

ಬೆಂಗಳೂರು: ತಾನು ಕಾಂಗ್ರೆಸ್ ನ ಪ್ರಭಾವಿ ನಾಯಕರ ಮಾಧ್ಯಮ ಸಲಹೆಗಾರ ಎಂದು ಹೇಳಿಕೊಂಡು, ಮಹಿಳೆಯೊಬ್ಬರಿಗೆ 'ವಿಧಾನಪರಿಷತ್(MLC) ಸದಸ್ಯೆ ಮಾಡಿಸುವುದಾಗಿ ನಂಬಿಸಿ ಕೋಟಿ ಕೋಟಿ ಹಣ ಪಡೆದು ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ.
ಮಂಗಳೂರಿನ ಮೂಲದ ಸಮಾಜಸೇವಕಿ ನೀಡಿರುವ ದೂರಿನ ಆಧಾರದ ಮೇಲೆ, ತಾನು ಪ್ರಮುಖ ಕಾಂಗ್ರೆಸ್ ನಾಯಕರ ಮಾಧ್ಯಮ ಸಲಹೆಗಾರ ಎಂದು ಪರಿಚಯಿಸಿಕೊಂಡಿದ್ದ ಯರಿಸ್ವಾಮಿ ವಿರುದ್ಧ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಈ ವ್ಯಕ್ತಿ, ರಾಜಕೀಯ ನಾಯಕರ ಜೊತೆಗಿನ ಫೋಟೋಗಳನ್ನು ತೋರಿಸಿ ನಂಬಿಕೆ ಗಳಿಸಿದ್ದ. ಬಳಿಕ 1.50 ಕೋಟಿ ರೂ. ಪಡೆದು ವಂಚನೆ ಮಾಡಿದ ಆರೋಪ ಕೇಳಿ ಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಯರಿಸ್ವಾಮಿ ಹಾಗೂ ಆತನ ಸಹಚರರಾದ ಸಿದ್ದರಾಜು ಮತ್ತು ಬಸವರಾಜು ವಿರುದ್ಧ ಎಫ್ಐಆರ್ ದಾಖಲಾಗಿದೆ.
ಒಟ್ಟು ಐದು ಕೋಟಿ ರೂಪಾಯಿಗೆ ಡೀಲ್ ಕುದುರಿಸಿದ್ದ ಆರೋಪಿ, 2024ರ ಆಗಸ್ಟ್ನಿಂದ 2025ರ ಜನವರಿಯ ಅವಧಿಯಲ್ಲಿ ಹಂತ-ಹಂತವಾಗಿ ಒಟ್ಟು 1.50 ಕೋಟಿ ರೂಪಾಯಿ ನಗದು ಪಡೆದಿದ್ದಾರೆ.
ನಗರದ ಮೈಸೂರು ಬ್ಯಾಂಕ್ ವೃತ್ತದ ಬಳಿಯ ಶಿಕ್ಷಕರ ಸದನ ಹಾಗೂ ಮಲ್ಲೇಶ್ವರಂನ ಕೆ.ಸಿ. ಜನರಲ್ ಆಸ್ಪತ್ರೆ ಬಳಿ ಯರಿಸ್ವಾಮಿಯ ಸೂಚನೆಯಂತೆ ಆತನ ಸಹಚರರಾದ ಸಿದ್ದರಾಜು ಮತ್ತು ಬಸವರಾಜು ಹಣ ಪಡೆದುಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ದೆಹಲಿಯಲ್ಲಿ ಲೈಂಗಿಕ ಕಿರುಕುಳ
ಹಣ ವಂಚನೆಯಷ್ಟೇ ಅಲ್ಲದೆ, ಎಐಸಿಸಿ (AICC) ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿಸುವುದಾಗಿ ನಂಬಿಸಿ ಮಹಿಳೆಯನ್ನು ನವದೆಹಲಿಗೆ ಕರೆದೊಯ್ದಿದ್ದ ಯರಿಸ್ವಾಮಿ, ಅಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ.
ಹಣವೂ ಕೈಸೇರದೆ, ಹುದ್ದೆಯೂ ಸಿಗದೆ ವಂಚನೆಗೊಳಗಾಗಿರುವುದು ಅರಿವಿಗೆ ಬರುತ್ತಿದ್ದಂತೆ ಧೈರ್ಯಗೆಡದ ಸಂತ್ರಸ್ತೆ, ಹಲಸೂರು ಗೇಟ್ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.