

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ಯುವಕನೋರ್ವ ಸಾರ್ವಜನಿಕರ ಎದುರೇ ಮಚ್ಚಿನಿಂದ ಹಲ್ಲೆ ನಡೆಸಿ ಯುವತಿಯನ್ನು ಕಗ್ಗೊಲೆ ಮಾಡಿರುವ ಘಟನೆ ಗುರುವಾರ ಸಂಜೆ ನಡೆದಿದೆ.
ಕಕ್ಕೆಪದವು ನಿವಾಸಿ ಲಾವಣ್ಯ (23) ಮೃತಪಟ್ಟ ಯುವತಿ. ಕಲ್ಲಡ್ಕದ ಚಿಕಿತ್ಸಾಲಯವೊಂದರಲ್ಲಿ ಶುಶ್ರೂಷಕಿಯಾಗಿ ಕೆಲಸ ಮಾಡುತ್ತಿದ್ದ ಈಕೆ ಕೆಲಸ ಮುಗಿಸಿಕೊಂಡು ಬಿ.ಸಿ. ರೋಡ್ ನ KSRTC ಬಸ್ ನಿಲ್ದಾಣದಿಂದ ಬಸ್ ಹತ್ತಿ ಕುಳಿತಿದ್ದಾಗ, ಬಸ್ ಹತ್ತಿದ್ದ ಆರೋಪಿ ಮಚ್ಚಿನಿಂದ ಹಲ್ಲೆ ನಡೆಸಲು ಯತ್ನಿಸಿದ್ದಾನೆ.
ಅದನ್ನು ನೋಡಿದ ಯುವತಿ ಓಡಿ ಹೋಗಿದ್ದು, ಆಕೆಯನ್ನು ಹಿಂಬಾಲಿಸಿದ ದುಷ್ಕರ್ಮಿ, ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಎದುರೇ ಆಕೆಯ ಕುತ್ತಿಗೆಯ ಹಿಂಭಾಗಕ್ಕೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ.
ಮಚ್ಚಿನ ಏಟಿಯಿಂದ ತೀವ್ರವಾಗಿ ಗಾಯಗೊಂಡ ಯುವತಿಯನ್ನು ಕೂಡಲೇ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಆಕೆ ಮೃತಪಟ್ಟಿದ್ದಾಳೆ.
ಆರೋಪಿಯನ್ನು ಚೇತನ್ ಎಂದು ಗುರುತಿಸಲಾಗಿದೆ. ಈತ ಯುವತಿಯ ದೂರದ ಸಂಬಂಧಿಯಾಗಿದ್ದು, ಆತ ಮಾತ್ರ ಯುವತಿಯನ್ನು ಪ್ರೀತಿಸುತ್ತಿದ್ದ ಎಂದು ಮೂಲಗಳು ತಿಳಿಸಿವೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.