

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ತೀವ್ರ ಕೊರತೆ ಸಂಕಷ್ಟದ ನಡುವೆ ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಸದ್ಯಕ್ಕೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ತನ್ನ ಇಂದಿನ ಸಭೆಯಲ್ಲಿ ತಕ್ಷಣವೇ ತಮಿಳುನಾಡಿಗೆ ನೀರು ಹರಿಸುವಂತೆ ಕರ್ನಾಟಕಕ್ಕೆ ಯಾವುದೇ ಸ್ಪಷ್ಟ ನಿರ್ದೇಶನ ನೀಡಿಲ್ಲ ಎಂದು ತಿಳಿದುಬಂದಿದೆ.
ಕಾವೇರಿ ಜಲ ನಿಯಂತ್ರಣ ಸಮಿತಿ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಇಂದು ನವದೆಹಲಿಯಲ್ಲಿ 138ನೇ ಕಾವೇರಿ ಜಲ ನಿಯಂತ್ರಣ ಸಮಿತಿ ಸಭೆ ಹೈಬ್ರಿಡ್ ಮಾದರಿಯಲ್ಲಿ ನಡೆಯಿತು. ಸಭೆಯಲ್ಲಿ ಕರ್ನಾಟಕ ಮತ್ತು ತಮಿಳುನಾಡು ಎರಡೂ ರಾಜ್ಯಗಳು ತಮ್ಮ ತಮ್ಮ ವಾದಗಳನ್ನು ಮಂಡಿಸಿದವು. ಮಳೆ ಕೊರತೆಯಿಂದಾಗಿ ರಾಜ್ಯದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆಯಿದೆ. ಕುಡಿಯುವ ನೀರು ಹಾಗೂ ರೈತರ ಹಿತಾಸಕ್ತಿಗೆ ಆದ್ಯತೆ ನೀಡಬೇಕಿದ್ದು ನೀರು ಹರಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ವಾದಿಸಿತು.
ಮತ್ತೊಂದೆಡೆ, ತಮಿಳುನಾಡು ತನ್ನ ಪಾಲಿನ ನೀರನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿತು. ಜೂನ್ ತಿಂಗಳಿಗೆ 9.19 ಟಿಎಂಸಿ ಹಾಗೂ ಜುಲೈ ತಿಂಗಳಿಗೆ 31.24 ಟಿಎಂಸಿ ಸೇರಿ ಒಟ್ಟು 40.43 ಟಿಎಂಸಿ ನೀರನ್ನು ಕರ್ನಾಟಕ ಹರಿಸಬೇಕೆಂಬುದು ತಮಿಳುನಾಡು ವಾದಿಸಿತು.
ಇನ್ನು ಜಲಾಶಯಗಳಲ್ಲಿನ ನೀರಿನ ಪ್ರಮಾಣ, ಮಳೆ ಕೊರತೆ ಪರಿಗಣಿಸಿದ CWRC ಈ ಹಂತದಲ್ಲಿ ಕರ್ನಾಟಕಕ್ಕೆ ನೀರು ಬಿಡುಗಡೆ ಮಾಡುವಂತೆ ತಕ್ಷಣಕ್ಕೆ ಯಾವುದೇ ಆದೇಶ ಮಾಡಿಲ್ಲ ಎಂದು ವರದಿಯಾಗಿದೆ. ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸಿ, ಅಗತ್ಯವಿದ್ದರೆ ಮುಂದಿನ ಸಭೆಯಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.