ಬರ ಪರಿಸ್ಥಿತಿ ಕುರಿತು ಚರ್ಚೆ: ರಾಜ್ಯದ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಡೆಯುತ್ತಿರುವ ಸಂಸತ್ ಅಧಿವೇಶನದಲ್ಲಿ ರಾಜ್ಯದ ಪರವಾಗಿ ಒಗ್ಗಟ್ಟಿನಿಂದ ಧ್ವನಿ ಎತ್ತುವ ಉದ್ದೇಶದಿಂದ ಸಂಸದರ ಸಭೆ ಕರೆಯಲಾಗಿದೆ ಎಂದು ಹೇಳಿದರು.
DK Shivakumar
ಮುಖ್ಯಮಂತ್ರಿ ಡಿಕೆ ಶಿವಕುಮಾರ್
Updated on

ಬೆಂಗಳೂರು: ರಾಜ್ಯದಲ್ಲಿನ ಬರ ಪರಿಸ್ಥಿತಿ ಹಾಗೂ ಇತರ ವಿಷಯಗಳ ಕುರಿತು ಚರ್ಚಿಸಲು, ದೆಹಲಿಯಲ್ಲಿ ಜುಲೈ 27 ರಂದು ಕರ್ನಾಟಕದ ಕೇಂದ್ರ ಸಚಿವರು ಮತ್ತು ಸಂಸದರ ಸಭೆಯನ್ನು ಕರೆದಿರುವುದಾಗಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾನುವಾರ ತಿಳಿಸಿದರು.

ಅಲ್ಲದೆ, ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನವು ಆಗಸ್ಟ್ 13 ರಿಂದ ಆರಂಭವಾಗಲಿದೆ ಎಂದೂ ಅವರು ಹೇಳಿದರು.

'ನಾನು ನಾಳೆ (ದೆಹಲಿಯಲ್ಲಿ) ಕರ್ನಾಟಕದ ಸಂಸದರ ಸಭೆಯನ್ನು ಕರೆದಿದ್ದೇನೆ. ಬರ ಪರಿಸ್ಥಿತಿಯ ಬಗ್ಗೆ ಅವರಿಗೆ ಮನವರಿಕೆ ಮಾಡಿಕೊಡಬೇಕಿದೆ. ನಾವು ಅವರಿಗೆ ಮನವಿ ಮಾಡಿಕೊಳ್ಳಬೇಕಿದೆ. ಜಲಾಶಯಗಳ ಸ್ಥಿತಿಗತಿ, ಇತರ ಸಮಸ್ಯೆಗಳು ಹಾಗೂ ಬಾಕಿ ಇರುವ ಯೋಜನೆಗಳ ಬಗ್ಗೆ ಅವರ ಗಮನಕ್ಕೆ ತರಬೇಕಿದೆ' ಎಂದು ಶಿವಕುಮಾರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಡೆಯುತ್ತಿರುವ ಸಂಸತ್ ಅಧಿವೇಶನದಲ್ಲಿ ರಾಜ್ಯದ ಪರವಾಗಿ ಒಗ್ಗಟ್ಟಿನಿಂದ ಧ್ವನಿ ಎತ್ತುವ ಉದ್ದೇಶದಿಂದ ಸಂಸದರ ಸಭೆ ಕರೆಯಲಾಗಿದೆ ಎಂದು ಹೇಳಿದರು.

ಸಭೆಯಲ್ಲಿ ಭಾಗವಹಿಸುವಂತೆ ಕೇಂದ್ರ ಸಚಿವರಿಗೂ ಮನವಿ ಮಾಡಲಾಗುವುದು. ತಾವು ಈಗಾಗಲೇ ಪ್ರಲ್ಹಾದ್ ಜೋಶಿ ಮತ್ತು ವಿ ಸೋಮಣ್ಣ ಅವರೊಂದಿಗೆ ಮಾತನಾಡಿದ್ದೇನೆ. ಎಚ್‌ಡಿ ಕುಮಾರಸ್ವಾಮಿ ಮತ್ತು ಶೋಭಾ ಕರಂದ್ಲಾಜೆ ಅವರೊಂದಿಗೆ ಮಾತನಾಡಲು ಸಾಧ್ಯವಾಗಿಲ್ಲ. ನಾನು ಅವರೆಲ್ಲರಿಗೂ ಮನವಿ ಮಾಡುತ್ತೇನೆ' ಎಂದು ಅವರು ಹೇಳಿದರು.

DK Shivakumar
ಬೆಂಗಳೂರಿನ 37 ತಾಲ್ಲೂಕುಗಳಲ್ಲಿ ತೀವ್ರ ಬರ ಪರಿಸ್ಥಿತಿ

'ರಾಜ್ಯ ವಿಧಾನಮಂಡಲದ ಅಧಿವೇಶನವು ಆಗಸ್ಟ್ 13 ರಿಂದ ಆರಂಭವಾಗಲಿದೆ. ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆಯ ರಜೆ ಇರುತ್ತದೆ; ಆನಂತರ ಸುಮಾರು 10 ದಿನಗಳ ಕಾಲ ಅಧಿವೇಶನ ನಡೆಯಲಿದೆ' ಎಂದು ಹೇಳಿದರು.

ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ನಡೆಯಲಿರುವ ಮೊದಲ ವಿಧಾನಮಂಡಲ ಅಧಿವೇಶನ ಇದಾಗಿರುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com