ED case: ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್‌ಗೆ ಹೈಕೋರ್ಟ್ ಜಾಮೀನು

ಈ ಹಿಂದೆ ದಿನೇಶ್ ಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿತ್ತು. ನಂತರ ಅವರು ಹೈಕೋರ್ಟ್ ಮೊರೆ ಹೋಗಿದ್ದರು.
High court
ಹೈಕೋರ್ಟ್ online desk
Updated on

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿರುವ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಪ್ರಕರಣದಲ್ಲಿ ಬಂಧಿತರಾಗಿರುವ ಮುಡಾದ ಮಾಜಿ ಆಯುಕ್ತ ದಿನೇಶ್ ಕುಮಾರ್ ಅವರಿಗೆ ಕರ್ನಾಟಕ ಹೈಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ದಿನೇಶ್ ಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಅನುಮೋದಿಸಿ ಆದೇಶ ಹೊರಡಿಸಿತು.

ನ್ಯಾಯಾಲಯವು ರೂ.5 ಲಕ್ಷ ವೈಯಕ್ತಿಕ ಬಾಂಡ್ ಹಾಗೂ ಅಷ್ಟೇ ಮೊತ್ತದ ಇಬ್ಬರು ಶ್ಯೂರಿಟಿದಾರರನ್ನು ಒದಗಿಸುವ ಷರತ್ತಿನ ಮೇಲೆ ಜಾಮೀನು ನೀಡಿದೆ. ಅಲ್ಲದೆ, ಪ್ರಕರಣದ ಸಾಕ್ಷಿದಾರರ ಮೇಲೆ ಯಾವುದೇ ರೀತಿಯ ಪ್ರಭಾವ ಬೀರುವ ಅಥವಾ ಸಾಕ್ಷ್ಯ ನಾಶಪಡಿಸುವ ಪ್ರಯತ್ನ ಮಾಡಬಾರದು ಹಾಗೂ ಮುಂದಿನ ಎಲ್ಲಾ ವಿಚಾರಣಾ ದಿನಾಂಕಗಳಲ್ಲಿ ಸಂಬಂಧಪಟ್ಟ ನ್ಯಾಯಾಲಯಕ್ಕೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಷರತ್ತು ವಿಧಿಸಿದೆ.

ಮುಡಾ ನಿವೇಶನ ಹಂಚಿಕೆ ಅಕ್ರಮಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ನೀಡಿದ್ದ ದೂರಿನ ಆಧಾರದ ಮೇಲೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ, ಬಾಮೈದ ಹಾಗೂ ಮತ್ತೊಬ್ಬರ ವಿರುದ್ಧ ಸೇರಿದಂತೆ ಹಲವರ ವಿರುದ್ಧ ದೂರು ದಾಖಲಾಗಿತ್ತು. ಆದರೆ, ತನಿಖೆ ಬಳಿಕ ಮೂಲ ಅಪರಾಧ (Predicate Offence) ಪ್ರಕರಣದಲ್ಲಿ ಸಿದ್ದರಾಮಯ್ಯ ಸೇರಿದಂತೆ ಕೆಲವರ ಹೆಸರನ್ನು ಆರೋಪಿಗಳ ಪಟ್ಟಿಯಿಂದ ಕೈಬಿಡಲಾಗಿತ್ತು. ಉಳಿದ ಆರೋಪಿಗಳ ವಿರುದ್ಧ ಇಡಿ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಪ್ರತ್ಯೇಕ ಪ್ರಕರಣ ದಾಖಲಿಸಿತ್ತು. ಆ ಆರೋಪಿಗಳಲ್ಲಿ ದಿನೇಶ್ ಕುಮಾರ್ ಕೂಡ ಒಬ್ಬರಾಗಿದ್ದಾರೆ.

ಈ ಹಿಂದೆ ದಿನೇಶ್ ಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿತ್ತು. ನಂತರ ಅವರು ಹೈಕೋರ್ಟ್ ಮೊರೆ ಹೋಗಿದ್ದರು.

ಅರ್ಜಿದಾರರ ಪರ ಹಿರಿಯ ವಕೀಲರು ವಾದ ಮಂಡಿಸಿ, ಇದೇ ಹೈಕೋರ್ಟ್‌ನ ಸಮನ್ವಯ ಪೀಠವು ಈ ವರ್ಷದ ಜನವರಿಯಲ್ಲಿ, ವಿಚಾರಣೆಯಲ್ಲಿ ಮೂರು ತಿಂಗಳಿಗಿಂತ ಹೆಚ್ಚು ವಿಳಂಬವಾಗಿದ್ದರೆ ಹಾಗೂ ಪ್ರಕರಣದಲ್ಲಿ ಬದಲಾದ ಪರಿಸ್ಥಿತಿಗಳು ಕಂಡುಬಂದರೆ ಮತ್ತೆ ಜಾಮೀನಿಗೆ ಅರ್ಜಿ ಸಲ್ಲಿಸಬಹುದು ಎಂದು ಅವಕಾಶ ನೀಡಿತ್ತು ಎಂದು ನ್ಯಾಯಾಲಯದ ಗಮನಕ್ಕೆ ತಂದರು.

High court
ಮುಡಾ ಪ್ರಕರಣ: ಮತ್ತೆ ಸಿಎಂ ಗೆ ಸಂಕಷ್ಟ; 'ಬಿ' ರಿಪೋರ್ಟ್ ಸಂಬಂಧ ಸಿದ್ದರಾಮಯ್ಯ, ಪತ್ನಿ ಗೆ ಹೈಕೋರ್ಟ್ ನೋಟಿಸ್ ಜಾರಿ

ಪ್ರಸ್ತುತ ಪ್ರಕರಣದಲ್ಲಿ ಒಟ್ಟು ಒಂಬತ್ತು ಬದಲಾದ ಪರಿಸ್ಥಿತಿಗಳು ಉಂಟಾಗಿವೆ. ಮೊದಲ ಬಾರಿ ಜಾಮೀನು ಕೋರುವಾಗ ಪ್ರಕರಣಕ್ಕೆ ಕೇವಲ 127 ದಿನಗಳು ಆಗಿದ್ದವು. ಈಗ 275 ದಿನಗಳು ಕಳೆದಿದ್ದರೂ ಪ್ರಕರಣ ಇನ್ನೂ ಪ್ರಜ್ಞಾಪೂರ್ವ (Pre-cognisance) ಹಂತದಲ್ಲೇ ಇದೆ. ಹೀಗಾಗಿ ದೀರ್ಘ ವಿಳಂಬ ಮತ್ತು ಬದಲಾದ ಪರಿಸ್ಥಿತಿಗಳ ಹಿನ್ನೆಲೆಯಲ್ಲಿ ಜಾಮೀನು ನೀಡಬೇಕು ಎಂದು ವಾದಿಸಿದರು.

ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ. ಅರವಿಂದ ಕಾಮತ್, ಪ್ರಕರಣದಲ್ಲಿ ಕೆಲವು ಬದಲಾದ ಪರಿಸ್ಥಿತಿಗಳು ಉಂಟಾಗಿವೆ ಎಂಬ ಕಾರಣಕ್ಕೆ ಹಿಂದಿನ ಜಾಮೀನು ತಿರಸ್ಕರಿಸಿದ ಆದೇಶವನ್ನು ಕಡೆಗಣಿಸಲು ಸಾಧ್ಯವಿಲ್ಲ ಎಂದು ವಾದಿಸಿದರು.

ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳಲ್ಲಿ ವಿಚಾರಣೆಯಲ್ಲಿ ವಿಳಂಬವಾಗಿದೆ ಎಂಬ ಕಾರಣ ಮಾತ್ರಕ್ಕೆ ಜಾಮೀನು ನೀಡಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ ಎಂದು ಅವರು ಹೇಳಿದರು.

ಆದರೆ, ನ್ಯಾಯಾಲಯ, ಈ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು ಸುಮಾರು 12 ಸಾವಿರ ಪುಟಗಳಷ್ಟಿದ್ದು, ವಿಚಾರಣೆಯಲ್ಲಿ ಅನೇಕ ಸಾಕ್ಷಿದಾರರನ್ನು ಪರೀಕ್ಷಿಸಬೇಕಿರುವುದು ಒಪ್ಪಿಕೊಂಡಿರುವ ವಿಚಾರವಾಗಿದೆ ಎಂದು ಅಭಿಪ್ರಾಯಪಟ್ಟಿತು.

ಪ್ರಕರಣದಲ್ಲಿ ಬದಲಾದ ಪರಿಸ್ಥಿತಿಗಳೇ ಇಲ್ಲದಿದ್ದರೆ ಸರ್ಕಾರದ ಪರ ವಾದವನ್ನು ಪರಿಗಣಿಸಬಹುದಾಗಿತ್ತು. ಆದರೆ, ಈಗ ಪರಿಸ್ಥಿತಿ ಬದಲಾಗಿರುವ ಹಿನ್ನೆಲೆಯಲ್ಲಿ ಜಾಮೀನು ನೀಡಲು ಅಡ್ಡಿಯಿಲ್ಲ ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com