ಮೊದಲ ಬಾರಿಗೆ ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿಗೆ ಮಹತ್ವದ ಘೋಷಣೆಗಳ ನಿರೀಕ್ಷೆ..!

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ವಿಶೇಷ ಮಂಡಳಿ ಹಾಗೂ ಪ್ರತ್ಯೇಕ ಅನುದಾನ ನೀಡಿರುವ ಮಾದರಿಯಲ್ಲೇ ಕರಾವಳಿ ಕರ್ನಾಟಕದ ಅಭಿವೃದ್ಧಿಗೂ ವಿಶೇಷ ವ್ಯವಸ್ಥೆ ರೂಪಿಸುವ ಬಗ್ಗೆ ಚರ್ಚೆ ನಡೆಯಲಿದೆ. ಕರಾವಳಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರ ಗಮನ ಹರಿಸಬೇಕಿದೆ.
CM DK Shivakumar
ಡಿಕೆ.ಶಿವಕುಮಾರ್.
Updated on

ಬೆಂಗಳೂರು: ರಾಜ್ಯ ಸರ್ಕಾರ ಇದೇ ಮೊದಲ ಬಾರಿಗೆ ಜುಲೈ 29ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲು ತೀರ್ಮಾನಿಸಿದ್ದು, ಕರಾವಳಿ ಕರ್ನಾಟಕದ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಮಹತ್ವದ ನಿರ್ಧಾರಗಳು ಈ ಸಭೆಯಲ್ಲಿ ಕೈಗೊಳ್ಳುವ ಸಾಧ್ಯತೆ ಇದೆ.

ಪ್ರವಾಸೋದ್ಯಮ, ಮೂಲಸೌಕರ್ಯ, ಕಾನೂನು ಸುವ್ಯವಸ್ಥೆ, ವಿಮಾನ ನಿಲ್ದಾಣ ವಿಸ್ತರಣೆ, ತುಳು ಭಾಷೆಗೆ ಹೆಚ್ಚುವರಿ ಅಧಿಕೃತ ಭಾಷೆಯ ಸ್ಥಾನಮಾನ ಸೇರಿದಂತೆ ಹಲವು ವಿಷಯಗಳು ಸಭೆಯಲ್ಲಿ ಚರ್ಚೆಗೆ ಬರಲಿವೆ.

ಆರೋಗ್ಯ ಸಚಿವ ಯು.ಟಿ. ಖಾದರ್ ಮಾತನಾಡಿ, ಕರಾವಳಿ ಭಾಗದ ಅಭಿವೃದ್ಧಿಗೆ ಸರ್ಕಾರ ವಿಶೇಷ ಆದ್ಯತೆ ನೀಡಲು ಬಯಸಿದೆ ಎಂದು ಹೇಳಿದರು.

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ವಿಶೇಷ ಮಂಡಳಿ ಹಾಗೂ ಪ್ರತ್ಯೇಕ ಅನುದಾನ ನೀಡಿರುವ ಮಾದರಿಯಲ್ಲೇ ಕರಾವಳಿ ಕರ್ನಾಟಕದ ಅಭಿವೃದ್ಧಿಗೂ ವಿಶೇಷ ವ್ಯವಸ್ಥೆ ರೂಪಿಸುವ ಬಗ್ಗೆ ಚರ್ಚೆ ನಡೆಯಲಿದೆ. ಕರಾವಳಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರ ಗಮನ ಹರಿಸಬೇಕಿದೆ" ಎಂದು ತಿಳಿಸಿದರು.

ಕರಾವಳಿ ಕರ್ನಾಟಕವು ಹಲವು ಅಭಿವೃದ್ಧಿ ಸೂಚ್ಯಂಕಗಳಲ್ಲಿ ಉತ್ತಮ ಸ್ಥಾನದಲ್ಲಿದ್ದರೂ, ಪ್ರವಾಸೋದ್ಯಮ ಮತ್ತು ಮೂಲಸೌಕರ್ಯ ಕ್ಷೇತ್ರಗಳಲ್ಲಿ ಇನ್ನಷ್ಟು ಹೂಡಿಕೆ ಅಗತ್ಯವಿದೆ. ಉತ್ತಮ ರಸ್ತೆ ಸಂಪರ್ಕ ಹಾಗೂ ಅಗತ್ಯ ಭೂಸ್ವಾಧೀನಕ್ಕೆ ಸರ್ಕಾರ ಕ್ರಮ ಕೈಗೊಂಡರೆ, ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಪುತ್ತೂರು ಶಾಸಕ ಅಶೋಕ್ ರೈ ಮಾತನಾಡಿ, ತುಳು ಭಾಷೆಗೆ ಹೆಚ್ಚುವರಿ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ಕುರಿತು ಸರ್ಕಾರ ಚಿಂತನೆ ನಡೆಸಬೇಕಿದೆ ಎಂದು ಹೇಳಿದರು.

ಈ ಮಾನ್ಯತೆ ದೊರೆತರೆ ಕರಾವಳಿ ಭಾಗದ ವಿದ್ಯಾರ್ಥಿಗಳಿಗೆ ತುಳು ಭಾಷೆಯಲ್ಲೇ ವಿವಿಧ ಸ್ಪರ್ಧಾತ್ಮಕ ಹಾಗೂ ಸರ್ಕಾರಿ ಪರೀಕ್ಷೆಗಳನ್ನು ಬರೆಯಲು ಅವಕಾಶ ಸಿಗಲಿದೆ ಎಂದು ತಿಳಿಸಿದರು.

CM DK Shivakumar
ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: ಸಿದ್ದು-ಡಿಕೆಶಿ, ಹರಿಪ್ರಸಾದ್'ಗೆ 'ಕೈ' ಕಮಾಂಡ್ ಬುಲಾವ್; ದೆಹಲಿಯಲ್ಲಿ ನಿರ್ಣಾಯಕ ಸಭೆ..!

ಇದಲ್ಲದೆ, ಮಂಗಳೂರಿನ ಮಂಗಲಾ ಕಾರ್ನಿಷ್ ರಸ್ತೆಯನ್ನು 10 ಕಿಲೋಮೀಟರ್ ಉದ್ದದಲ್ಲಿ 100 ಅಡಿ ಅಗಲಕ್ಕೆ ವಿಸ್ತರಿಸುವ ಸುಮಾರು 1,000 ಕೋಟಿ ರೂ. ವೆಚ್ಚದ ಯೋಜನೆಯ ವಿವರವಾದ ಯೋಜನಾ ವರದಿ (ಡಿಪಿಆರ್) ಸಿದ್ಧವಾಗಿದೆ ಎಂದು ಅಶೋಕ್ ರೈ ಮಾಹಿತಿ ನೀಡಿದರು.

ಈ ಯೋಜನೆಗೆ ಸರ್ಕಾರ ಅನುಮೋದನೆ ನೀಡಿದರೆ ಮುಂದಿನ ಮೂರು ವರ್ಷಗಳಲ್ಲಿ ಸಮುದ್ರ ತೀರದ ಈ ರಸ್ತೆ ಅಭಿವೃದ್ಧಿಗೊಂಡು, ಕರಾವಳಿ ಭಾಗಕ್ಕೆ ಹೆಚ್ಚಿನ ಹೂಡಿಕೆ ಆಕರ್ಷಿಸಲು ಅನುಕೂಲವಾಗಲಿದೆ ಎಂದು ಹೇಳಿದರು.

ಕರಾವಳಿ ಭಾಗದ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳವನ್ನು ಕರ್ನಾಟಕ ಪ್ರವಾಸೋದ್ಯಮದ ಪ್ರಮುಖ ಆಕರ್ಷಣೆಯಾಗಿ ಅಭಿವೃದ್ಧಿಪಡಿಸುವ ಪ್ರಸ್ತಾವವೂ ಸರ್ಕಾರದ ಮುಂದಿದೆ. ರಾಜ್ಯದ ಪ್ರವಾಸೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕಂಬಳಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.

ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಅಭಿವೃದ್ಧಿಯೂ ಸಭೆಯ ಪ್ರಮುಖ ಅಜೆಂಡಾಗಳಲ್ಲಿ ಒಂದಾಗಿದೆ. ಪ್ರಸ್ತುತ 2.6 ಕಿಲೋಮೀಟರ್ ಉದ್ದವಿರುವ ರನ್‌ವೇಯನ್ನು 3.5 ಕಿಲೋಮೀಟರ್‌ಗೆ ವಿಸ್ತರಿಸಿ ಬೋಯಿಂಗ್ ಮಾದರಿಯ ದೊಡ್ಡ ವಿಮಾನಗಳ ಸಂಚಾರಕ್ಕೆ ಅನುಕೂಲ ಕಲ್ಪಿಸುವ ಯೋಜನೆ ಕುರಿತು ಚರ್ಚೆ ನಡೆಯಲಿದೆ. ಈ ಯೋಜನೆಗೆ ಅಗತ್ಯ ಭೂಸ್ವಾಧೀನ ಪ್ರಕ್ರಿಯೆಯ ವೇಗ ಹೆಚ್ಚಿಸುವ ಬಗ್ಗೆ ಸರ್ಕಾರ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಈ ಯೋಜನೆಗೆ ಅದಾನಿ ಸಮೂಹ 75 ಕೋಟಿ ರೂ.ಅನುದಾನ ನೀಡಲು ಮುಂದೆ ಬಂದಿದ್ದು, ಸರ್ಕಾರದ ಬಳಿ ಈಗಾಗಲೇ 13 ಎಕರೆ ಭೂಮಿ ಲಭ್ಯವಿದೆ. ಉಳಿದ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಕುರಿತು ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿ, ಕರಾವಳಿ ಕರ್ನಾಟಕದಲ್ಲಿ ಧರ್ಮದ ಹೆಸರಿನಲ್ಲಿ ನಡೆಯುವ ದ್ವೇಷ ಅಪರಾಧಗಳು ಮತ್ತು ಪ್ರತೀಕಾರದ ಹತ್ಯೆಗಳನ್ನು ತಡೆಯಲು ಈಗಾಗಲೇ ವಿಶೇಷ ಕಾರ್ಯಪಡೆಯನ್ನು (ಟಾಸ್ಕ್ ಫೋರ್ಸ್) ರಚಿಸಲಾಗಿದೆ ಎಂದು ಹೇಳಿದರು.

ಇದೀಗ ಕರಾವಳಿ ಭಾಗದ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಹೊಸ ಯೋಜನೆಗಳು ಮತ್ತು ನೀತಿಗಳ ಬಗ್ಗೆ ಸರ್ಕಾರ ಗಂಭೀರವಾಗಿ ಚರ್ಚಿಸುತ್ತಿದೆ ಎಂದರು.

ಇನ್ನೊಂದೆಡೆ, ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ವಿ. ಸುನೀಲ್ ಕುಮಾರ್ ಅವರು ಕರಾವಳಿ ಭಾಗದ ಅಭಿವೃದ್ಧಿಗೆ ಹೊಸ ನೀತಿಗಳ ಅಗತ್ಯವಿಲ್ಲ, ಈಗಿರುವ ನಿಯಮಗಳನ್ನು ಸಡಿಲಿಸಿದರೆ ಸಾಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಮರಳು ಗಣಿಗಾರಿಕೆ, ಕಂದಾಯ ಇಲಾಖೆ ಹಾಗೂ ನಗರಾಭಿವೃದ್ಧಿಗೆ ಸಂಬಂಧಿಸಿದ ಹಲವು ನಿಯಮಗಳನ್ನು ಸಡಿಲಿಸುವಂತೆ ಸರ್ಕಾರಕ್ಕೆ ಅನೇಕ ಬಾರಿ ಮನವಿ ಮಾಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದರು.

ರಾಜ್ಯ ಸಚಿವ ಸಂಪುಟದ ಮೊದಲ ಮಂಗಳೂರು ಸಭೆಯಿಂದ ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಮಹತ್ವದ ಘೋಷಣೆಗಳು ಹೊರಬರುವ ನಿರೀಕ್ಷೆ ಇದ್ದು, ಕರಾವಳಿ ಭಾಗದ ಜನರ ಗಮನ ಇದೀಗ ಜುಲೈ 29ರ ಸಭೆಯತ್ತ ನೆಟ್ಟಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com