

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಹವಾಮಾನ ಇಲಾಖೆಯು ರಾಜ್ಯದ ಪ್ರಮುಖ 6 ಜಿಲ್ಲೆಗಳಿಗೆ ನಾಳೆ ರೆಡ್ ಅಲರ್ಟ್ ಘೋಷಿಸಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ನೀಡಲಾಗಿದೆ.
ಭಾರೀ ಮಳೆಯ ಮುನ್ನೆಚ್ಚರಿಕೆಯಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಸೇರಿದಂತೆ ಮಳೆಯ ತೀವ್ರತೆ ಹೆಚ್ಚಿರುವ ತಾಲ್ಲೂಕುಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ.
ಆರು ಜಿಲ್ಲೆಯ ಒಂದು ಅಥವಾ ಎರಡು ಕಡೆಗಳಲ್ಲಿ 204. 4 ಮಿ.ಮೀ ಮಳೆಯಾಗುವ ಸೂಚನೆಯಿದ್ದು, ಗಾಳಿಯು ಗಂಟೆಗೆ 50 ರಿಂದ 60 ಕಿ. ಮೀ ನಷ್ಟು ವೇಗದಲ್ಲಿ ಇರಲಿದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ. ಇದಲ್ಲದೇ ಇಂದಿನಿಂದ ಜುಲೈ 11ರವರೆಗೆ ರಾಜ್ಯದ ಘಟ್ಟ ಪ್ರದೇಶದ ಒಂದು ಅಥವಾ ಎರಡು ಕಡೆಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆಯೂ ಇದೆ ಎಂದು ತಿಳಿಸಲಾಗಿದೆ.