

ಮಂಗಳೂರು: BJP ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA) ನಾಲ್ಕು ವರ್ಷಗಳ ಬಳಿಕ ಇಬ್ಬರು ಮೋಸ್ಟ್ ವಾಂಟೆಡ್ ಆರೋಪಿಗಳನ್ನು ಬಂಧಿಸಿದೆ.
ಬಂಧಿತರು ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ನಿವಾಸಿ ನೌಷಾದ್ (32) ಹಾಗೂ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ನಿವಾಸಿ ಅಬ್ದುಲ್ ನಾಸೀರ್ (41) ಎಂದು ತಿಳಿದುಬಂದಿದೆ. ಇಬ್ಬರೂ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದು, ಇವರ ಪತ್ತೆಗೆ NIA ತಲಾ 2 ಲಕ್ಷ ಬಹುಮಾನ ಘೋಷಿಸಿತ್ತು.
ನಕಲಿ ಗುರುತಿನೊಂದಿಗೆ ನೌಷಾದ್ ವಾಸಿಸುತ್ತಿದ್ದನು. ಖಚಿತ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಆತನನ್ನು ಬೆಂಗಳೂರು ಬಳಿಯ ಹೊಸೂರಿನಲ್ಲಿ ಬಂಧಿಸಿದ್ದಾರೆ. ಮತ್ತೊಂದೆಡೆ, ಕೇರಳದ ಕೊಚ್ಚಿಯಲ್ಲಿ ತಲೆಮರೆಸಿಕೊಂಡಿದ್ದ ಅಬ್ದುಲ್ ನಾಸೀರ್ನನ್ನು ವಿಶೇಷ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ.
2022ರ ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ನೆಟ್ಟಾರು ಗ್ರಾಮದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹತ್ಯೆಗೈದಿದ್ದರು.