

ಬೆಂಗಳೂರು: ಹೊಸ ಹೈಕೋರ್ಟ್ ಕಟ್ಟಡ ನಿರ್ಮಾಣಕ್ಕಾಗಿ ಬೆಂಗಳೂರು ಟರ್ಫ್ ಕ್ಲಬ್ಗೆ ಸೇರಿದ ಜಮೀನನ್ನು ಹಂಚಿಕೆ ಮಾಡುವ ಸಂಬಂಧ ರಾಜ್ಯ ಸರ್ಕಾರ ಶೀಘ್ರದಲ್ಲೇ ನಿರ್ಣಯ ಅಂಗೀಕರಿಸಲಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.
ಬೆಂಗಳೂರು ನಗರದಲ್ಲಿ ಹೊಸ ಹೈಕೋರ್ಟ್ ಸಂಕೀರ್ಣ ನಿರ್ಮಾಣಕ್ಕೆ 30 ಎಕರೆ ಅಥವಾ ಅದಕ್ಕಿಂತ ಹೆಚ್ಚಿನ ಜಮೀನು ಮಂಜೂರು ಮಾಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಶರಣ್ ದೇಸಾಯಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ವಿಚಾರಣೆ ವೇಳೆ ಅಡ್ವೊಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ ಅವರು ಸರ್ಕಾರದ ನಿರ್ಧಾರವನ್ನು ಮೌಖಿಕವಾಗಿ ನ್ಯಾಯಾಲಯಕ್ಕೆ ತಿಳಿಸಿದರು.
ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರಿದ್ದ ವಿಭಾಗೀಯ ಪೀಠ, ಈ ಸಂಬಂಧ ಹೆಚ್ಚಿನ ವಿವರಗಳನ್ನು ದಾಖಲಿಸಲು ಒಂದು ತಿಂಗಳ ಕಾಲಾವಕಾಶ ನೀಡುವಂತೆ ಅಡ್ವೊಕೇಟ್ ಜನರಲ್ ಸಲ್ಲಿಸಿದ ಮನವಿಯನ್ನು ಒಪ್ಪಿಕೊಂಡು, ಪ್ರಕರಣವನ್ನು ಮರುಪಟ್ಟಿಗೆ ಸೇರಿಸಲು ಅನುಮತಿ ನೀಡಿತು.
ಈ ಹಿಂದೆ ನಡೆದ ವಿಚಾರಣೆಯಲ್ಲಿ, ಮುಂದಿನ 30ರಿಂದ 50 ವರ್ಷಗಳ ಅಗತ್ಯಗಳನ್ನು ಪೂರೈಸುವಷ್ಟು ಸಾಮರ್ಥ್ಯ ಹೊಂದಿರುವ ಹೊಸ ಹೈಕೋರ್ಟ್ ಸಂಕೀರ್ಣವನ್ನು ನಿರ್ಮಿಸಬೇಕು ಎಂದು ನ್ಯಾಯಪೀಠ ಮೌಖಿಕವಾಗಿ ಅಭಿಪ್ರಾಯ ವ್ಯಕ್ತಪಡಿಸಿತ್ತು. ಪ್ರಕರಣದ ಮುಂದಿನ ವಿಚಾರಣೆಯನ್ನು ಆಗಸ್ಟ್ 28ಕ್ಕೆ ನಿಗದಿಪಡಿಸಲಾಗಿದೆ.
ಈ ವರ್ಷದ ಫೆಬ್ರವರಿಯಲ್ಲಿ, ತುಮಕೂರು ಸಮೀಪದ ಕುಣಿಗಲ್ ಸ್ಟಡ್ ಫಾರ್ಮ್ನ 110 ಎಕರೆ 20 ಗುಂಟೆ ಜಮೀನನ್ನು ಬೆಂಗಳೂರು ಟರ್ಫ್ ಕ್ಲಬ್ಗೆ ಕುದುರೆ ಓಟ ನಡೆಸಲು 29 ವರ್ಷಗಳ ಅವಧಿಗೆ ಗುತ್ತಿಗೆ ನೀಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿತ್ತು.
ಈ ಸ್ಥಳಾಂತರವನ್ನು ಪ್ರಶ್ನಿಸಿ ಪ್ರತ್ಯೇಕ ಅರ್ಜಿಯೂ ಸಲ್ಲಿಕೆಯಾಗಿದ್ದು, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಈಗಾಗಲೇ ನೋಟಿಸ್ ಜಾರಿ ಮಾಡಿ ಉತ್ತರ ಕೇಳಿದೆ.
ನಗರ ಸಂರಕ್ಷಣಾ ಹೋರಾಟಗಾರ ವಿಜಯ್ ನಿಶಾಂತ್ ಸಲ್ಲಿಸಿರುವ ಅರ್ಜಿಯಲ್ಲಿ, ಪರಿಸರ ಪರಿಣಾಮ ಮೌಲ್ಯಮಾಪನ (Environment Impact Assessment - EIA) ಅಧಿಸೂಚನೆ-2006ರ ನಿಯಮಗಳನ್ನು ಸಂಪೂರ್ಣವಾಗಿ ಕಡೆಗಣಿಸಿ ಈ ಸ್ಥಳಾಂತರ ಆದೇಶ ಹೊರಡಿಸಲಾಗಿದೆ ಎಂದು ಆರೋಪಿಸಲಾಗಿದೆ.
2025ರ ಅಕ್ಟೋಬರ್ 26ರಂದು ಕಬ್ಬನ್ ಉದ್ಯಾನದಲ್ಲಿ ನಡೆದ ನಾಗರಿಕರ ಸಂವಾದ ಕಾರ್ಯಕ್ರಮದಲ್ಲಿ, ಆಗ ಉಪ ಮುಖ್ಯಮಂತ್ರಿಯಾಗಿದ್ದ ಡಿ.ಕೆ. ಶಿವಕುಮಾರ್, ಹೈಕೋರ್ಟ್ ನ್ನು ಹೊಸ ಹಾಗೂ ವಿಶಾಲವಾದ ಸ್ಥಳಕ್ಕೆ ಸ್ಥಳಾಂತರಿಸುವ ಸಾಧ್ಯತೆಯನ್ನು ರಾಜ್ಯ ಸರ್ಕಾರ ಪರಿಶೀಲಿಸುತ್ತಿದೆ ಎಂದು ತಿಳಿಸಿದ್ದರು.
ಪ್ರಸ್ತುತ ಕರ್ನಾಟಕ ಹೈಕೋರ್ಟ್ 'ಅತ್ತರ ಕಚೇರಿ' ಎಂಬ ಐತಿಹಾಸಿಕ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇದು ಕಬ್ಬನ್ ಉದ್ಯಾನದ ಆವರಣದಲ್ಲಿ ವಿಧಾನಸೌಧದ ಎದುರು ಭಾಗದಲ್ಲಿದೆ.
ಅತ್ತಾರ ಕಚೇರಿ ಮೂಲತಃ ಅಂದಿನ ಮೈಸೂರು ಸಂಸ್ಥಾನದ ಸಾಮಾನ್ಯ ಆಡಳಿತ ಮತ್ತು ಕಂದಾಯ ಇಲಾಖೆಯ ಕಾರ್ಯಾಲಯವಾಗಿತ್ತು. 1929ರಲ್ಲಿ ಇದನ್ನು ಮೈಸೂರು ಹೈಕೋರ್ಟ್ ಎಂದು ಮರುನಾಮಕರಣ ಮಾಡಲಾಯಿತು. 1956ರವರೆಗೆ ರಾಜ್ಯದ ಆಡಳಿತ ಕಚೇರಿಗಳೂ ಇದೇ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದವು. ಬಳಿಕ ಅವುಗಳನ್ನು ವಿಧಾನಸೌಧಕ್ಕೆ ಸ್ಥಳಾಂತರಿಸಲಾಯಿತು.