ಸಂಧಾನ ನಡೆಸಿ ಸಚಿವರನ್ನು ಸಮಾಧಾನ ಪಡಿಸಿದ್ದರು ಎಂಬ ಮಾಹಿತಿ ಕೇಳಿ ಬರುತ್ತಿತ್ತು.
ಇಂದು ಸದನದಲ್ಲಿ ಪ್ರಸ್ತಾಪ
ಇಂದು ಪ್ರಶ್ನೋತ್ತರ ಅವಧಿಯ ಬಳಿಕ ಈ ವಿಚಾರವಾಗಿ ಬಿಜೆಪಿ ಸದಸ್ಯ ಸುನೀಲ್ ಕುಮಾರ್ ಪ್ರಸ್ತಾಪ ಮಾಡಿದರು. " ಇಂಧನ ಸಚಿವ ಕೆ ಜೆ ಜಾರ್ಜ್ ರಾಜೀನಾಮೆ ಕೊಟ್ಟಿದ್ದಾರೆ. ಸಿಎಂ ಮಗನ ಹಸ್ತಕ್ಷೇಪದ ಕಾರಣಕ್ಕಾಗಿ ರಾಜೀನಾಮೆ ಕೊಟ್ಟಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಬಂದಿದೆ, ಈ ಬಗ್ಗೆ ಸ್ಪಷ್ಟನೆ ಕೊಡಿ ಎಂದು ಆಗ್ರಹಿಸಿದರು.
ಇದಕ್ಕೆ ಸ್ಪಷ್ಟನೆ ನೀಡಿದ ಸಚಿವ ಕೆಜೆ ಜಾರ್ಜ್, ರಾಜೀನಾಮೆ ಕೊಡಲು ಮುಂದಾಗಿದ್ದೇನೆ ಎಂದು ಮಾಧ್ಯಮಗಳಲ್ಲಿ ಬರುತ್ತಿದೆ ಎಂದು ಹೇಳಿದ್ದಾರೆ. ನಾನು ಮಾಧ್ಯಮಗಳಿಗೆ ಹೇಳಿದ್ದೇನಾ? ನನಗೆ ಸಿಎಂ ಸಿದ್ದರಾಮಯ್ಯ ಮೇಲೆ ಸಂಪೂರ್ಣ ನಂಬಿಕೆ ಇದೆ. ಈ ಮಾಹಿತಿ ಸತ್ಯಕ್ಕೆ ದೂರವಾಗಿದೆ ಎಂದು ತಿಳಿಸಿದರು.
ಹಿಂದೆಲ್ಲಾ ದಿನಕ್ಕೆ ಮೂರು ಬಾರಿ ನ್ಯೂಸ್ ಬರುತ್ತಿತ್ತು. ಈಗ ಗಂಟೆಗೊಂದು ಬ್ರೇಕಿಂಗ್ ನ್ಯೂಸ್ ಬರುತ್ತಿದೆ. ಅವರೇ ಸೃಷ್ಟಿ ಮಾಡುತ್ತಿದ್ದಾರೆ. ನಾನು ರಾಜೀನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ. ನನಗೆ ಸಿಎಂ ಹಾಗೂ ಸರ್ಕಾರದ ಮೇಲೆ ಸಂಪೂರ್ಣ ನಂಬಿಕೆ ಮತ್ತು ಬೆಂಬಲ ಇದೆ ಎಂದು ತಿಳಿಸಿದರು.
Advertisement