

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಎರಡು ಪ್ರತ್ಯೇಕ ಕಡೆಗಳಲ್ಲಿ ದಾಳಿ ನಡೆಸಿ ಭಾರಿ ಪ್ರಮಾಣದ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ವಿಶ್ವಾಸಾರ್ಹ ಮಾಹಿತಿ ಮೇರೆಗೆ ಕೋಡಿಹಳ್ಳಿ ಹಾಗೂ ಕನಕಪುರ ಸರ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದಾಳಿಗಳು ನಡೆದಿವೆ. ಬಂಧಿತರ ವಿರುದ್ಧ ಸ್ಫೋಟಕ ಕಾಯ್ದೆಯಡಿ (Explosives Act) ಪ್ರತ್ಯೇಕ ಮೊಕದ್ದಮೆಗಳನ್ನು ದಾಖಲಿಸಲಾಗಿದೆ.
ಮೊದಲ ದಾಳಿಯಲ್ಲಿ ಉಪ ವಲಯ ಅರಣ್ಯಾಧಿಕಾರಿ ಎಂ. ಮಂಜುನಾಥ್ ನೀಡಿದ ದೂರಿನ ಮೇರೆಗೆ ಆರ್ ರುದ್ರೇಶ್ ಎಂಬುವವರಿಗೆ ಸೇರಿದ ವಾಣಿಜ್ಯ ಮಳಿಗೆಯ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಸುಮಾರು 2.35 ಕೆಜಿ ತೂಕದ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಎರಡನೇ ದಾಳಿಯಲ್ಲಿ ವನ್ಯಜೀವಿಗಳಿಗೆ ಸಂಬಂಧಿಸಿದ ಅಕ್ರಮ ವಸ್ತುಗಳನ್ನು ಸಂಗ್ರಹಿಸಿಡಲಾಗಿದೆ ಎಂಬ ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆಯ ಸಂಚಾರಿ ದಳದ ಅಧಿಕಾರಿ ನೇತ್ರಾವತಿ ಟಿ. ನೇತೃತ್ವದಲ್ಲಿ ನಲ್ಲಹಳ್ಳಿ ಗ್ರಾಮದ ಎಲ್ ಶಿವಮಲ್ಲೇಗೌಡ ಎಂಬುವವರ ನಿವಾಸದ ಮೇಲೆ ದಾಳಿ ನಡೆಸಲಾಗಿತ್ತು.
ಈ ವೇಳೆ ವನ್ಯಜೀವಿ ವಸ್ತುಗಳ ಜೊತೆಗೆ ನಾಡಬಂದೂಕುಗಳಿಗೆ ಬಳಸಲಾಗುವ ಶಂಕಿತ ಸ್ಫೋಟಕ ಕಚ್ಚಾ ವಸ್ತುಗಳು ಪತ್ತೆಯಾಗಿದ್ದು, ಅವುಗಳನ್ನು ವಶಕ್ಕೆ ಪಡೆಯಲಾಗಿದೆ.
ಈ ಎರಡೂ ಪ್ರಕರಣಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದು, ಬಂಧಿತ ಆರೋಪಿಗಳು ಈ ಸ್ಫೋಟಕ ವಸ್ತುಗಳನ್ನು ಎಲ್ಲಿಂದ ತಂದಿದ್ದರು ಮತ್ತು ಇವುಗಳನ್ನು ಯಾವ ಉದ್ದೇಶಕ್ಕಾಗಿ ಸಂಗ್ರಹಿಸಿಡಲಾಗಿತ್ತು ಎಂಬ ಬಗ್ಗೆ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.