

ಬೆಂಗಳೂರು: ಅನಾರೋಗ್ಯಕ್ಕೀಡಾದ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಇತ್ತೀಚೆಗೆ ಚೆನ್ನಮ್ಮ ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ನಡುವೆ ಚೆನ್ನಮ್ಮ ಅವರ ಪುತ್ರ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ನಿಖಿಲ್ ಸೇರಿದಂತೆ ಹೆಚ್ಡಿ ರೇವಣ್ಣ ಮತ್ತು ಕುಟುಂಬ ಸದಸ್ಯರು ಮಣಿಪಾಲ್ ಆಸ್ಪತ್ರೆಗೆ ಆಗಮಿಸಿದ್ದಾರೆ.
ಸದ್ಯ ಹೆಚ್.ಡಿ.ಕುಮಾರಸ್ವಾಮಿ ವೈದ್ಯರೊಂದಿಗೆ ಮಾತನಾಡಿ, ತಾಯಿಯ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಪ್ರಸ್ತುತ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಪತ್ನಿ ಚೆನ್ನಮ್ಮ ಶೀಘ್ರ ಚೇತರಿಕೆಗಾಗಿ ಕುಟುಂಬಸ್ಥರು ಮತ್ತು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.
ಆತಂಕ ಬೇಡ ಎಂದ ಎಚ್ ಡಿಕೆ
ಈ ವೇಳೆ ಮಾತನಾಡಿದ ಎಚ್ ಡಿ ಕುಮಾರಸ್ವಾಮಿ, 'ಚೆನ್ನಮ್ಮ ಅವರ ಆರೋಗ್ಯ ಸ್ಥಿತಿ ಕುರಿತು ಯಾವುದೇ ಆತಂಕ ಪಡುವ ಅಗತ್ಯವಿಲ್ಲ' ಎಂದು ಹೇಳಿದರು.
'ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ವೈದ್ಯರು ಚೆನ್ನಮ್ಮ ದೇವೇಗೌಡ ಅವರ ಆರೋಗ್ಯದ ಮೇಲೆ ನಿರಂತರ ನಿಗಾ ವಹಿಸಿದ್ದು, ಅವರು ಶೀಘ್ರದಲ್ಲೇ ಸಂಪೂರ್ಣ ಚೇತರಿಸಿಕೊಳ್ಳಲಿದ್ದಾರೆ ಎಂಬ ವಿಶ್ವಾಸವಿದೆ.
ಪಕ್ಷದ ಕಾರ್ಯಕರ್ತರು, ಬೆಂಬಲಿಗರು ಹಾಗೂ ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡದೆ, ಯಾವುದೇ ಆತಂಕ ಪಡಬಾರದು ಎಂದು ಅವರು ಮನವಿ ಮಾಡಿದ್ದಾರೆ. ಇದೇ ವೇಳೆ, ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಿದ ಎಲ್ಲರಿಗೂ ಕುಮಾರಸ್ವಾಮಿ ಕೃತಜ್ಞತೆ ಸಲ್ಲಿಸಿದ್ದಾರೆ.
ಆರೋಗ್ಯ ವಿಚಾರಿಸಿದ ಆರ್. ಅಶೋಕ್
ಇನ್ನು ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಲು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಭೇಟಿ ನೀಡಿದ್ದು, ಈ ಭೇಟಿಯು ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ. ಆರ್. ಅಶೋಕ್ ಅವರು ಜೆಡಿ(ಎಸ್) ವರಿಷ್ಠರ ಕುಟುಂಬದ ಹಿರಿಯ ಸದಸ್ಯೆಯಾದ ಚೆನ್ನಮ್ಮ ಅವರ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿ, ಅವರ ಆರೋಗ್ಯ ವಿಚಾರಿಸಲು ತೆರಳಿದರು.
ಈ ಸಂದರ್ಭದಲ್ಲಿ ಅವರು ಕುಟುಂಬದ ಸದಸ್ಯರೊಂದಿಗೆ ಮಾತನಾಡಿ, ಚೆನ್ನಮ್ಮ ಅವರ ಆರೋಗ್ಯ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆದುಕೊಂಡರು. ರಾಜಕೀಯ ನಾಯಕರ ನಡುವೆ ಸೌಜನ್ಯಯುತ ಭೇಟಿಗಳು ನಡೆಯುವುದು ಸಹಜ.
ಭೇಟಿ ಮಾಡಿದ ನಂತರ ಮಾಧ್ಯಮಗಳ ಮುಂದೆ ಆರ್. ಅಶೋಕ್ ಮಾತನಾಡಿದ್ದಾರೆ. ಚೆನ್ನಮ್ಮನವರ ಆರೋಗ್ಯ ನಿನ್ನೆಗಿಂತ ಇಂದು ಸುಧಾರಿಸಿದೆ. ಚೆನ್ನಮ್ಮನವರ ಆರೋಗ್ಯ ವಿಚಾರಿಸಿಕೊಂಡು ಬಂದಿದ್ದೇನೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಹೇಳಿದರು.
ಆಸ್ಪತ್ರೆ ಬುಲೆಟಿನ್
ಇದೇ ವೇಳೆ, ಮಣಿಪಾಲ್ ಆಸ್ಪತ್ರೆ ಬಿಡುಗಡೆ ಮಾಡಿರುವ ಇತ್ತೀಚಿನ ವೈದ್ಯಕೀಯ ಬುಲೆಟಿನ್ನಲ್ಲಿ, ಉಸಿರಾಟದ ಸಮಸ್ಯೆಗೆ ಸಂಬಂಧಿಸಿದಂತೆ ಚೆನ್ನಮ್ಮ ದೇವೇಗೌಡ ಅವರಿಗೆ ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿಸಲಾಗಿದೆ.
ಎದೆಭಾರ ಹಾಗೂ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಬಹುಶಾಖಾ ವೈದ್ಯಕೀಯ ತಂಡದ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವೈದ್ಯರ ಪ್ರಕಾರ, ಅವರ ರಕ್ತದೊತ್ತಡ, ನಾಡಿಮಿಡಿತ ಸೇರಿದಂತೆ ಪ್ರಮುಖ ಆರೋಗ್ಯ ಸೂಚ್ಯಂಕಗಳು ಸಹಜ ಮಟ್ಟದಲ್ಲಿವೆ. ಉಸಿರಾಟದ ಸಮಸ್ಯೆಗೆ ಚಿಕಿತ್ಸೆ ಮುಂದುವರಿದಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ತಿಳಿಸಿದೆ.