ಕಾವೇರಿ ಹೋರಾಟಕ್ಕೆ ಕನ್ನಡ ಚಿತ್ರರಂಗ ಬೆಂಬಲ: ಕರ್ನಾಟಕದ ಹಿತ ಕಾಪಾಡುವಂತೆ ಸರ್ಕಾರಕ್ಕೆ ಆಗ್ರಹ

ಕಾವೇರಿ ವಿಚಾರದಲ್ಲಿ ಕನ್ನಡ ಚಿತ್ರರಂಗ ಕರ್ನಾಟಕದ ಪರವಾಗಿ ದೃಢವಾಗಿ ನಿಲ್ಲಲಿದೆ. ರಾಜ್ಯದ ನೆಲ, ಜಲ ಹಾಗೂ ಭಾಷೆಯ ಹಕ್ಕುಗಳನ್ನು ಕಾಪಾಡುವುದು ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ. ಈ ಹೋರಾಟಗಳಲ್ಲಿ ಕನ್ನಡ ಚಿತ್ರರಂಗ ಸದಾ ಮುಂಚೂಣಿಯಲ್ಲೇ ನಿಂತಿದೆ. ನಮ್ಮ ರೈತರ ಋಣ ನಮ್ಮ ಮೇಲಿದೆ.
KFCC president Jayamala
ಜಯಮಾಲಾ
Updated on

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಬಾರದು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದು, ಕರ್ನಾಟಕ ಹಿತ ರಕ್ಷಿಸುವಂತೆಒತ್ತಾಯಿಸಿದೆ.

ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಎಫ್‌ಸಿಸಿ ಅಧ್ಯಕ್ಷೆ ಜಯಮಾಲಾ ಅವರು, ರಾಜ್ಯದಲ್ಲಿ ಕುಡಿಯುವ ನೀರಿನ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ, ಮೊದಲು ಕರ್ನಾಟಕದ ಅಗತ್ಯಗಳನ್ನು ಪೂರೈಸುವತ್ತ ಸರ್ಕಾರ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.

ರೈತರ ಹಿತಾಸಕ್ತಿ ಕಾಪಾಡುವುದು ಸರ್ಕಾರದ ಮೊದಲ ಆದ್ಯತೆಯಾಗಬೇಕು. ವೈಜ್ಞಾನಿಕ ಅಧ್ಯಯನ ನಡೆಸದೆ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬಾರದು ಎಂದು ಹೇಳಿದರು.

ಕಾವೇರಿ ವಿಚಾರದಲ್ಲಿ ಕನ್ನಡ ಚಿತ್ರರಂಗ ಕರ್ನಾಟಕದ ಪರವಾಗಿ ದೃಢವಾಗಿ ನಿಲ್ಲಲಿದೆ. ರಾಜ್ಯದ ನೆಲ, ಜಲ ಹಾಗೂ ಭಾಷೆಯ ಹಕ್ಕುಗಳನ್ನು ಕಾಪಾಡುವುದು ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ. ಈ ಹೋರಾಟಗಳಲ್ಲಿ ಕನ್ನಡ ಚಿತ್ರರಂಗ ಸದಾ ಮುಂಚೂಣಿಯಲ್ಲೇ ನಿಂತಿದೆ. ನಮ್ಮ ರೈತರ ಋಣ ನಮ್ಮ ಮೇಲಿದೆ. ಅವರ ಪರವಾಗಿ ಧ್ವನಿ ಎತ್ತುವುದು ನಮ್ಮ ಕರ್ತವ್ಯ ಎಂದು ತಿಳಿಸಿದರು

KFCC president Jayamala
ಕಾವೇರಿ ವಿವಾದ: 'ಕರ್ನಾಟಕ ಬಂದ್' ಬಗ್ಗೆ ಚರ್ಚಿಸಲು ನಾಳೆ ಬೆಂಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳ ಸಭೆ!

ಕೆಎಫ್‌ಸಿಸಿ ಮಾಜಿ ಅಧ್ಯಕ್ಷ ಹಾಗೂ ಹೋರಾಟಗಾರ ಸಾ.ರಾ. ಗೋವಿಂದು ಅವರು ಮಾತನಾಡಿ, ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ) ನೀಡಿರುವ ನೀರು ಬಿಡುಗಡೆ ಆದೇಶವನ್ನು ಅವೈಜ್ಞಾನಿಕ ಎಂದು ಟೀಕಿಸಿದರು.

ದೆಹಲಿಯಿಂದ ತಜ್ಞರ ಸಮಿತಿಯನ್ನು ರಾಜ್ಯಕ್ಕೆ ಕಳುಹಿಸಿ, ಜಲಾಶಯಗಳಲ್ಲಿನ ನೀರಿನ ಮಟ್ಟ ಹಾಗೂ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿದ ನಂತರವೇ ನೀರು ಹಂಚಿಕೆ ಕುರಿತು ಯಾವುದೇ ನಿರ್ದೇಶನ ನೀಡಬೇಕು. ನೆಲದ ವಾಸ್ತವಾಂಶಗಳನ್ನು ಪರಿಗಣಿಸದೆ ಆದೇಶ ಹೊರಡಿಸುವುದು ಸರಿಯಲ್ಲ" ಎಂದು ಆಗ್ರಹಿಸಿದರು.

ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಮಾತನಾಡಿ, ಕರ್ನಾಟಕ ಚಲನಚಿತ್ರ ಕಲಾವಿದರ ಸಂಘ ಸೇರಿದಂತೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಎಲ್ಲಾ ಅಂಗಸಂಸ್ಥೆಗಳು ಮಂಡಳಿ ಕೈಗೊಳ್ಳುವ ಮುಂದಿನ ನಿರ್ಧಾರವನ್ನು ಬೆಂಬಲಿಸಲಿವೆ ಎಂದು ಹೇಳಿದರು.

ರಾಜ್ಯದ ಹಿತಾಸಕ್ತಿ, ರೈತರ ಬದುಕು ಹಾಗೂ ಕುಡಿಯುವ ನೀರಿನ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಕೆಎಫ್‌ಸಿಸಿ ಈ ವೇಳೆ ಮನವಿ ಮಾಡಿತು.

X
Kannada Prabha
www.kannadaprabha.com