

ಬೆಂಗಳೂರು: ಎಚ್ಎಂಟಿ ಸಂಸ್ಥೆಯ ಪುನಶ್ಚೇತನವನ್ನು ಹಳ್ಳ ಹಿಡಿಸಲು ಕರ್ನಾಟಕದ ಕಾಂಗ್ರೆಸ್ ಸರ್ಕಾರ ಸಂಚು ರೂಪಿಸುತ್ತಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್ಎಂಟಿ ಉಳಿವಿಗಾಗಿ ಕೇಂದ್ರ ಸರ್ಕಾರ ಬಹುಕೋಟಿ ರೂಪಾಯಿಗಳ ವಿಶೇಷ ಪ್ಯಾಕೇಜ್ ಘೋಷಿಸಲು ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೇ, ರಾಜ್ಯ ಸರ್ಕಾರವು ಅರಣ್ಯ ಇಲಾಖೆಯನ್ನು ಅಸ್ತ್ರವಾಗಿ ಬಳಸಿಕೊಂಡು ಈ ಪ್ರಕ್ರಿಯೆಗೆ ಅಡ್ಡಿಪಡಿಸುತ್ತಿದೆ ಎಂದು ದೂರಿದ್ದಾರೆ.
ಇದೇ ವೇಳೆ ಎಚ್ಎಂಟಿಗೆ ಸೇರಿದ 430 ಎಕರೆ ಭೂಮಿ ಅರಣ್ಯ ಪ್ರದೇಶವಾಗಿದೆ ಎಂದು ಹೇಳಿ, ತಕ್ಷಣವೇ ಭೂಮಿಯನ್ನು ಅರಣ್ಯ ಇಲಾಖೆಗೆ ಒಪ್ಪಿಸುವಂತೆ ಅರಣ್ಯ ಇಲಾಖೆ ನೀಡಿರುವ ನೋಟಿಸ್, ಸಮಯ ಮತ್ತು ಕ್ರಮವನ್ನು ಪ್ರಶ್ನಿಸಿದ್ದಾರೆ.
ಈ ಕುರಿತು ಪ್ರಕರಣ ಈಗಾಗಲೇ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ. ಇಂತಹ ಸಂದರ್ಭದಲ್ಲಿ ಗಡುವು ನಿಗದಿ ಮಾಡಿ ನೋಟಿಸ್ ನೀಡಿರುವುದು ಕಾನೂನುಬಾಹಿರ. ಎಚ್ಎಂಟಿ ಈ ಆದೇಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಿದೆ ಎಂದೂ ತಿಳಿಸಿದ್ದಾರೆ.
ವಿಶೇಷ ಪ್ಯಾಕೇಜ್ ಅಂತಿಮ ಹಂತದಲ್ಲಿ
ಎಚ್ಎಂಟಿ ಪುನಶ್ಚೇತನಕ್ಕಾಗಿ ವಿಶೇಷ ಪ್ಯಾಕೇಜ್ಗೆ ಅನುಮೋದನೆ ಪಡೆಯಲು ನಾನು ಪ್ರಧಾನಿ ಹಾಗೂ ಕೇಂದ್ರ ಹಣಕಾಸು ಸಚಿವರೊಂದಿಗೆ ನಿರಂತರವಾಗಿ ಮಾತುಕತೆ ನಡೆಸುತ್ತಿದ್ದೇನೆ. ಎಚ್ಎಂಟಿ ನನ್ನ ವ್ಯಾಪ್ತಿಯ ಭಾರೀ ಕೈಗಾರಿಕೆ ಸಚಿವಾಲಯದ ಅಡಿಯಲ್ಲಿ ಬರುತ್ತದೆ. ಪ್ಯಾಕೇಜ್ ಘೋಷಣೆಗೆ ಸಿದ್ಧವಾಗಿರುವ ವೇಳೆಯಲ್ಲೇ ರಾಜ್ಯ ಸರ್ಕಾರ ದುರುದ್ದೇಶದಿಂದ ಈ ನೋಟಿಸ್ ನೀಡಿದೆ" ಎಂದು ಕಿಡಿಕಾರಿದ್ದಾರೆ.
ಶೀಘ್ರದಲ್ಲೇ ಸಭೆ
ಎಚ್ಎಂಟಿ ಪುನಶ್ಚೇತನದ ವಿಶೇಷ ಪ್ಯಾಕೇಜ್ ಕುರಿತು ಶೀಘ್ರದಲ್ಲೇ ಸಭೆ ನಡೆಯಲಿದ್ದು, ಬೆಂಗಳೂರಿನ ಈ ಸಾರ್ವಜನಿಕ ವಲಯದ ಸಂಸ್ಥೆಯನ್ನು ಪುನಶ್ಚೇತನಗೊಳಿಸುವ ಕುರಿತು ಮಹತ್ವದ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
"ಕೈಗಾರಿಕೆಗಳು ಹೇಗೆ ಬರುತ್ತವೆ?"
"ರಾಜ್ಯ ಸರ್ಕಾರವೇ ಇಂತಹ ಪ್ರತಿಕೂಲ ವಾತಾವರಣ ಸೃಷ್ಟಿಸಿದರೆ ಕರ್ನಾಟಕಕ್ಕೆ ಹೊಸ ಕೈಗಾರಿಕೆಗಳು ಹೇಗೆ ಬರುತ್ತವೆ? ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಏನನ್ನೂ ನೀಡುತ್ತಿಲ್ಲ ಎಂದು ಕಾಂಗ್ರೆಸ್ ಸರ್ಕಾರ ಪದೇಪದೇ ಆರೋಪಿಸುತ್ತದೆ. ಆದರೆ, ನಾವು ನೆರವು ನೀಡಲು ಮುಂದಾದಾಗ ಅದನ್ನು ಸ್ವೀಕರಿಸಲು ಸಿದ್ಧವಿಲ್ಲ ಎಂದು ವಾಗ್ದಾಳಿ ನಡೆಸಿದರು.
ತಾವು ಕೇಂದ್ರ ಭಾರೀ ಕೈಗಾರಿಕೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕದಿಂದಲೇ ಕಾಂಗ್ರೆಸ್ ಸರ್ಕಾರ ಎಚ್ಎಂಟಿ ಪುನಶ್ಚೇತನಕ್ಕೆ ಅಡ್ಡಿ ಉಂಟು ಮಾಡುವ ಕೆಲಸ ಆರಂಭಿಸಿದೆ ಎಂದು ಆರೋಪಿಸಿದ್ದಾರೆ.