ಅಂಬೋಲಿ ಜಲಪಾತ ಹತ್ತಿರ ಭಾರೀ ಭೂಕುಸಿತ: ಕರ್ನಾಟಕ–ಮಹಾರಾಷ್ಟ್ರ ಗಡಿ ಮಾರ್ಗದಲ್ಲಿ ಸಂಚಾರ ಅಸ್ತವ್ಯಸ್ತ-Video

ಘಟನೆ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದ್ದರಿಂದ ಸಂಚಾರ ದಟ್ಟಣೆ ಕಡಿಮೆಯಾಗಿದ್ದು, ಯಾವುದೇ ಪ್ರಾಣಹಾನಿ ಅಥವಾ ವಾಹನಗಳಿಗೆ ಹಾನಿಯಾಗಿಲ್ಲ.
Landslide Near Amboli Falls
ಭೂಕುಸಿತ ನಂತರ ರಾತ್ರಿ ವೇಳೆ ಅಂಬೋಲಿ ಜಲಪಾತ ಬಳಿ ಕಂಡುಬಂದ ದೃಶ್ಯ
Updated on

ಬೆಳಗಾವಿ: ಭಾರೀ ಮಳೆಯಿಂದಾಗಿ ನೆರೆಯ ಮಹಾರಾಷ್ಟ್ರದ ಜನಪ್ರಿಯ ಅಂಬೋಲಿ ಜಲಪಾತ ಸಮೀಪ ಭೂಕುಸಿತ ಸಂಭವಿಸಿದ್ದು, ಬೆಳಗಾವಿ–ಸಿಂಧುದುರ್ಗ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಈ ಘಟನೆ ಪ್ರಯಾಣಿಕರು ಹಾಗೂ ಪ್ರವಾಸಿಗರ ಸುರಕ್ಷತೆಯ ಬಗ್ಗೆ ಆತಂಕ ಮೂಡಿಸಿದೆ.

ಮಹಾರಾಷ್ಟ್ರದ ಸಾವಂತವಾಡಿ ತಾಲ್ಲೂಕಿನ ಅಂಬೋಲಿ ಜಲಪಾತದ ಸಮೀಪ ನಿನ್ನೆ ಮಂಗಳವಾರ ತಡರಾತ್ರಿ ಭೂಕುಸಿತ ಸಂಭವಿಸಿದೆ. ಬೆಟ್ಟದ ಮೇಲ್ಭಾಗದಿಂದ ಹಲವಾರು ಬೃಹತ್ ಬಂಡೆಗಳು ಉರುಳಿ ರಸ್ತೆಗೆ ಬಿದ್ದಿದ್ದು, ಕನಿಷ್ಠ ನಾಲ್ಕು ಬೃಹತ್ ಬಂಡೆಗಳ ಕುಸಿತದಿಂದ ರಸ್ತೆ ಸಂಪೂರ್ಣ ತಡೆದಿವೆ. ಪರಿಣಾಮವಾಗಿ ಈ ಮಾರ್ಗದಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಘಟನೆ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದ್ದರಿಂದ ಸಂಚಾರ ದಟ್ಟಣೆ ಕಡಿಮೆಯಾಗಿದ್ದು, ಯಾವುದೇ ಪ್ರಾಣಹಾನಿ ಅಥವಾ ವಾಹನಗಳಿಗೆ ಹಾನಿಯಾಗಿಲ್ಲ.

ಘಟನೆಯ ಮಾಹಿತಿ ದೊರಕುತ್ತಿದ್ದಂತೆಯೇ ಚಂದಗಡದ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಸ್ತೆ ತೆರವು ಕಾರ್ಯಾಚರಣೆ ಆರಂಭಿಸಿದರು. ಸಿಂಧುದುರ್ಗ ಜಿಲ್ಲಾ ಉಸ್ತುವಾರಿ ಸಚಿವ ನಿತೇಶ್ ರಾಣೆ ಅವರ ಸೂಚನೆಯಂತೆ ಈ ಕಾರ್ಯಾಚರಣೆ ಕೈಗೊಳ್ಳಲಾಯಿತು. ಬೃಹತ್ ಬಂಡೆಗಳನ್ನು ತೆರವುಗೊಳಿಸಿ ಸಂಪರ್ಕವನ್ನು ಪುನಃ ಸ್ಥಾಪಿಸಲು ಭಾರೀ ಯಂತ್ರೋಪಕರಣಗಳನ್ನು ಬಳಸಲಾಯಿತು.

ಹಲವು ಗಂಟೆಗಳ ಕಾರ್ಯಾಚರಣೆಯ ಬಳಿಕ ಮಹಾರಾಷ್ಟ್ರ ಪೊಲೀಸರು ಕಟ್ಟುನಿಟ್ಟಿನ ನಿಯಂತ್ರಣದೊಂದಿಗೆ ಏಕಮುಖ ಸಂಚಾರಕ್ಕೆ ಅವಕಾಶ ನೀಡಿ ರಸ್ತೆಯನ್ನು ಭಾಗಶಃ ತೆರೆದರು.

ನಿರಂತರ ಮಳೆಯಿಂದಾಗಿ ಘಾಟ್ ಪ್ರದೇಶದಲ್ಲಿ ಮತ್ತಷ್ಟು ಭೂಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಅತ್ಯಂತ ಎಚ್ಚರಿಕೆಯಿಂದ ಸಂಚರಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

Landslide Near Amboli Falls
ದೂದ್ ಸಾಗರ್ ಗೆ ಅಕ್ರಮವಾಗಿ ಪ್ರವೇಶಿಸಿದ 39 ಟ್ರಕ್ಕರ್ ಗಳು: ದಂಡ ವಿಧಿಸಿದ RPF

ಅಂಬೋಲಿ ಜಲಪಾತವು ಕರ್ನಾಟಕ, ಮಹಾರಾಷ್ಟ್ರ ಹಾಗೂ ಗೋವಾದ ಪ್ರವಾಸಿಗರ ಪಾಲಿನ ಅತ್ಯಂತ ಜನಪ್ರಿಯ ಮಳೆಗಾಲ ಪ್ರವಾಸಿ ತಾಣವಾಗಿದೆ. ಕರ್ನಾಟಕದ ಹಲವು ಜಲಪಾತಗಳಲ್ಲಿ ಸುರಕ್ಷತಾ ಕಾರಣಗಳಿಂದ ನಿರ್ಬಂಧ ಹೇರಲಾಗಿರುವ ಹಿನ್ನೆಲೆಯಲ್ಲಿ, ವಾರಾಂತ್ಯಗಳಲ್ಲಿ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಪರ್ಯಾಯ ತಾಣವಾಗಿ ಅಂಬೋಲಿಯನ್ನು ಆಯ್ಕೆ ಮಾಡುತ್ತಿದ್ದಾರೆ.

ಹವಾಮಾನ ಪರಿಸ್ಥಿತಿಯನ್ನು ಗಮನಿಸಿ ಹಾಗೂ ಪೊಲೀಸ್ ಇಲಾಖೆಯ ಸೂಚನೆಗಳನ್ನು ಪಾಲಿಸಿದ ನಂತರವೇ ಈ ಪ್ರದೇಶಕ್ಕೆ ಪ್ರಯಾಣಿಸುವಂತೆ ಅಧಿಕಾರಿಗಳು ಪ್ರವಾಸಿಗರಿಗೆ ಮನವಿ ಮಾಡಿದ್ದಾರೆ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಜಿಲ್ಲಾ ಆಡಳಿತ ಪರಿಸ್ಥಿತಿಯನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com