

ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರ ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ಪೂರ್ಣಗೊಳಿಸುವ ನಿರೀಕ್ಷೆಯಲ್ಲಿದ್ದು, ಇದರ ನಡುವಲ್ಲೇ ರಾಜ್ಯದ ಮುಂದಿನ ವಿಧಾನಸಭಾಧ್ಯಕ್ಷರ (ಸ್ಪೀಕರ್) ಆಯ್ಕೆ ಕುರಿತು ರಾಜಕೀಯ ವಲಯದಲ್ಲಿ ಚರ್ಚೆ ಜೋರಾಗಿದೆ.
ಇದರಂತೆ ಆಗಸ್ಟ್ ಮೊದಲ ವಾರದಲ್ಲಿ ನಡೆಯುವ ಸಾಧ್ಯತೆಯಿರುವ ವಿಧಾನಮಂಡಲ ಅಧಿವೇಶನಕ್ಕೂ ಮುನ್ನವೇ ಹೊಸ ಸ್ಪೀಕರ್ರನ್ನು ಆಯ್ಕೆ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಡಿಕೆ ಶಿವಕುಮಾರ್ ಸಚಿವ ಸಂಪುಟಕ್ಕೆ ಸೇರ್ಪಡೆಯಾದ ಬಳಿಕ ಯು.ಟಿ. ಖಾದರ್ ಅವರು ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ಬಳಿಕ ಸ್ಪೀಕರ್ ಹುದ್ದೆ ಖಾಲಿಯಾಗಿದೆ. ಹೀಗಾಗಿ ಅಧಿವೇಶನಕ್ಕೂ ಮುನ್ನ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲು ಕಾಂಗ್ರೆಸ್ ನಾಯಕತ್ವ ಸಿದ್ಧತೆ ನಡೆಸಿದೆ.
ಸ್ಪೀಕರ್ ಹುದ್ದೆಗೆ ಹಿರಿಯ ಶಾಸಕರಾದ ಎಚ್.ಕೆ. ಪಾಟೀಲ್ (ಗದಗ), ಬಿ.ಆರ್. ಪಾಟೀಲ್ (ಆಳಂದ), ಸಿ.ಎಸ್. ನಾಡಗೌಡ (ಮುದ್ದೇಬಿಹಾಳ) ಹಾಗೂ ಮಾಜಿ ಸಚಿವ ದಿನೇಶ್ ಗುಂಡೂರಾವ್ (ಗಾಂಧಿನಗರ) ಅವರ ಹೆಸರುಗಳು ಚರ್ಚೆಯಲ್ಲಿವೆ.
ಕಾಂಗ್ರೆಸ್ನ ಹಿರಿಯ ನಾಯಕರೊಬ್ಬರು ಮಾತನಾಡಿ, ಅಂತಿಮವಾಗಿ ಸ್ಪೀಕರ್ ಹುದ್ದೆಗೆ ಯಾರನ್ನು ಆಯ್ಕೆ ಮಾಡಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸಲಿದೆ ಎಂದು ತಿಳಿಸಿದ್ದಾರೆ.
ಕೆಲವು ಹೆಸರುಗಳು ಪರಿಗಣನೆಯಲ್ಲಿವೆ. ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಎಚ್.ಕೆ. ಪಾಟೀಲ್ ಅವರು ಮುಂಚೂಣಿಯಲ್ಲಿದ್ದಾರೆ. ಅವರಿಗೆ ಕಾನೂನು ಮತ್ತು ವಿಧಾನಸಭೆಯ ಕಲಾಪಗಳ ಬಗ್ಗೆ ಅಪಾರ ಅನುಭವವಿದೆ. ಆದ್ದರಿಂದ ಅವರು ಪ್ರಮುಖ ಅಭ್ಯರ್ಥಿಯಾಗಿದ್ದಾರೆ" ಎಂದು ಮೂಲಗಳು ತಿಳಿಸಿವೆ.
ಇನ್ನೊಂದೆಡೆ, ಸಚಿವ ಸ್ಥಾನಕ್ಕಾಗಿ ಹಲವರು ಆಸಕ್ತಿ ತೋರಿದ್ದರೂ, ಸ್ಪೀಕರ್ ಹುದ್ದೆ ಸ್ವೀಕರಿಸಲು ಹಿರಿಯ ಶಾಸಕರು ಅಷ್ಟಾಗಿ ಉತ್ಸುಕರಿಲ್ಲ ಎನ್ನಲಾಗಿದೆ.
ಸ್ಪೀಕರ್ ಹುದ್ದೆ ಸಾಂವಿಧಾನಿಕ ಸ್ಥಾನವಾಗಿದ್ದು, ರಾಜಕೀಯ ಅಧಿಕಾರಕ್ಕಿಂತ ಹೆಚ್ಚು ನಿಷ್ಪಕ್ಷಪಾತ ಜವಾಬ್ದಾರಿಯನ್ನು ಹೊಂದಿರುತ್ತದೆ. ಹೀಗಾಗಿ ಈ ಹುದ್ದೆ ವಹಿಸಿಕೊಳ್ಳಲು ಎಲ್ಲರೂ ಮುಂದೆ ಬರುತ್ತಿಲ್ಲ ದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಸಚಿವ ಸಂಪುಟ ವಿಸ್ತರಣೆಯ ಬಳಿಕ ಸ್ಪೀಕರ್ ಆಯ್ಕೆ ಪ್ರಕ್ರಿಯೆ ವೇಗ ಪಡೆದುಕೊಳ್ಳುವ ಸಾಧ್ಯತೆ ಇದ್ದು, ಆಗಸ್ಟ್ ಮೊದಲ ವಾರದಲ್ಲಿ ನಡೆಯಲಿರುವ ವಿಧಾನಮಂಡಲ ಅಧಿವೇಶನಕ್ಕೂ ಮುನ್ನವೇ ಈ ಹುದ್ದೆಗೆ ಹೊಸ ಸದಸ್ಯರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ.