

ಬೆಂಗಳೂರು: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರೊಂದಿಗೆ ಪ್ರಸ್ತಾವಿತ ಭೇಟಿ ಕುರಿತು ಹರಿದಾಡುತ್ತಿರುವ ಸುದ್ದಿಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಸ್ಪಷ್ಟಪಡಿಸಲೂ ಇಲ್ಲ, ಅಲ್ಲಗಳೆಯಲೂ ಇಲ್ಲ. ರಾಜ್ಯವು ಎಲ್ಲರೊಂದಿಗೂ ಮಾತುಕತೆ ನಡೆಸಲು ಸಿದ್ಧವಿದೆ ಎಂದು ಮಾತ್ರ ಹೇಳಿದರು.
ಈ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಡಿ ಕೆ ಶಿವಕುಮಾರ್, ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲು ನಿರಾಕರಿಸಿದರು.
ಈಗ ನಾನು ಏನನ್ನೂ ಬಹಿರಂಗಪಡಿಸಲು ಬಯಸುವುದಿಲ್ಲ. ಮುಂದಿನ ವಾರ ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಹಲವು ಕೆಲಸಗಳಲ್ಲಿ ತುಂಬಾ ಬ್ಯುಸಿಯಾಗಿದ್ದೇನೆ. ನಾವು ಎಲ್ಲರೊಂದಿಗೂ ಮಾತನಾಡಲು, ವಿಚಾರಗಳನ್ನು ಹಂಚಿಕೊಳ್ಳಲು ಮತ್ತು ಎಲ್ಲರೊಂದಿಗೆ ಕೆಲಸ ಮಾಡಲು ಸಿದ್ಧರಿದ್ದೇವೆ ಎಂದು ಅವರು ಹೇಳಿದರು.
ಈ ಪ್ರಸ್ತಾವಿತ ಭೇಟಿಯಲ್ಲಿ ಕಾವೇರಿ ನದಿ ನೀರು ಹಂಚಿಕೆ ಹಾಗೂ ಡಿ ಕೆ ಶಿವಕುಮಾರ್ ಅವರ ವಿಧಾನಸಭಾ ಕ್ಷೇತ್ರವಾದ ಕನಕಪುರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಮೇಕೆದಾಟು ಸಮತೋಲನ ಜಲಾಶಯ ಯೋಜನೆ ಸೇರಿದಂತೆ ಪ್ರಮುಖ ಅಂತಾರಾಜ್ಯ ವಿಷಯಗಳ ಕುರಿತು ಚರ್ಚೆಯಾಗುವ ಸಾಧ್ಯತೆ ಇದೆ. ಮೇಕೆದಾಟು ಯೋಜನೆಯನ್ನು ತಮಿಳುನಾಡು ಸರ್ಕಾರ ಸತತವಾಗಿ ವಿರೋಧಿಸುತ್ತಿದೆ.
ಸರ್ಕಾರವೇ ಸಭೆಗೆ ಮನವಿ ಮಾಡಿದ್ದು, ಅದರ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಗಸ್ಟ್ 3ರಂದು ಬೆಂಗಳೂರಿನಲ್ಲಿ ಮಾತುಕತೆಗೆ ಮುಖ್ಯಮಂತ್ರಿ ವಿಜಯ್ ಅವರನ್ನು ಆಹ್ವಾನಿಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಆದರೆ, ವಿಜಯ್ ಅವರು ಈ ಆಹ್ವಾನವನ್ನು ಸ್ವೀಕರಿಸಿದ್ದಾರೆಯೇ ಎಂಬ ಬಗ್ಗೆ ಇನ್ನೂ ಯಾವುದೇ ಅಧಿಕೃತ ದೃಢೀಕರಣ ಇಲ್ಲ ಎಂದು ಮೂಲಗಳು ತಿಳಿಸಿವೆ.