BPL ಕಾರ್ಡ್ ಆಕಾಂಕ್ಷಿಗಳಿಗೆ Good News: ವಾರ್ಷಿಕ ಆದಾಯ ಮಿತಿ 3 ಲಕ್ಷ ರೂ.ಗೆ ಹೆಚ್ಚಿಸಲು ಸರ್ಕಾರ ನಿರ್ಧಾರ..!

ಬಿಪಿಎಲ್ ಕಾರ್ಡ್‌ಗೆ ಅರ್ಹತೆ ಪಡೆಯಲು ಇರುವ ವಾರ್ಷಿಕ ಆದಾಯ ಮಿತಿಯನ್ನು ರೂ.1.20 ಲಕ್ಷದಿಂದ ರೂ.3 ಲಕ್ಷಕ್ಕೆ ಹೆಚ್ಚಿಸುವ ಮಹತ್ವದ ನಿರ್ಧಾರವನ್ನು ಸರ್ಕಾರ ಕೈಗೊಂಡಿದ್ದು, ಆಡಳಿತ ಸುಧಾರಣಾ ಆಯೋಗದ ಶಿಫಾರಸಿನಂತೆ ಈ ಬದಲಾವಣೆಯನ್ನು ಜಾರಿಗೆ ತರಲು ಕ್ರಮ ಆರಂಭಿಸಲಾಗಿದೆ.
File photo
ಸಂಗ್ರಹ ಚಿತ್ರ
Updated on

ಬೆಂಗಳೂರು: ಬಿಪಿಎಲ್ (BPL) ಕಾರ್ಡ್ ಪಡೆಯಲು ಕಾಯುತ್ತಿರುವ ಲಕ್ಷಾಂತರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ ಸಿಗುವ ಸಾಧ್ಯತೆ ಇದೆ.

ಬಿಪಿಎಲ್ ಕಾರ್ಡ್‌ಗೆ ಅರ್ಹತೆ ಪಡೆಯಲು ಇರುವ ವಾರ್ಷಿಕ ಆದಾಯ ಮಿತಿಯನ್ನು ರೂ.1.20 ಲಕ್ಷದಿಂದ ರೂ.3 ಲಕ್ಷಕ್ಕೆ ಹೆಚ್ಚಿಸುವ ಮಹತ್ವದ ನಿರ್ಧಾರವನ್ನು ಸರ್ಕಾರ ಕೈಗೊಂಡಿದ್ದು, ಆಡಳಿತ ಸುಧಾರಣಾ ಆಯೋಗದ ಶಿಫಾರಸಿನಂತೆ ಈ ಬದಲಾವಣೆಯನ್ನು ಜಾರಿಗೆ ತರಲು ಕ್ರಮ ಆರಂಭಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.

ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಅವರೊಂದಿಗೆ ಪರಿಶೀಲನಾ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಆಡಳಿತ ಸುಧಾರಣಾ ಆಯೋಗದ ಶಿಫಾರಸಿನಂತೆ ಬಿಪಿಎಲ್ ಕಾರ್ಡ್‌ಗಳ ಆದಾಯ ಮಿತಿಯನ್ನು ರೂ.3 ಲಕ್ಷಕ್ಕೆ ಹೆಚ್ಚಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿದರು.

ಇದೇ ವೇಳೆ, ರೂ.6,000 ಕೋಟಿ ವೆಚ್ಚದ 'ಇಂದಿರಾ ಕಿಟ್' ಯೋಜನೆಯ ಟೆಂಡರ್ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಮುಂದಿನ ಎರಡು ತಿಂಗಳೊಳಗೆ ಕಿಟ್ ವಿತರಣೆ ಆರಂಭವಾಗುವ ನಿರೀಕ್ಷೆಯಿದೆ ಎಂದು ತಿಳಿಸಿದರು.

ಇಂದಿರಾ ಕಿಟ್‌ನಲ್ಲಿ 5 ಕೆಜಿ ಅಕ್ಕಿ, ತಲಾ 1 ಕೆಜಿ ತೊಗರಿಬೇಳೆ, ಹೆಸರಿಬೇಳೆ, ಸಕ್ಕರೆ, ಉಪ್ಪು ಹಾಗೂ 1 ಲೀಟರ್ ಅಡುಗೆ ಎಣ್ಣೆ ನೀಡುವ ಪ್ರಸ್ತಾವನೆ ಇದೆ.

ಅನ್ನಭಾಗ್ಯ ಯೋಜನೆಯಡಿ ರಾಜ್ಯದ 4.42 ಕೋಟಿ ಫಲಾನುಭವಿಗಳಿಗೆ 10 ಕೆಜಿ ಅಕ್ಕಿ ವಿತರಿಸಲಾಗುತ್ತಿದ್ದು, ಕರ್ನಾಟಕವನ್ನು ಹಸಿವು ಮುಕ್ತ ರಾಜ್ಯವನ್ನಾಗಿ ಮಾಡುವ ಗುರಿಯೊಂದಿಗೆ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಹೇಳಿದರು.

File photo
14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದು: ಸಚಿವ ಕೆ.ಎಚ್ ಮುನಿಯಪ್ಪ ಸುಳಿವು

ಪಡಿತರ ಚೀಟಿಗಳ ಪರಿಶೀಲನೆ ಕುರಿತು ಸ್ಪಷ್ಟನೆ ನೀಡಿದ ಸಚಿವರು, ಯಾವುದೇ ಪಡಿತರ ಚೀಟಿಯನ್ನು ರದ್ದುಪಡಿಸುವುದಿಲ್ಲ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಅರ್ಹತೆಯಿಲ್ಲದ ಬಿಪಿಎಲ್ ಕಾರ್ಡ್‌ಗಳನ್ನು ಮಾತ್ರ ಎಪಿಎಲ್ (APL) ವರ್ಗಕ್ಕೆ ವರ್ಗಾಯಿಸಲಾಗುವುದು ಎಂದು ತಿಳಿಸಿದರು.

ಸಾರ್ವಜನಿಕ ವಿತರಣಾ ವ್ಯವಸ್ಥೆ (PDS)ಯ ಆಹಾರಧಾನ್ಯಗಳ ಅಕ್ರಮ ಸಾಗಾಟ ತಡೆಯಲು ಇಲಾಖೆಯ ಗೋದಾಮುಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಆಹಾರಧಾನ್ಯ ಸಾಗಿಸುವ ವಾಹನಗಳಿಗೆ ಜಿಪಿಎಸ್ ಟ್ರ್ಯಾಕಿಂಗ್ ವ್ಯವಸ್ಥೆ ಜಾರಿಗೊಳಿಸಲಾಗಿದ್ದು, ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರವನ್ನು ಸ್ಥಾಪಿಸಲಾಗಿದೆ. ತೂಕ ಮತ್ತು ಅಳತೆಗಳ ಮೇಲ್ವಿಚಾರಣೆಗಾಗಿ 33 ಹೊಸ ತಪಾಸಣಾ ವಾಹನಗಳನ್ನು ಒದಗಿಸಲಾಗಿದೆ.

ಆಹಾರಧಾನ್ಯಗಳ ಅಕ್ರಮ ಸಾಗಣೆ ವಿರುದ್ಧ ಇಲಾಖೆ 1,497 ಎಫ್‌ಐಆರ್‌ಗಳನ್ನು ದಾಖಲಿಸಿದ್ದು, ಸುಮಾರು ರೂ.50 ಕೋಟಿ ಮೌಲ್ಯದ ಪಿಡಿಎಸ್ ಆಹಾರಧಾನ್ಯಗಳನ್ನು ವಶಪಡಿಸಿಕೊಂಡಿದೆ ಎಂದು ಮಾಹಿತಿ ನೀಡಿದರು.

ಇದೇ ವೇಳೆ ರಾಜ್ಯದ 20,259 ನ್ಯಾಯಬೆಲೆ ಅಂಗಡಿಗಳು ಬೆಳಗ್ಗೆ 6ರಿಂದ ರಾತ್ರಿ 10 ಗಂಟೆಯವರೆಗೆ ತೆರೆದಿರಲು ಸರ್ಕಾರ ಸೂಚನೆ ನೀಡಿದ್ದು, ಯಾವುದೇ ಸಮಸ್ಯೆ ಕಂಡುಬಂದರೆ 1967 ಸಹಾಯವಾಣಿಗೆ ಕರೆ ಮಾಡಿ ದೂರು ನೀಡುವಂತೆ ಫಲಾನುಭವಿಗಳಿಗೆ ಮನವಿ ಮಾಡಲಾಗಿದೆ.

ಫಲಾನುಭವಿಗಳು ತಮ್ಮ ಮೊಬೈಲ್ ಫೋನ್ ಮೂಲಕವೇ ಇ-ಕೆವೈಸಿ (e-KYC) ಪೂರ್ಣಗೊಳಿಸಲು ಅವಕಾಶ ಕಲ್ಪಿಸುವ ಪ್ರಸ್ತಾವನೆಯನ್ನೂ ಸರ್ಕಾರ ಪರಿಶೀಲಿಸುತ್ತಿದೆ ಎಂದು ಮುನಿಯಪ್ಪ ತಿಳಿಸಿದರು.

ಕನಿಷ್ಠ ಬೆಂಬಲ ಬೆಲೆ (MSP) ಯೋಜನೆಯಡಿ ಸರ್ಕಾರ ಇದುವರೆಗೆ 5.60 ಲಕ್ಷ ಟನ್ ರಾಗಿ ಖರೀದಿಸಿದೆ ಎಂದು ಸಚಿವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com