

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 5.20 ಕೋಟಿ ರೂ. ಮೌಲ್ಯದ 5 ಕೆಜಿಗೂ ಹೆಚ್ಚು ಎಂಡಿಎಂಎ ವಶಪಡಿಸಿಕೊಂಡಿದ್ದಾರೆ ಮತ್ತು ಇಬ್ಬರು ಡ್ರಗ್ಸ್ ಮಾರಾಟಗಾರರನ್ನು ಬಂಧಿಸಲಾಗಿದೆ. ಬಂಧಿತರಿಂದ ಎಂಡಿಎಂಎ ಜೊತೆ ಬ್ಯಾಗ್ ಮತ್ತು ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಜುಲೈ 15 ರಂದು ಬಾಗಲಕೋಟೆ ಜಿಲ್ಲೆಯ ಹುನಗುಂದದ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ರಾಯಲ್ ಇನ್ ಲಾಡ್ಜ್ನಲ್ಲಿ ದೆಹಲಿಯಿಂದ ಬೆಂಗಳೂರಿಗೆ ಸರಕು ಸಾಗಿಸುತ್ತಿದ್ದಾಗ ಆರೋಪಿಗಳನ್ನು ಬಂಧಿಸಲಾಯಿತು ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಜೂನ್ 25 ರಂದು ಅಣ್ಣಪ್ಪ ಸ್ವಾಮಿ ಎಂಬ ವ್ಯಕ್ತಿಯನ್ನು ಬಂಧಿಸಿ, ಆತನಿಂದ 15 ಗ್ರಾಂ ಎಂಡಿಎಂಎ ವಶಕ್ಕೆ ಪಡೆಯಲಾಗಿತ್ತು. ಆತನಿಗೆ ಪೂರೈಕೆ ಮಾಡುತ್ತಿದ್ದ ಜಾಲವನ್ನು ಭೇದಿಸುವ ನಿಟ್ಟಿನಲ್ಲಿ ನಡೆಸಿದ ವಿಚಾರಣೆಯ ಸಮಯದಲ್ಲಿ, ಆತನಿಗೆ ಮಾದಕವಸ್ತು ಪೂರೈಕೆದಾರರ ಬಗ್ಗೆ ಮಾಹಿತಿ ಹೊರಬಿದ್ದಿದ್ದು, ಮತ್ತೆ ಇಬ್ಬರ ಬಂಧನಕ್ಕೆ ಕಾರಣವಾಗಿದೆ.
ಬಂಧಿತರನ್ನು ಬೆಳ್ತಂಗಡಿ ತಾಲೂಕಿನ ಇಂಡಬೆಟ್ಟು ಗ್ರಾಮದ ಮುಹಮ್ಮದ್ ಅಲ್ಫಾಝ್ (28 ವರ್ಷ) ಹಾಗೂ ಉಜಿರೆಯ ಹಳೆಪೇಟೆ ಲಾಯಿಲಾ ವಿವೇಕನಂದ ನಗರದ ಮುಹಮ್ಮದ್ ಮುಸ್ತಫ (28 ವರ್ಷ) ಎಂದು ಗುರುತಿಸಲಾಗಿದೆ.