

ಬೆಂಗಳೂರು: ರಾಜ್ಯದ ಭವಿಷ್ಯದ ಅಗತ್ಯಗಳಿಗೆ ಅನುಗುಣವಾಗಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಶನಿವಾರ ಹೇಳಿದರು.
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ (ಕೆಎಸ್ಎಫ್ಇಎಸ್) ಹಾಗೂ ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (ಎಸ್ಡಿಆರ್ಎಫ್) ಮುಖ್ಯ ಕಚೇರಿಗೆ ಭೇಟಿ ನೀಡಿದ ಅವರು, ಇಲಾಖೆಯ ಸಮಗ್ರ ಆಧುನೀಕರಣಕ್ಕಾಗಿ ಸಮಗ್ರ ಮಾರ್ಗಸೂಚಿ (ರೋಡ್ಮ್ಯಾಪ್) ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಯೋಜನೆಯಲ್ಲಿ ತಂತ್ರಜ್ಞಾನ, ಮೂಲಸೌಕರ್ಯ, ಸಿಬ್ಬಂದಿ, ತರಬೇತಿ ಹಾಗೂ ತುರ್ತು ಪರಿಸ್ಥಿತಿಗಳಿಗೆ ತ್ವರಿತ ಪ್ರತಿಕ್ರಿಯೆ ನೀಡುವ ಸಾಮರ್ಥ್ಯವನ್ನು ಹೆಚ್ಚಿಸುವ ಅಂಶಗಳಿಗೆ ಆದ್ಯತೆ ನೀಡಬೇಕು ಎಂದು ಹೇಳಿದರು.
ಇಲಾಖೆಯಲ್ಲಿರುವ ಖಾಲಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಅಗತ್ಯವಿರುವ ಕಡೆ ಹೊಸ ಅಗ್ನಿಶಾಮಕ ಠಾಣೆಗಳನ್ನು ಸ್ಥಾಪಿಸಲಾಗುವುದು. ಬಡ್ತಿ, ಸೇವಾ ನಿಯಮಗಳು ಹಾಗೂ ಸಿಬ್ಬಂದಿ ಕಲ್ಯಾಣಕ್ಕೆ ಸಂಬಂಧಿಸಿದ ಪ್ರಸ್ತಾವನೆಗಳನ್ನು ಸರ್ಕಾರ ಸಕಾರಾತ್ಮಕವಾಗಿ ಪರಿಗಣಿಸಲಿದೆ.
ಸಾರ್ವಜನಿಕ ಸುರಕ್ಷತೆ ಹಾಗೂ ತುರ್ತು ಸಂದರ್ಭಗಳಲ್ಲಿ ಗೃಹರಕ್ಷಕ ದಳದ (ಹೋಂ ಗಾರ್ಡ್ಸ್) ಸಿಬ್ಬಂದಿಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಕಾರ್ಯಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಹೋಂ ಗಾರ್ಡ್ಸ್ ಸಿಬ್ಬಂದಿಯ ಗೌರವಧನ ಹಾಗೂ ಇತರೆ ಸೇವಾ ಸೌಲಭ್ಯಗಳನ್ನು ಹೆಚ್ಚಿಸುವ ಕುರಿತು ಪ್ರಸ್ತಾವನೆ ಸಲ್ಲಿಸುವಂತೆಯೂ ಹೇಳಿದರು.
ಇದೇ ವೇಳೆ ಗೃಹ ಬಳಕೆಯ ಎಲ್ಪಿಜಿ ಅನಿಲ ಸೋರಿಕೆಯಿಂದ ಉಂಟಾಗುತ್ತಿರುವ ಅಗ್ನಿ ಅವಘಡಗಳ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಸಚಿವರು, ಇಂತಹ ಪ್ರಕರಣಗಳನ್ನು ಸಮರ್ಥವಾಗಿ ನಿಭಾಯಿಸಲು ಅಗ್ನಿಶಾಮಕ ಸಿಬ್ಬಂದಿಗೆ ವಿಶೇಷ ತರಬೇತಿ ನೀಡುವ ಅಗತ್ಯವಿದೆ ಎಂದು ಹೇಳಿದರು.
ಈ ತರಬೇತಿ ಕಾರ್ಯಕ್ರಮಗಳಿಗೆ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ನಿಧಿ ಅಥವಾ ಇತರೆ ವ್ಯವಸ್ಥೆಗಳ ಮೂಲಕ ಹಣಕಾಸು ನೆರವು ಪಡೆಯುವ ಕುರಿತು ಎಲ್ಪಿಜಿ ಮಾರುಕಟ್ಟೆ ಕಂಪನಿಗಳೊಂದಿಗೆ ಚರ್ಚೆ ನಡೆಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಬಳಿಕ ಅಧಿಕಾರಿಗಳು ಸಚಿವರಿಗೆ ಇಲಾಖೆಯ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ನೀಡಿದ್ದು, ಪ್ರಸ್ತುತ ರಾಜ್ಯದಲ್ಲಿ 219 ಅಗ್ನಿಶಾಮಕ ಠಾಣೆಗಳು, 6 ಅಗ್ನಿ ನಿಯಂತ್ರಣ ಘಟಕಗಳು, ಅಗ್ನಿಶಾಮಕ ತರಬೇತಿ ಅಕಾಡೆಮಿ, ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆಯ 5 ಕಂಪನಿಗಳು, ಆಧುನಿಕ ಅಗ್ನಿಶಾಮಕ ಹಾಗೂ ರಕ್ಷಣಾ ವಾಹನಗಳ ಪಡೆ, ಸುಧಾರಿತ ರಕ್ಷಣಾ ಸಾಧನಗಳು ಮತ್ತು 'ಅಗ್ನಿ-2' ಡಿಜಿಟಲ್ ಸೇವಾ ವೇದಿಕೆ ಕಾರ್ಯನಿರ್ವಹಿಸುತ್ತಿವೆ ಎಂದು ವಿವರಿಸಿದರು.
ಇದರ ಜೊತೆಗೆ ಹೊಸ ಅಗ್ನಿಶಾಮಕ ಠಾಣೆಗಳ ನಿರ್ಮಾಣ, ಆಧುನಿಕ ವಾಹನಗಳ ಖರೀದಿ ಹಾಗೂ ಇಲಾಖೆಯ ಆಧುನೀಕರಣ ಯೋಜನೆಗಳ ಕುರಿತು ಕೂಡ ಸಚಿವರಿಗೆ ಅಧಿಕಾರಿಗಳು ಮಾಹಿತಿ ನೀಡಿದರು