

ಕಲಬುರಗಿ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ತವರು ಜಿಲ್ಲೆಯಲ್ಲಿರುವ ಕೇಂದ್ರ ಕಾರಾಗೃಹದಿಂದ ಮೂವರು ಸಜಾ ಕೈದಿಗಳು ಪರಾರಿಯಾಗಿದ್ದಾರೆ.
ಬೀದರ್ನಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಈ ಮೂವರು ಶಿಕ್ಷೆಗೆ ಒಳಪಟ್ಟಿದ್ದರು. ಮಂಗಳವಾರ ಬೆಳಗ್ಗಿನ ಜಾವ 4 ಗಂಟೆಗೆ ಜೈಲಿನ ಕಂಪೌಡ್ ಹಾರಿ ಈ ಮೂವರು ಪರಾರಿಯಾಗಿದ್ದಾರೆ. ತಪ್ಪಿಸಿಕೊಂಡ ಅಪರಾಧಿಗಳನ್ನು ಬಸವಕಲ್ಯಾಣ ತಾಲ್ಲೂಕಿನ ಇಸ್ಲಾಂಪುರ ಮೂಲದ ಮಸ್ತಾನ್, ಔರಾದ್ ತಾಲ್ಲೂಕಿನ ಸಂತಾಪುರ ಗ್ರಾಮದ ಸಂತೋಷ್ ಮತ್ತು ಬೀದರ್ ತಾಲ್ಲೂಕಿನ ಬಕ್ಕಚೌಡಿ ಗ್ರಾಮದ ಸಾಗರ್ ಎಂದು ಗುರುತಿಸಲಾಗಿದೆ.
ಕೈದಿಗಳು ಪರಾರಿಯಾಗಲು ಜೈಲು ಸಿಬ್ಬಂದಿಯೇ ಸಹಕಾರ ನೀಡಿದ್ದಾರೆ ಎಂಬ ಶಂಕೆ ಕೂಡ ವ್ಯಕ್ತವಾಗಿದೆ. ಮಧ್ಯರಾತ್ರಿ ಲಾಕಪ್ನಲ್ಲಿ ಇರಬೇಕಾದ ಕೈದಿಗಳನ್ನು ಜೈಲು ಸಿಬ್ಬಂದಿ ಯಾಕೆ ಹೊರಗೆ ಬಿಟ್ಟರು ಎಂಬ ಪ್ರಶ್ನೆ ಮೂಡಿದೆ. ಈ ಮೂಲಕ ಕೈದಿಗಳ ಪರಾರಿಗೆ ಜೈಲಿನ ಹಲವು ಸಿಬ್ಬಂದಿ ಹಾಗೂ ಅಧಿಕಾರಿಗಳು ಸಾಥ್ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ಫರ್ತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಪರ್ಯಾಸವೆಂದರೆ, ಸೋಮವಾರ ಬೆಳಿಗ್ಗೆ, ಕಲಬುರಗಿ ಪೊಲೀಸ್ ಆಯುಕ್ತ ಶರಣಪ್ಪ ಎಸ್ ಡಿ ಮತ್ತು ಇತರ ಹಿರಿಯ ಪೊಲೀಸ್ ಅಧಿಕಾರಿಗಳು ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ಅದರ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದ್ದರು.