

ಬೆಂಗಳೂರು: ಶಿವಾಜಿನಗರದಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA)ದ ಇಬ್ಬರು ಮಹಿಳಾ ಅಧಿಕಾರಿಗಳು ಸೇರಿದಂತೆ ಐವರು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಇವರಲ್ಲಿ ಐವರು ಆರೋಪಿಗಳನ್ನು ಶನಿವಾರದವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಬಂಧಿತರಲ್ಲಿ ಪ್ರಮುಖ ಆರೋಪಿಯಾಗಿರುವ ಬಸವರಾಜ್ ಪಡುಕೋಟೆ (56) ಎಂಬಾತ ವೈಟ್ಫೀಲ್ಡ್ ನಿವಾಸಿಯಾಗಿದ್ದು, ರೌಡಿಶೀಟರ್ ಆಗಿದ್ದಾನೆ. ಆತ ಕನ್ನಡಪರ ಸಂಘಟನೆಯೊಂದರ ಅಧ್ಯಕ್ಷ ಎಂದು ಹೇಳಿಕೊಂಡಿದ್ದು, ಅಧಿಕಾರಿಗಳ ಮೇಲೆ ದಾಳಿ ನಡೆಸಲು ತಂಡವನ್ನು ಸಂಘಟಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಮತ್ತೊಬ್ಬ ಆರೋಪಿ ಶಂಕರ್ (52) ಎಂಬಾತನನ್ನು ಶಿವಾಜಿನಗರದಲ್ಲಿ ಬಂಧಿಸಲಾಗಿದೆ. ಈ ಹಿಂದೆ ಬಂಧಿತರಾದವರಲ್ಲಿ ಎಚ್. ಭರತ್, ಬಿ. ಬಸವರಾಜ್, ಟಿ. ಪರಶುರಾಮ್, ಬಿ. ರಘು, ಎನ್. ರಂಜನ್, ಎ. ಮುಜೈದ್ ಮೊಹಮ್ಮದ್, ಎಸ್. ಪಾರ್ಥಿಬನ್ ಅಲಿಯಾಸ್ ಪಂಪನ್, ಆರ್. ರಂಗಸ್ವಾಮಿ, ಎಚ್. ಕೊಟ್ರೇಶ್ ಹಾಗೂ ಕಿರಣ್ ಎಸ್. ನಾಯಕ್ ಸೇರಿದ್ದಾರೆ.
ಪ್ರಮುಖ ಆರೋಪಿ ಬಸವರಾಜ್ ಪಡುಕೋಟೆ, ರಘು, ಪರಶುರಾಮ್, ಬಸವರಾಜ್ ಹಾಗೂ ಪಾರ್ಥಿಬನ್ ಅಲಿಯಾಸ್ ಪಂಪನ್ ಅವರನ್ನು ಪೊಲೀಸ್ ಕಸ್ಟಡಿಗೆ ಪಡೆದಿದ್ದು, ಉಳಿದ ಏಳು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಏನಿದು ಪ್ರಕರಣ?
ಜುಲೈ 22ರಂದು ಮಧ್ಯಾಹ್ನ ಶಿವಾಜಿನಗರ ಬಸ್ ನಿಲ್ದಾಣದ ಸಮೀಪ, ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಪಕ್ಕದಲ್ಲಿ ಜಿಬಿಎ ಅಧಿಕಾರಿಗಳು ಪಾದಚಾರಿ ಮಾರ್ಗದ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಈ ದಾಳಿ ನಡೆದಿತ್ತು.
ಈ ಸಂಬಂಧ ಜಿಬಿಎ ಅಧಿಕಾರಿ ಮಾಧವ ರಾವ್ (40) ಅವರು ದೂರು ದಾಖಲಿಸಿದ್ದು, ತಮ್ಮೊಂದಿಗೆ ಸಾವಿತ್ರಿ, ರುಚಿತಾ ಹಾಗೂ ಸಿದ್ದಪ್ಪ ಸೇರಿದಂತೆ ನಾಲ್ವರು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಆರೋಪಿಗಳಿಂದ ಕ್ಷಮೆಯಾಚನೆ
ಈ ಪ್ರಕರಣದ ಆರೋಪಿಗಳು ತಮ್ಮ ತಪ್ಪನ್ನು ಒಪ್ಪಿಕೊಂಡು, "ಇನ್ನು ಮುಂದೆ ಇಂತಹ ಕೃತ್ಯ ಎಸಗುವುದಿಲ್ಲ. ಕಾನೂನನ್ನು ಕೈಗೆತ್ತಿಕೊಳ್ಳಬಾರದಿತ್ತು" ಎಂದು ಕ್ಷಮೆಯಾಚಿಸುವ ವಿಡಿಯೊವನ್ನು ಪೂರ್ವ ವಿಭಾಗದ ಪೊಲೀಸರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ಇದರ ಬೆನ್ನಲ್ಲೇ ಆರೋಪಿಗಳ ವಿರುದ್ಧ ಕೊಲೆ ಯತ್ನ, ಸರ್ಕಾರಿ ಕರ್ತವ್ಯ ನಿರ್ವಹಿಸುತ್ತಿದ್ದ ಅಧಿಕಾರಿಗಳ ಮೇಲೆ ಹಲ್ಲೆ, ಮಹಿಳೆಯರ ಮೇಲಿನ ದೌರ್ಜನ್ಯ, ಜೀವ ಬೆದರಿಕೆ, ಶಾಂತಿ ಭಂಗಕ್ಕೆ ಪ್ರಚೋದನೆ, ಅಕ್ರಮ ಗುಂಪು ರಚನೆ ಹಾಗೂ ಸರ್ಕಾರಿ ನೌಕರರಿಗೆ ಗಂಭೀರ ಗಾಯ ಉಂಟುಮಾಡಿದ ಆರೋಪಗಳಡಿ ಪ್ರಕರಣ ದಾಖಲಾಗಿದೆ.
ಜಿಬಿಎ ಸಿಬ್ಬಂದಿಗೆ ಪೊಲೀಸ್ ಭದ್ರತೆ ನೀಡುವಂತೆ ಮನವಿ
ಇದರ ನಡುವೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಪೌರ ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘವು ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ಅವರಿಗೆ ಪತ್ರ ಬರೆದು, ಪಾದಚಾರಿ ಮಾರ್ಗ ಒತ್ತುವರಿ ತೆರವು ಸೇರಿದಂತೆ ಜಾರಿ ಕಾರ್ಯಾಚರಣೆಗಳ ವೇಳೆ ಅಧಿಕಾರಿಗಳಿಗೆ ಕಡ್ಡಾಯವಾಗಿ ಸಮರ್ಪಕ ಪೊಲೀಸ್ ಭದ್ರತೆ ಒದಗಿಸುವಂತೆ ಮನವಿ ಮಾಡಿದೆ.
ಇತ್ತೀಚಿನ ದಾಳಿ ಬಳಿಕ ಸಿಬ್ಬಂದಿಯ ಸುರಕ್ಷತೆ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಸಂಘ, ಕಾರ್ಯಾಚರಣೆ ವೇಳೆ ಮಾರ್ಷಲ್ಗಳನ್ನು ನಿಯೋಜಿಸದಿರುವ ವಿಚಾರವನ್ನೂ ಪ್ರಸ್ತಾಪಿಸಿದೆ.