ಜನರು ಸರ್ಕಾರ ಹುಡುಕಿಕೊಂಡು ಬರಬಾರದು: ಸರ್ಕಾರವೇ ಜನರ ಬಳಿಗೆ ಹೋಗಬೇಕು; CM ಡಿ.ಕೆ. ಶಿವಕುಮಾರ್

ಅಧಿಕಾರಿಗಳು ಜನರೊಂದಿಗೆ ಗೌರವಯುತವಾಗಿ ಹಾಗೂ ಸಂವೇದನಾಶೀಲವಾಗಿ ವರ್ತಿಸಬೇಕು. ಸಾರ್ವಜನಿಕ ಸೇವೆಯೇ ಅವರ ಮೊದಲ ಆದ್ಯತೆಯಾಗಬೇಕು.
DK Shivkumar
ಡಿ.ಕೆ. ಶಿವಕುಮಾರ್
Updated on

ಬೆಳಗಾವಿ: ಸಾರ್ವಜನಿಕರು ತಮ್ಮ ಕೆಲಸಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಇರಬಾರದು. ಜನರು ಸರ್ಕಾರವನ್ನು ಹುಡುಕಿಕೊಂಡು ಬರಬಾರದು, ಸರ್ಕಾರವೇ ಜನರ ಮನೆ ಬಾಗಿಲಿಗೆ ತಲುಪಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸಂದೇಶ ನೀಡಿದ್ದಾರೆ.

ಸುವರ್ಣ ವಿಧಾನಸೌಧದಲ್ಲಿ ಗುರುವಾರ ನಡೆದ ಬೆಳಗಾವಿ ವಿಭಾಗದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲ ಸರ್ಕಾರಿ ಅಧಿಕಾರಿಗಳು ತಮ್ಮ ಕೇಂದ್ರ ಕಚೇರಿಗಳಲ್ಲೇ ಲಭ್ಯವಿದ್ದು, ಸಾರ್ವಜನಿಕರ ಅಹವಾಲುಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ನಿರ್ದೇಶಿಸಿದರು.

ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು (ಸಿಇಒ) ಅಧಿಕಾರಿಗಳ ಹಾಜರಾತಿ ಮತ್ತು ಚಲನ-ವಲನ ದಾಖಲಾತಿಗಳನ್ನು ಕಟ್ಟುನಿಟ್ಟಾಗಿ ಪರಿಶೀಲಿಸಬೇಕು ಎಂದು ಸೂಚಿಸಿದ ಅವರು, ಸಾರ್ವಜನಿಕರು ಒಂದೇ ಕೆಲಸಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಮತ್ತೆ ಮತ್ತೆ ಅಲೆದಾಡುವ ಪರಿಸ್ಥಿತಿಗೆ ಅಂತ್ಯ ಹಾಡಬೇಕು ಎಂದು ಹೇಳಿದರು.

ಅಧಿಕಾರಿಗಳು ಜನರೊಂದಿಗೆ ಗೌರವಯುತವಾಗಿ ಹಾಗೂ ಸಂವೇದನಾಶೀಲವಾಗಿ ವರ್ತಿಸಬೇಕು. ಸಾರ್ವಜನಿಕ ಸೇವೆಯೇ ಅವರ ಮೊದಲ ಆದ್ಯತೆಯಾಗಬೇಕು. ಜನಕೇಂದ್ರಿತ ಆಡಳಿತವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ 'ಪ್ರಜಾಸೇವಾ ಇಲಾಖೆ' ಎಂಬ ಹೊಸ ಇಲಾಖೆಯನ್ನು ಸ್ಥಾಪಿಸಲಾಗುವುದು. ಈ ಇಲಾಖೆಗೆ ಪ್ರತ್ಯೇಕ ಸಚಿವರನ್ನು ನೇಮಿಸಲಾಗುವುದು ಎಂದು ಘೋಷಿಸಿದರು.

ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶನಿವಾರ ಆಯ್ದ ತಾಲೂಕುಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಎರಡು ದಿನಗಳ ಸಾರ್ವಜನಿಕ ಅಹವಾಲು ಸಭೆ ನಡೆಸಬೇಕು. ಸಾರ್ವಜನಿಕರಿಂದ ಬರುವ ಅರ್ಜಿಗಳನ್ನು ಸ್ವೀಕರಿಸಿ, ಕಾನೂನು ಚೌಕಟ್ಟಿನೊಳಗೆ ನಿಗದಿತ ಅವಧಿಯಲ್ಲಿ ವಿಲೇವಾರಿ ಮಾಡುವ ಏಕರೂಪದ ವ್ಯವಸ್ಥೆಯನ್ನೂ ಜಾರಿಗೆ ತರಲಾಗುವುದು ಎಂದು ತಿಳಿಸಿದರು.

ಇದೇ ವೇಳೆ ಗ್ರಾಮೀಣಾಭಿವೃದ್ಧಿಗೆ ಆದ್ಯತೆ ನೀಡುತ್ತಿರುವುದಾಗಿ ಹೇಳಿದ ಮುಖ್ಯಮಂತ್ರಿಗಳು, ಉತ್ತಮ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಗ್ರಾಮಗಳಿಂದ ನಗರಗಳಿಗೆ ವಲಸೆ ಹೋಗುತ್ತಿರುವುದು ದೊಡ್ಡ ಸವಾಲಾಗಿದೆ ಎಂದರು. ಇದನ್ನು ತಡೆಯಲು ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಯಡಿ ರಾಜ್ಯಾದ್ಯಂತ ಸುಮಾರು 2,000 ಆಧುನಿಕ ಸರ್ಕಾರಿ ಶಾಲೆಗಳನ್ನು ನಿರ್ಮಿಸುವ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

DK Shivkumar
'ಚಿಂತೆ ಬೇಡ, ನಿಮ್ಮೊಂದಿಗೆ ಮಾತನಾಡದೆ ನಾವು ಹೋಗುವುದಿಲ್ಲ': ಪ್ರವಾಸದ ವೇಳೆ ಸಿಎಂ ಡಿ.ಕೆ ಶಿವಕುಮಾರ್ ಅಭಯ

ಈ ಯೋಜನೆಯಡಿ ಸುಮಾರು 8,000 ಕೋಟಿ ರೂ. ಸಂಗ್ರಹಿಸುವ ಗುರಿ ಹೊಂದಲಾಗಿದ್ದು, ಪ್ರತಿ ಮೂರು ಗ್ರಾಮ ಪಂಚಾಯಿತಿಗಳಿಗೆ ಒಂದು ಶಾಲೆ ನಿರ್ಮಿಸಲಾಗುವುದು. ಪ್ರತಿ ಶಾಲೆಗೆ ಸುಮಾರು 10 ರಿಂದ 15 ಕೋಟಿ ರೂ. ವೆಚ್ಚವಾಗಲಿದೆ.

ಪ್ರತಿ ಜಿಲ್ಲೆಯ ಪ್ರಮುಖ ಶಿಕ್ಷಣ ಸಂಸ್ಥೆಗಳು ತಲಾ ಮೂರು ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಮೂಲಸೌಕರ್ಯ ಹಾಗೂ ಶಿಕ್ಷಣದ ಗುಣಮಟ್ಟ ಸುಧಾರಿಸುವಂತೆ ಪ್ರೋತ್ಸಾಹಿಸಲಾಗುವುದು ಎಂದರು.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ಮಾತನಾಡಿ, ಅರ್ಹ ಪ್ರತಿಯೊಬ್ಬ ನಾಗರಿಕನಿಗೂ ಮತದಾನದ ಹಕ್ಕು ಸಿಗಬೇಕು.

ಬೂತ್ ಮಟ್ಟದ ಅಧಿಕಾರಿಗಳು (BLO) ಯಾವುದೇ ರಾಜಕೀಯ ಪಕ್ಷ ಅಥವಾ ಜನಪ್ರತಿನಿಧಿಗಳ ಒತ್ತಡಕ್ಕೆ ಮಣಿಯದೆ ಮನೆ ಮನೆಗೆ ತೆರಳಿ ನಿಯಮಾನುಸಾರ ಮತದಾರರ ನೋಂದಣಿ ನಮೂನೆಗಳನ್ನು ವಿತರಿಸಬೇಕು ಎಂದು ಸೂಚಿಸಿದರು.

ಮತದಾರರ ನೋಂದಣಿಗೆ ಅಗತ್ಯವಿರುವ ಜಾತಿ ಹಾಗೂ ನಿವಾಸ ಪ್ರಮಾಣಪತ್ರಗಳನ್ನು ಆನ್‌ಲೈನ್‌ನಲ್ಲಿ ಡೌನ್‌ಲೋಡ್ ಮಾಡುವ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಯಾವುದೇ ಅರ್ಹ ಮತದಾರ ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಅಗತ್ಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದರು.

ಯುವಜನ ಸಬಲೀಕರಣ ಹಾಗೂ ಗ್ರಾಮೀಣಾಭಿವೃದ್ಧಿಗೆ ಸಂಬಂಧಿಸಿದ ಹಲವು ಮಹತ್ವದ ಯೋಜನೆಗಳನ್ನು ಘೋಷಿಸಿದ ಮುಖ್ಯಮಂತ್ರಿ, ರಾಜ್ಯದಲ್ಲಿ 10,000 'ಭಾರತ್ ಜೋಡೋ ಯುವ ಸಂಘ'ಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು.

ಇದಕ್ಕಾಗಿ 1,000 ಕೋಟಿ ರೂ. ಮೀಸಲಿಡಲಾಗಿದ್ದು, ಪಂಚಾಯಿತಿ ಮಟ್ಟದ ಪ್ರತಿಯೊಂದು ಯುವ ಸಂಘಕ್ಕೂ 10 ಲಕ್ಷ ರೂ. ಆರ್ಥಿಕ ನೆರವು ನೀಡಲಾಗುವುದು ಎಂದು ಘೋಷಿಸಿದರು.

ಇದರ ಜೊತೆಗೆ, ರಾಜ್ಯದ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲೂ ಬಡವರಿಗೆ 5,000 ರಿಂದ 10,000 ನಿವೇಶನಗಳನ್ನು ಒದಗಿಸುವ ಯೋಜನೆ ರೂಪಿಸಲಾಗುತ್ತಿದೆ. ಅಲ್ಲದೆ, ಸ್ಥಳೀಯ ಮಟ್ಟದಲ್ಲೇ ಉದ್ಯೋಗ ಸೃಷ್ಟಿಸಿ ನಗರಗಳಿಗೆ ವಲಸೆ ಕಡಿಮೆ ಮಾಡುವ ಉದ್ದೇಶದಿಂದ ಪ್ರತಿ ತಾಲೂಕಿನಲ್ಲಿ ಕೈಗಾರಿಕಾ ಉದ್ಯಾನ (Industrial Park) ಸ್ಥಾಪಿಸಲು ಸರ್ಕಾರ ಕಾರ್ಯಯೋಜನೆ ಸಿದ್ಧಪಡಿಸುತ್ತಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com