

ಬೆಂಗಳೂರು: ಧರ್ಮಸ್ಥಳ ಸಾಮೂಹಿಕ ಮೃತದೇಹಗಳ ಅಂತ್ಯಸಂಸ್ಕಾರ, ಬುರುಡೆ ಪ್ರಕರಣದಲ್ಲಿ ತಮಿಳುನಾಡಿನ ತಿರುವಳ್ಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ಸಸಿಕಾಂತ್ ಸೆಂಥಿಲ್ ಮಾಸ್ಟರ್ಮೈಂಡ್ ಎಂದು ಜನಾರ್ದನ ರೆಡ್ಡಿ ಆರೋಪಿಸಿದ್ದು ಈ ಸಂಬಂಧ ಸಸಿಕಾಂತ್ ಸೆಂಥಿಲ್ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಬೆಂಗಳೂರಿನ 42ನೇ ACMM ನ್ಯಾಯಾಲಯಕ್ಕೆ ವಕೀಲರಾದ ಸೂರ್ಯ ಮುಕುಂದರಾಜ್ ಜತೆ ಖುದ್ದು ಹಾಜರಾಗಿದ್ದ ಸಸಿಕಾಂತ್ ಸೆಂಥಿಲ್, ಜನಾರ್ದನ ರೆಡ್ಡಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದು ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ನ್ಯಾ.ಸಂದೀಪ್ ಪಾಟೀಲ್ ಅವರು ಸಮನ್ಸ್ ಜಾರಿ ಮಾಡಿದ್ದಾರೆ. ವಿಚಾರಣೆ ಖುದ್ದು ಹಾಜರಾಗುವಂತೆ ಸೂಚಿಸಿದ್ದು ಪ್ರಕರಣದ ವಿಚಾರಣೆ ಆಗಸ್ಟ್ 24ಕ್ಕೆ ಮುಂದೂಡಲಾಗಿದೆ.
ಜನಾರ್ದನ ರೆಡ್ಡಿ ನನ್ನ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡಿದ್ದಾರೆ. ಇದರಿಂದ ನನ್ನ ಘನತೆ ಹಾಗೂ ಗೌರವಕ್ಕೆ ಧಕ್ಕೆಯುಂಟಾಗಿದೆ. ಸಾರ್ವಜನಿಕ ಜೀವನದಲ್ಲಿರುವ ನನ್ನ ಹೆಸರಿಗೆ ಕಳಂಕ ತರುವ ಉದ್ದೇಶದಿಂದ ಸುಳ್ಳು ಆರೋಪಗಳನ್ನು ಮಾಡಲಾಗಿದೆ. ಈ ನಿಟ್ಟಿನಲ್ಲಿಆರೋಪಿತರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಸಸಿಕಾಂತ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.