ಕಾವೇರಿ ಜಲ ವಿವಾದ: ಸಿಎಂ ಡಿ.ಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ನಡುವೆ ಆಗಸ್ಟ್ 3ಕ್ಕೆ ಬೆಂಗಳೂರಿನಲ್ಲಿ ಸಭೆ ನಿಗದಿ?

ಮೂಲಗಳ ಪ್ರಕಾರ, ತಮಿಳುನಾಡು ಸರ್ಕಾರದಿಂದ ಸಭೆಗೆ ಮನವಿ ಬಂದಿದ್ದು, ಇದಕ್ಕೆ ಪ್ರತಿಯಾಗಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಆಗಸ್ಟ್ 3ರಂದು ಬೆಂಗಳೂರಿನಲ್ಲಿ ಮಾತುಕತೆ ನಡೆಸಲು ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ.
CM D K Shivakumar and CM Vijay
ಡಿ ಕೆ ಶಿವಕುಮಾರ್, ಸಿಎಂ ವಿಜಯ್
Updated on

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದದ (Cauvery River Water Dispute) ನಡುವೆಯೇ ಕರ್ನಾಟಕ ಮತ್ತು ತಮಿಳುನಾಡು ನಡುವಿನ ಸಂಬಂಧಕ್ಕೆ ಹೊಸ ತಿರುವು ಸಿಗುವ ಸಾಧ್ಯತೆ ಕಾಣಿಸಿಕೊಂಡಿದೆ. ಕಾವೇರಿ ನೀರು ವಿವಾದ ವಿಚಾರವಾಗಿ ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹಾಗೂ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ನಡುವಿನ ಮಾತುಕತೆಗೆ ಸಿದ್ಧತೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ. ಈ ಸಭೆ ನಡೆದರೆ, ಹಲವು ದಶಕಗಳ ಬಳಿಕ ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ಕಾವೇರಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಒಂದೆಡೆ ಸೇರಿ ಮಾತುಕತೆ ನಡೆಸಿದಂತಾಗಲಿದೆ.

ಮೂಲಗಳ ಪ್ರಕಾರ, ತಮಿಳುನಾಡು ಸರ್ಕಾರದಿಂದ ಸಭೆಗೆ ಮನವಿ ಬಂದಿದ್ದು, ಇದಕ್ಕೆ ಪ್ರತಿಯಾಗಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಆಗಸ್ಟ್ 3ರಂದು ಬೆಂಗಳೂರಿನಲ್ಲಿ ಮಾತುಕತೆ ನಡೆಸಲು ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ. ಆದರೆ ಈ ಆಹ್ವಾನವನ್ನು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಒಪ್ಪಿಕೊಂಡಿದ್ದಾರೆಯೇ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.

ಸಿಎಂಗಳ ಸಭೆ ಕುತೂಹಲ

ಸಂಭಾವ್ಯ ಸಭೆಯಲ್ಲಿ ಮೇಕೆದಾಟು ಜಲಾಶಯ ಯೋಜನೆ, ಮಳೆ ಕೊರತೆಯ ವರ್ಷಗಳಲ್ಲಿ ಕಾವೇರಿ ನೀರು ಹಂಚಿಕೆ ಕುರಿತ ಪರಸ್ಪರ ಒಪ್ಪಿಗೆಯ ವ್ಯವಸ್ಥೆ ಹಾಗೂ ಬೆಂಗಳೂರು–ಹೊಸೂರು ಮೆಟ್ರೋ ರೈಲು ಸಂಪರ್ಕ ಯೋಜನೆ ಸೇರಿದಂತೆ ಹಲವು ಮಹತ್ವದ ವಿಷಯಗಳು ಚರ್ಚೆಗೆ ಬರಲಿವೆ ಎಂದು ಮೂಲಗಳು ತಿಳಿಸಿವೆ.

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡು ಹಲವು ವರ್ಷಗಳಿಂದ ಮುಖಾಮುಖಿಯಾಗಿದ್ದು, ಮೇಕೆದಾಟು ಸಮತೋಲನ ಜಲಾಶಯ ನಿರ್ಮಾಣಕ್ಕೆ ಡಿ ಕೆ ಶಿವಕುಮಾರ್ ಸರ್ಕಾರ ಒತ್ತು ನೀಡುತ್ತಿರುವುದು ನೆರೆಯ ರಾಜ್ಯದ ಆಕ್ಷೇಪಕ್ಕೂ ಕಾರಣವಾಗಿದೆ.

ಈ ಸಭೆ ನಡೆದರೆ, ದಕ್ಷಿಣ ಭಾರತದ ಎರಡು ಪ್ರಮುಖ ರಾಜ್ಯಗಳ ನಡುವಿನ ಸಂಬಂಧವನ್ನು ಪುನರುಜ್ಜೀವನಗೊಳಿಸುವ ಹೊಸ ಪ್ರಯತ್ನವೆಂದು ಪರಿಗಣಿಸಲಾಗುತ್ತಿದೆ. ಹಲವು ದಶಕಗಳ ಬಳಿಕ ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ದ್ವಿಪಕ್ಷೀಯ ಮಾತುಕತೆ ನಡೆಸಲಿರುವುದು ಇದೇ ಮೊದಲ ಬಾರಿ ಆಗಲಿದೆ.

CM D K Shivakumar and CM Vijay
ಬರಿದಾಗುತ್ತಿದೆ ಕಾವೇರಿ ಒಡಲು: ನೀರಾವರಿಗಿಂತ ಕುಡಿಯುವ ನೀರಿಗೆ ಆದ್ಯತೆ ನೀಡಿ; ಕರ್ನಾಟಕ-ತಮಿಳುನಾಡಿಗೆ CWMA ಸೂಚನೆ

ಮೂಲಗಳ ಪ್ರಕಾರ, ಸಭೆಯಲ್ಲಿ ಮೇಕೆದಾಟು ಯೋಜನೆ, ಬರಗಾಲದ ವರ್ಷಗಳಲ್ಲಿ ಕಾವೇರಿ ನೀರು ಹಂಚಿಕೆಗೆ ಪರಸ್ಪರ ಒಪ್ಪಿಗೆಯ ಚೌಕಟ್ಟು ರೂಪಿಸುವುದು ಹಾಗೂ ಬೆಂಗಳೂರು–ಹೊಸೂರು ಮೆಟ್ರೋ ರೈಲು ಸಂಪರ್ಕ ಸೇರಿದಂತೆ ಹಲವು ವಿಷಯಗಳು ಚರ್ಚೆಗೆ ಬರಲಿವೆ.

2021ರಲ್ಲಿ ಆಗಿನ ಬಿಜೆಪಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮಿಳುನಾಡಿನ ಆಗಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ಪತ್ರ ಬರೆದು ಮೇಕೆದಾಟು ಯೋಜನೆ ಕುರಿತು ಮಾತುಕತೆಗೆ ಪ್ರಸ್ತಾಪಿಸಿದ್ದರು. ಆದರೆ ಸ್ಟಾಲಿನ್ ಆ ಪ್ರಸ್ತಾವವನ್ನು ತಿರಸ್ಕರಿಸಿದ್ದರು.

ವಿಜಯ್ ಆಹ್ವಾನವನ್ನು ಸ್ವೀಕರಿಸಿದರೆ, ಕಾವೇರಿ ವಿವಾದದ ವಿಚಾರದಲ್ಲಿ ತಮಿಳುನಾಡು ಇದುವರೆಗೆ ಅನುಸರಿಸಿಕೊಂಡು ಬಂದಿದ್ದ ನಿಲುವಿನಿಂದ ಅದು ಮಹತ್ವದ ಬದಲಾವಣೆಯಾಗಲಿದೆ.

ಕಾವೇರಿ ನೀರು ಹಂಚಿಕೆ ವಿವಾದವನ್ನು ಕಾವೇರಿ ಜಲ ವಿವಾದ ನ್ಯಾಯಮಂಡಳಿ (CWDT) ಹಾಗೂ ಸುಪ್ರೀಂ ಕೋರ್ಟ್ ಈಗಾಗಲೇ ಇತ್ಯರ್ಥಗೊಳಿಸಿವೆ. ಆದ್ದರಿಂದ ಈ ವಿಷಯದಲ್ಲಿ ಕರ್ನಾಟಕದೊಂದಿಗೆ ಪ್ರತ್ಯೇಕ ಮಾತುಕತೆ ನಡೆಸುವುದಿಲ್ಲ ಎಂಬುದು ತಮಿಳುನಾಡಿನ ಅಧಿಕೃತ ನಿಲುವಾಗಿದೆ.

ಈ ಹಿಂದೆ ಡಿಎಂಕೆ ಹಾಗೂ ಎಐಎಡಿಎಂಕೆ ನೇತೃತ್ವದ ಸರ್ಕಾರಗಳು ಕಾವೇರಿ ವಿಚಾರದಲ್ಲಿ ಕರ್ನಾಟಕದೊಂದಿಗೆ ಮಾತುಕತೆ ನಡೆಸಬೇಕೆಂಬ ಬೇಡಿಕೆಗಳನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದವು. ಅಲ್ಲದೆ, ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸಿ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿದ್ದು, ಪ್ರಸ್ತಾವಿತ ಅಣೆಕಟ್ಟಿಗೆ ಸಂಬಂಧಿಸಿದ ವಿವಾದಗಳನ್ನು ಇತ್ಯರ್ಥಪಡಿಸಲು ಪ್ರತ್ಯೇಕ ನ್ಯಾಯಮಂಡಳಿ ರಚಿಸುವಂತೆ ಆಗ್ರಹಿಸಿದೆ. ಇಂತಹ ಪರಿಸ್ಥಿತಿಯಲ್ಲಿ ವಿಜಯ್ ಅವರಿಗೆ ಕರ್ನಾಟಕದೊಂದಿಗೆ ಈ ವಿಷಯದಲ್ಲಿ ಮಾತುಕತೆ ನಡೆಸುವುದು ರಾಜಕೀಯವಾಗಿ ಸವಾಲಿನ ವಿಷಯವಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com