

ಬಂಟ್ವಾಳ: ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದಲ್ಲಿ ಬುಧವಾರ ಬೃಹತ್ ಮರವೊಂದು ಉರುಳಿ ಶಾಲಾ ಬಸ್ ಮೇಲೆ ಬಿದ್ದ ಪರಿಣಾಮ 4 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.
ಮೃತಳನ್ನು ಚಿರನ್ವಿ ಎಂದು ಗುರುತಿಸಲಾಗಿದೆ. ಇತರ ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಲ್ಲಡ್ಕದ ಶ್ರೀ ರಾಮ ಶಾಲೆಗೆ ಸೇರಿದ ಬಸ್ ಸಂಜೆ 5 ಗಂಟೆ ಸುಮಾರಿಗೆ ಮಕ್ಕಳನ್ನು ಮನೆಗೆ ಕರೆದೊಯ್ಯುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಯಾಗುತ್ತಿದೆ.
ಸಂಜೆ ಮಕ್ಕಳನ್ನು ಬಿಡಲು ಎಂದಿನಂತೆಯೇ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಆಂಗ್ಲ ಮಾಧ್ಯಮ ವಿಭಾಗದಿಂದ ಬಸ್ ಹೊರಟಿತ್ತು. ಕೆಲ ಮಕ್ಕಳನ್ನು ಇಳಿಸಿದ ಬಳಿಕ ಬಂಟ್ವಾಳ ತಾಲೂಕು ಬರಿಮಾರು ಗ್ರಾಮದ ಕಲ್ಲೇಟಿ ಎಂಬಲ್ಲಿನ ಶ್ರೀ ಕಾನಲ್ತಾಯ ದೈವಸ್ಥಾನದ ಬದಿಯ ಮರ ಸಂಚರಿಸುತ್ತಿದ್ದ ಬಸ್ ಮೇಲೆ ಬಿದ್ದಿದೆ.