

ಉಡುಪಿ: ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ಗುಂಡಿಕ್ಕಿ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದು, ಇಡೀ ಕರಾವಳಿ ಬೆಚ್ಚಿ ಬಿದ್ದಿದೆ.
ಇಂದು ಬೆಳಗ್ಗೆ ಉಡುಪಿ ಜಿಲ್ಲೆಯ ಕುಂದಾಪುರ ಪಟ್ಟಣದ ಚರ್ಚ್ ರಸ್ತೆಯಲ್ಲಿ ಬಾರ್ಕೂರು-ಕಚ್ಚೂರು ಮೂಲದ ಉದ್ಯಮಿ ಐವನ್ ರಿಚರ್ಡ್ ಮಸ್ಕರೇನಸ್(45) ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಸ್ಕರೇನಸ್ ಅವರು ಅವರ ಕಾರಿನ ಬಳಿ ಶವವಾಗಿ ಪತ್ತೆಯಾಗಿದ್ದು, ಅವರ ದೇಹದ ಮೇಲೆ ಗುಂಡೇಟಿನ ಗಾಯಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಗುಂಡಿನ ದಾಳಿ ಇಂದು ಬೆಳಗಿನ ಜಾವ ಬೆಳಕಿಗೆ ಬಂದಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಐವನ್ ರಿಚರ್ಡ್ ಅವರು ಕೆಲವು ವ್ಯವಹಾರಗಳನ್ನು ನಡೆಸುತ್ತಿದ್ದರು. ತಮ್ಮ ಮೊದಲ ಪತ್ನಿಯನ್ನು ತೊರೆದು, ಬಾರ್ಕೂರು ಮೂಲದ ಮಹಿಳೆಯೊಂದಿಗೆ ಅವರು ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ.
ದಾಳಿಕೋರರನ್ನು ಗುರುತಿಸಲು ಮತ್ತು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ. ತನಿಖಾಧಿಕಾರಿಗಳು ಪ್ರಕರಣವನ್ನು ಹಲವು ಕೋನಗಳಿಂದ ತನಿಖೆ ನಡೆಸುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮುಂಜಾನೆ ಮಹಿಳೆಯೊಂದಿಗೆ ಕಾರಿನಲ್ಲಿ ಕುಂದಾಪುರದ ಚರ್ಚ್ ರಸ್ತೆಗೆ ಬಂದಿದ್ದ ವೇಳೆ, ಹೋಲಿ ರೋಸರಿ ಚರ್ಚ್ ಎದುರು ಅಪರಿಚಿತ ವ್ಯಕ್ತಿಯೊಬ್ಬ ಪಿಸ್ತೂಲ್ನಿಂದ ಐವನ್ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ ಎನ್ನಲಾಗಿದೆ. ಗುಂಡೇಟಿನಿಂದ ತೀವ್ರ ರಕ್ತಸ್ರಾವಗೊಂಡ ಐವನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಆರೋಪಿ ಡೆರಿಕ್ ಕ್ರಾಸ್ತಾ ಪತ್ತೆಗಾಗಿ ಮೂರು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದ್ದು, ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.